Connect with us

ಅಂತರಂಗ

ಅರಿಮೆಯ ಅರಿವಿರಲಿ -60: ಮಾನಸ ಸರೋವರದಲ್ಲಿ ಶಿಶುವಿಹಾರ

Published

on

  • ಯೋಗೇಶ್ ಮಾಸ್ಟರ್

ಮಾನವ ಸಮಾಜವು ತನ್ನ ನೈಸರ್ಗಿಕವಾದ ಪಶುಪ್ರವೃತ್ತಿಯನ್ನು ತೊರೆದು ಸಂಘಜೀವಿಯಾಗಿ ಸಾಮುದಾಯಿಕವಾಗಿ ಬಾಳಿ ಬದುಕಲು ಕಂಡುಕೊಂಡ ಹಲವು ಮಾರ್ಗಗಳಲ್ಲಿ ಧರ್ಮವೂ ಒಂದು. ಮನುಷ್ಯ ತನ್ನೆಲ್ಲಾ ದುರ್ಗುಣ, ಗುಣದೋಷಗಳಿಂದ ಮುಕ್ತವಾಗಿ, ಪರಸ್ಪರ ಸಾಮರಸ್ಯದಿಂದ ಮೌಲ್ಯವೆಂದು, ಸದ್ಗುಣಗಳೆಂದು ಕರೆಯಲಾಗುವ ಒಪ್ಪಿತ ಗುಣಗಳನ್ನು ಅಳವಡಿಸಿಕೊಂಡು ಬದುಕಲು ಅದು ನೈತಿಕ ಚೌಕಟ್ಟನ್ನು ಕಟ್ಟಿಕೊಟ್ಟಿತು.

ಬೇರೆ ಬೇರೆ ಕಡೆಗಳಲ್ಲಿ ಅಲ್ಲಿನ ಪ್ರಾದೇಶಿಕ ಭಿನ್ನತೆಗಳಿಗೆ, ಸಾಂಸ್ಕೃತಿಕ ಹಿನ್ನೆಲೆಗಳಿಗೆ, ಸಾಮಾಜಿಕ ವ್ಯವಸ್ಥೆಗಳಿಗೆ, ಎದುರಿಸುತ್ತಿದ್ದಂತ ಸಮಸ್ಯೆಗಳಿಗೆ, ಎದೆಗೊಡಬೇಕಾಗಿದ್ದ ಸಂಘರ್ಷಗಳಿಗೆ ತಕ್ಕಂತೆ ಧರ್ಮಗಳು ರೂಪುಗೊಂಡವು. ಈ ಎಲ್ಲಾ ಭಿನ್ನತೆಯ ಹಿನ್ನೆಲೆಗಳನ್ನು ಹೊಂದಿದ್ದ ಧರ್ಮಗಳನ್ನು ಅನುಸರಿಸುವವರು ಆ ಪ್ರದೇಶದಲ್ಲಷ್ಟೇ ಅಲ್ಲದೇ ಇತರ ಕಡೆಗಳಿಗೂ ಕ್ರಮೇಣ ಚದುರಿದರು.

ಹಾಗಾಗಿ ಅವರ ಧಾರ್ಮಿಕತೆಯು ವಿಧಿಸಿದ ನೈತಿಕ ಚೌಕಟ್ಟುಗಳು ಭಿನ್ನ ಪ್ರದೇಶಗಳಿಗೆ ಒಂದಷ್ಟು ಒಗ್ಗುತ್ತಿದ್ದವು, ಮತ್ತೊಂದಷ್ಟು ಒಗ್ಗುತ್ತಿರಲಿಲ್ಲ. ಆದರೆ ಅವರೆಲ್ಲರೂ ಮೂಲಭೂತವಾಗಿ ಹೋಮೋ ಸೇಪಿಯನ್ಸ್ ತಳಿಯವರೇ ಆದ್ದರಿಂದ ಮೂಲಭೂತವಾಗಿ ಅನೇಕಾನೇಕ ವಿಷಯಗಳು ತಾಳೆಯಾಗುತ್ತವೆ. ರೂಢಿಗಳಲ್ಲಷ್ಟೇ ಬೇಧಗಳಿರುತ್ತವೆ.

ಆದರೆ ತಾವೇ ಮನುಷ್ಯರಾಗಿರುವ ಅಂಶವಾಗಲಿ, ತಮ್ಮ ಜೈವಿಕ ಸಂತಾನವನ್ನು ಮುಂದುವರಿಸುವ ಮಕ್ಕಳ ವಿಷಯವಾಗಲಿ, ಪರಸ್ಪರ ಗೌರವ, ಪ್ರೀತಿ, ದಯೆಯೇ ಮೊದಲಾದ ಅಮೂರ್ತ ಮೂಲಭೂತ ಪರಿಕಲ್ಪನೆಗಳಲ್ಲಾಗಲಿ ಅಂತಹ ವ್ಯತ್ಯಾಸವೇನೂ ಆಗುವುದಿಲ್ಲ. ಎಲ್ಲಾ ಧರ್ಮದ, ಸಂಸ್ಕೃತಿಗಳ ರೂಢಿಯಿರುವವರನ್ನು ವಿಜ್ಞಾನ, ತಂತ್ರಜ್ಞಾನ ಮತ್ತು ವೈದ್ಯಕೀಯ ಅಗತ್ಯಗಳು ಬೆಸೆಯುವಂತೆ ಮಾಡಿವೆ.

ವ್ಯಾಣಿಜ್ಯದಲ್ಲಿ, ವ್ಯಾವಹಾರಿಕವಾಗಿ ಮತ್ತು ರಾಜನೈತಿಕವಾಗಿ ಬೆರೆಯಲು ವಿಜ್ಞಾನ, ತಂತ್ರಜ್ಞಾನ ಮತ್ತು ವೈದ್ಯಕೀಯ ಕ್ಷೇತ್ರಗಳು ಕೊಂಡಿಗಳಾಗಿ ಕೆಲಸ ಮಾಡಿದರೂ ಮಾನುಷ ಸಂಬಂಧ ಮತ್ತು ಜೀವಪರ ಕಾಳಜಿಯು ಎಲ್ಲರಲ್ಲಿ ಸಾಮಾನ್ಯವಾಗಿಸಲು ಇರುವ ಒಂದು ಪ್ರತಿನಿಧಿಯೆಂದರೆ ಅದು ಮಗು.

ಶಿಶುಧರ್ಮ

ಮಗುವಿನ ಮಗುತನವು ಧರ್ಮಾತೀತವಾದದ್ದು. ಅದರ ಮೂಲಭೂತ ಅಗತ್ಯಗಳು ಸಾರ್ವತ್ರಿಕವಾದುದು. ಅದರ ಸಮಸ್ಯೆಗಳು ಸಾಮಾಜಿಕವಾದದ್ದು. ಹಾಗಾಗಿ, ಧರ್ಮದ ನೆಲೆಗಳಿಂದಲೂ ಮತ್ತು ಮಗುವಿನ ಮನೋವೈಜ್ಞಾನಿಕ ನೆಲೆಗಟ್ಟಿನಿಂದಲೂ ಸಮಾಜದ ಹಿರಿಯ ಸದಸ್ಯರು ಎಚ್ಚರಗೊಳ್ಳಬೇಕಿದೆ. ನಮ್ಮ ಯಾವುದೇ ಕಾರಣದ ಇಂದಿನ ಸಂಘರ್ಷಗಳು ಅವರಿಗೆ ನೆಮ್ಮದಿಯ ನಾಳೆ ನೀಡುವುದಿಲ್ಲವಲ್ಲ!

ಎಲ್ಲರೂ ನೆಮ್ಮದಿ ಮತ್ತು ಶಾಂತಿಯಿಂದ ಇರುವಂತಹ ಆದರ್ಶ ಸಮಾಜದ ಪರಿಕಲ್ಪನೆ ಬಹಳ ಹಳೆಯದು. ಹಲವಾರು ಸಾಮಾಜಿಕ ಸುಧಾರಕರು, ನಾಯಕರು ಮತ್ತು ನವಸಮಾಜದ ಹರಿಕಾರರು ನಾನಾ ಪ್ರಯೋಗಗಳನ್ನು ಮಾಡಿಕೊಂಡು ಬಂದಿದ್ದಾರೆ. ಸಾಮಾಜಿಕ ಸಂರಚನೆಯಲ್ಲಿ ಧಾರ್ಮಿಕವಾಗಿ, ಸಾಂಸ್ಕೃತಿಕವಾಗಿ, ರಾಜಕೀಯವಾಗಿ ಮತ್ತು ಸಾಮಾಜಿಕವಾಗಿ ಆಂದೋಲನಗಳು ನಡೆದಿವೆ ಮತ್ತು ಮಾದರಿಗಳನ್ನು ನಿರ್ಮಿಸಿವೆ. ಆದರೆ ಅವ್ಯಾವುವೂ ನಮ್ಮ ನೆಮ್ಮದಿಯ ಸಮಾಜವನ್ನು ಕಟ್ಟಿಕೊಡುವಲ್ಲಿ ಸಂಪೂರ್ಣ ಯಶಸ್ಸನ್ನು ಕಾಣಲಿಲ್ಲ.

ಈಗ ನಮ್ಮ ಈಗಿನ ಮತ್ತು ಮುಂದಿನ ಪೀಳಿಗೆಗಳು ನೆಮ್ಮದಿಯ ಬದುಕನ್ನು ಕಾಣಬೇಕಾದರೆ ಯಾವುದು ನಮ್ಮ ಸಮಾಜದ ಕೇಂದ್ರವಾಗಬೇಕು ಎಂಬ ಪ್ರಶ್ನೆಗೆ ಪ್ರಯೋಗಕ್ಕೆ ಸಾಧ್ಯತೆಗಳಿರುವ ಉತ್ತರವಿದೆ. ಅದು ಶಿಶು ಕೇಂದ್ರಿತ ಸಮಾಜ. ಶಿಶು ಕೇಂದ್ರಿತ ಸಮಾಜದ ಚಟುವಟಿಕೆಗಳು ಒಂದೊಂದು ಕುಟುಂಬವನ್ನೂ, ಒಟ್ಟಾರೆ ಸಮಾಜವನ್ನೂ ಮತ್ತು ಇಡೀ ರಾಷ್ಟ್ರವನ್ನು ನೆಮ್ಮದಿಯಿಂದಿಡಲು ಸಾಧ್ಯ. ನಮ್ಮ ಹಿರಿಯರ ಆದರ್ಶ ಸಮಾಜವನ್ನು ಕಟ್ಟುವ ಕನಸನ್ನು ಶಿಶುಪ್ರಧಾನ ಸಮಾಜ ಪ್ರಯೋಗವು ಒಂದಿಷ್ಟಾದರೂ ಯಶಸ್ವಿಗೊಳಿಸುವುದೇನೋ!

ಶಿಶುವರಳಿ ಹರೆಯವಾಗಿ

ಮಕ್ಕಳ ಮನಸ್ಸು ಮತ್ತು ಅವರ ಒಟ್ಟಾರೆ ಇರುವಿಕೆಯೇ ಬಹಳ ಸೂಕ್ಷ್ಮ ಮತ್ತು ಶಕ್ತಿಶಾಲಿಯಾದದ್ದು. ಪೋಷಕರಿಗೆ ಮತ್ತು ಶಿಕ್ಷಕರಿಗೆ ಮಕ್ಕಳ ಮನಸಿನ ಸೂಕ್ಷ್ಮತೆಯ ಮತ್ತು ಶಕ್ತಿಯ ಅರಿವಿದ್ದರೆ ಎಷ್ಟೋ ಅನಾಹುತಗಳನ್ನು ತಡೆಗಟ್ಟಬಹುದು. ಮಗುವಿನ ವ್ಯಕ್ತಿತ್ವದ ವಿಕಾಸಕ್ಕೆ ಮಹತ್ವಪೂರ್ಣವಾದ ಕಾಣ್ಕೆಗಳನ್ನು ಕೊಡಬಹುದು.

ಪೋಷಕರ ಮತ್ತು ಶಿಕ್ಷಕರ ತಪ್ಪು ನಿರ್ವಹಣೆಯಿಂದಾಗಿ ಮಕ್ಕಳು ಮುಂದೆ ವಯಸ್ಕರಾದಾಗ ಎಷ್ಟೋ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಅದರಲ್ಲೂ ಪೋಷಕರು ನಮ್ಮ ಮಗುವನ್ನು ಬೆಳೆಸುವಲ್ಲಿ ನಾವೆಲ್ಲಿ ಎಡವಿದ್ದೇವೆ ಎಂದು ತಿಳಿಯದೇ ತಳಮಳಿಸುವಂತಾಗುತ್ತದೆ.

ಮೊಳಕೆಯಲ್ಲಿಯೇ ಬೆಳೆಯುವ ಪೈರಿನ ಜೋಪಾನ ಮಾಡುವ ಜಾಗೃತಿ ನಮ್ಮ ಪೋಷಕರಿಗೆ ಬೇಕಿದೆ. ಮಕ್ಕಳ ಪೋಷಣೆ ಮಕ್ಕಳಾಟವಲ್ಲ. ಇಂದಿನ ಪುಟ್ಟ ಮತ್ತು ಅಸಹಾಯಕ ಮುದ್ದು ಮಕ್ಕಳು ನಮ್ಮ ಕುಟುಂಬ, ಸಮಾಜ ಮತ್ತು ರಾಷ್ಟ್ರ; ಈ ಎಲ್ಲದರ ಬಹುಮುಖ್ಯವಾದ ಭಾಗವಾಗಿರುತ್ತಾರೆ. ಯಾವುದೇ ವಯಸ್ಕರ ಸಾಧನೆ, ವೇದನೆ, ಸಂವೇದನೆಗಳ ಮೂಲ ಅವರ ಬಾಲ್ಯದಲ್ಲಿ ಪಡೆದ ಅನುಭವಗಳು, ಗ್ರಹಿಕೆಗಳು, ಪ್ರಭಾವಗಳಲ್ಲಿರುತ್ತವೆ.

ಅತ್ಲಾಗೆ ಮಕ್ಕಳೂ ಅಲ್ಲ, ಇತ್ಲಾಗೆ ದೊಡ್ಡವರೂ ಅಲ್ಲ
ಮಗುತನ ಜತನದ ಬಾಧ್ಯತೆ ಮಕ್ಕಳು ಬೆಳೆದಂತೆ ಅವರು ಹದಿಹರೆಯಕ್ಕೆ ಬಂದಾಗಲೂ ಮುಂದುವರೆದಿರುತ್ತದೆ. ಈಗ ಅವರಲ್ಲಿ ದೈಹಿಕ, ಮಾನಸಿಕ ಮತ್ತು ಹಾರ್ಮೋನುಗಳ ಬದಲಾವಣೆಯೂ ಆಗಿದ್ದು, ಬಾಲ್ಯದಲ್ಲಿ ಕಾಣದಿದ್ದ ಎಷ್ಟೋ ವಿಷಯಗಳು ಹದಿಹರೆಯದಲ್ಲಿ ತೋರುತ್ತಾರೆ. ಎಷ್ಟೋ ಮಾನಸಿಕ ಸಮಸ್ಯೆಗಳು ಬಾಲ್ಯದಲ್ಲೇ ಇದ್ದರೂ ಕೂಡ ಮಗುತನದ ಮಿತಿಯಲ್ಲಿ ಅದರ ಸ್ವರೂಪವು ಎಷ್ಟೋ ಬಾರಿ ಹೊರನೋಟದಲ್ಲಿ ಗುರುತಿಸಲಾರದಷ್ಟು ಸೂಕ್ಷ್ಮವಾಗಿರುತ್ತವೆ. ಹಿಂದೆಂದಿಗಿಂತಲೂ ಅವರಿಗೆ ಆಪ್ತತೆ ಮತ್ತು ಮುಕ್ತತೆಯ ಅವಶ್ಯಕತೆ ಇರುತ್ತದೆ.

ಹದಿಹರೆಯದವರ ಸಮಸ್ಯೆ ಎಂದರೆ ಅವರು ಯೌವನಾವಸ್ಥೆಗೆ ಸಂಪೂರ್ಣ ಪ್ರಬುದ್ಧರಾಗಿಯೂ ಇರುವುದಿಲ್ಲ, ಮಕ್ಕಳಾಗಿಯೂ ಉಳಿದಿರುವುದಿಲ್ಲ. ಸಣ್ಣವರೂ ಅಲ್ಲದ, ದೊಡ್ಡವರೂ ಅಲ್ಲದ ಶಾರೀರಿಕ ಸ್ಥಿತಿ ಮಾತ್ರವಲ್ಲದೇ ಮಾನಸಿಕ ಸ್ಥಿತಿಗಳನ್ನೂ ಕೂಡಾ ಹಾಗೆಯೇ ಹದವಾಗಿ ಮತ್ತು ಎಚ್ಚರಿಕೆಯಿಂದ ನಿಭಾಯಿಸಬೇಕಾಗುತ್ತದೆ.

ಹೊಸ ಕನಸುಗಳು, ಹೊಸ ಯೋಜನೆಗಳು ಮತ್ತು ಹೊಸ ಸಹವಾಸಗಳು ಅವರ ಎಷ್ಟೋ ಹಳೆಯ ಆಸೆಗಳನ್ನು ಅಥವಾ ಸುಪ್ತ ಬಯಕೆಗಳನ್ನು ನೆರವೇರಿಸಿಕೊಳ್ಳುವ ಸಾಧ್ಯತೆಗಳನ್ನು ಹುಡುಕಿಕೊಳ್ಳುವ ವಯಸ್ಸಿನಲ್ಲಿ ಕುಟುಂಬದವರು ಮತ್ತು ಸಮಾಜದ ಇತರ ಹಿರಿಯ ಸದಸ್ಯರು ಬಹಳ ಎಚ್ಚರಿಕೆಯಿಂದಲೂ ಮತ್ತು ಆಪ್ತವಾಗಿಯೂ ವರ್ತಿಸುವ ಅಗತ್ಯವಿರುತ್ತದೆ.

ಅವರೊಂದಿಗೆ ವರ್ತಿಸುವಾಗ, ಅವರತನದಲ್ಲಿ ಇಣುಕುವ ದೊಡ್ಡತನವನ್ನು ಮನ್ನಿಸುತ್ತಲೇ ಅವರು ಚಿಕ್ಕವರು ಎಂಬ ಅರಿವು ಇರಬೇಕು. ಹಾಗಾಗಿ ಅವರ ಕ್ರಿಯೆಗೆ ಪ್ರತಿಕ್ರಿಯೆ ನೀಡುವ ವಿಷಯದಲ್ಲಿ, ಅವರ ಹೊಸ ವರ್ತನೆಗೆ ನಮ್ಮ ಪ್ರತಿವರ್ತನೆಗಳನ್ನು ತೋರುವ ವಿಷಯದಲ್ಲಿ ಸಮತೋಲಿತ ಮನಸ್ಥಿತಿ ಹಿರಿಯರಿಗಿರಬೇಕು.

ಮಕ್ಕಳಾಗಿದ್ದಾಗ ಮುದ್ದಿಸುವ ಎಷ್ಟೋ ಹಿರಿಯರು ಅವರು ದೊಡ್ಡವರಾಗುತ್ತಾ ಬಂದಂತೆ ಮುದ್ದಿಸುವುದನ್ನು, ಅಪ್ಪುವುದನ್ನು, ಚುಂಬಿಸುವುದನ್ನು ನಿಲ್ಲಿಸಿಬಿಡುತ್ತಾರೆ.ಈಗಲೂ ನೀನೇನೂ ಮಗುವಾ ಮುದ್ದು ಮಾಡಲು? ಎಂಬ ಮಾತವರದು. ಆದರೆ ಮುದ್ದು ಮಾಡುವುದು ಮಕ್ಕಳಿಗೆ ಮಾತ್ರವೇ ಎಂಬ ಮಿಥ್ ಅನ್ನು ಸೃಷ್ಟಿಸಿದ್ದು ಯಾರೋ ಗೊತ್ತಿಲ್ಲ. ಮುದ್ದು ಮಾಡುವುದು, ಲಲ್ಲೆಗರೆಯುವುದು ಮನುಷ್ಯನಿಗೆ ಆಪ್ತತೆಯನ್ನು ನೀಡುವುದಲ್ಲದೇ ಮಾನಸಿಕವಾಗಿ ಮತ್ತು ಭಾವನಾತ್ಮಕವಾಗಿ ಭದ್ರತೆಯನ್ನು ಒದಗಿಸುತ್ತದೆ. ಅದು ಹದಿಹರೆಯದ ಮಕ್ಕಳಿಗೆ ಖಂಡಿತ ಬೇಕು.

ಯಾರೂ ಹುಟ್ಟಾ ಅಪರಾಧಿಗಳಲ್ಲ

ವಯಸ್ಕರ ವರ್ತನೆಗಳ ಸಮಸ್ಯೆ, ವೈವಾಹಿಕ ಜೀವನದಲ್ಲಿ ಕಾಣುವಂತಹ ಸಮಸ್ಯೆ, ಸಂಬಂಧಗಳಲ್ಲಿ ತೊಡಕುಗಳು, ಉದ್ಯೋಗ ಕ್ಷೇತ್ರದಲ್ಲಿ ಸಮಸ್ಯೆಗಳು, ಭ್ರಷ್ಟಾಚಾರ, ಕೊಲೆ, ಸುಲಿಗೆ ಮತ್ತು ಅತ್ಯಾಚಾರಗಳಂತಹ ಅಪರಾಧಗಳು, ಸಮಾಜ ವಿದ್ರೋಹಿ ಚಟುವಟಿಕೆಗಳು, ಗುಂಪು ಘರ್ಷಣೆ, ಭೂಗತದ ಪಾತಕ ಕೃತ್ಯಗಳು, ವಿಕೃತ ಮತ್ತು ವಿಲಕ್ಷಣ ವರ್ತನೆಗಳು; ಇಂತವೆಲ್ಲಾ ಒಮ್ಮಿಂದೊಮ್ಮೆಲೆ ತಲೆದೋರುವುದಲ್ಲ. ಬಾಲ್ಯದಲ್ಲಿ ಗುರುತಿಸದೇ ಹೋದಂತಹ ಶಿಶುಮನದ ಮಹಾಮಾರಿಗಳು ವಯಸ್ಕರಾದಾಗ ತಮ್ಮ ರುದ್ರ ಪ್ರತಾಪವನ್ನು ತೋರುವಂತಹುದು.

ಎಳೆವಯದಲ್ಲೇ ಮಾನಸಿಕ ಸಮಸ್ಯೆಗಳ ಮೂಲವನ್ನು ಗುರುತಿಸಲು ಸಾಧ್ಯ. ಪೋಷಕರು ಮತ್ತು ಶಿಕ್ಷಕರು ಜಾಗೃತರಾದರೆ ನಾಳಿನ ಎಷ್ಟೋ ಸಮಸ್ಯೆಗಳನ್ನು ಇಂದಿಗೇ ಕೊನೆಗಾಣಿಸಬಹುದು. ಮಕ್ಕಳು ಮುಗ್ಧರು ಹಟ ಮಾಡುತ್ತಾರೆ, ಸುಳ್ಳು ಹೇಳುತ್ತಾರೆ, ಹೈಪರ್ ಆ್ಯಕ್ಟೀವ್ ಇದ್ದಾರೆ, ಹಿಡಿಯಲಾಗುವುದಿಲ್ಲ; ಆದರೆ ದೊಡ್ಡವರಾಗುತ್ತಾ ಸರಿ ಹೋಗುತ್ತಾರೆ ಎಂಬುದು ಭ್ರಮೆ. ಗಿಡವಾಗಿ ಬಗ್ಗದ್ದು ಮರವಾದಾಗ ಬಗ್ಗದು. ಮಾನಸಿಕ ಸಮಸ್ಯೆಗಳನ್ನು ಗುರುತಿಸಬೇಕು. ಅದರಿಂದ ಮಕ್ಕಳನ್ನು ಪಾರು ಮಾಡಬೇಕು. ಅವರದನ್ನು ಗುರುತಿಸುವಾಗ ನಮ್ಮದೂ ನಮಗೆ ಗುರುತು ಹತ್ತುತ್ತದೆ. ಹೂವೂ ನಾರೂ ಎರಡೂ ಸ್ವರ್ಗ ಕಾಣಲಿ.

ಭೂತಬಾಧೆ ಇರದ ಮಕ್ಕಳು

ಶಿಶುವೆಂಬ ಚಿಗುರುತ್ತಿರುವ ಸಸಿಗೆ ಭೂತದ ಬಾಧೆಯಿಲ್ಲ ಭವಿಷ್ಯದ ಭ್ರಮೆಯಿರುವುದಿಲ್ಲ. ಅದು ಸದಾ ಹಿತವನ್ನು ಮತ್ತು ಮುದವನ್ನು ಬಯಸುತ್ತಿರುತ್ತದೆ. ತನಗೆ ದೊರಕುವ ಆಪ್ತತೆ ಮತ್ತು ಸಂತೋಷದ ಆಧಾರದಲ್ಲಿ ತಾನಿರುವ ಪರಿಸರವನ್ನು ಮತ್ತು ತನ್ನೊಡನೆ ಇರುವ ಜನರನ್ನು ಅಳೆಯುತ್ತದೆ. ಸಾಮಾನ್ಯವಾಗಿ ಅದರ ಮನಸ್ಸಿನಲ್ಲಿ ಖಿನ್ನತೆಗಳಿರುವುದಿಲ್ಲ, ಹೃದಯದಲ್ಲಿ ಭಾರವಿರುವುದಿಲ್ಲ. ಹಾಗಾಗಿ ಅದು ಹಗುರ ಹಾಗೂ ಮುಕ್ತ. ಅದರ ಮನಸ್ಸನ್ನು ಖಿನ್ನತೆಗೆ ದೂಡದೇ, ಹೃದಯಕ್ಕೆ ಭಾರವೆನಿಸುವಂತೆ ಮಾಡದೇ ಹಿರಿಯರು ಮಗುವಿರುವ ವಾತಾವರಣವನ್ನು ರೂಪಿಸಬೇಕು.

ಆ ವಾತಾವರಣದಲ್ಲಿ ಅವರು ವಿಹರಿಸಬೇಕು. ತಾವು ತಮ್ಮ ವಿಚಾರ, ಧೋರಣೆ, ದೃಷ್ಟಿ, ನಿರೀಕ್ಷೆಗಳನ್ನು ಅವರ ಮೇಲೆ ಹೇರಿ ಅವರ ಮನಸ್ಸನ್ನು, ಹೃದಯವನ್ನು ಭಾರಗೊಳಿಸದಿರುವಂತಹ ಎಚ್ಚರಿಕೆಯನ್ನು ಹಿರಿಯರಾದವರು ವಹಿಸಲೇ ಬೇಕು. ಶಿಶುವು ಎಲ್ಲೆಲ್ಲಿ ಇರುವುದೋ ಅಲ್ಲೆಲ್ಲಾ ಅದು ವಿಹರಿಸುವಂತಾದರೆ ಆ ವಾತಾವರಣದಲ್ಲಿರುವ ಹಿರಿಯಲೆಲ್ಲರೂ ತಮ್ಮ ಜೈವಿಕ ಮತ್ತು ಭಾವನಾತ್ಮಕ ಚೈತನ್ಯವನ್ನು ಪಡೆದುಕೊಳ್ಳುವರು. ಅವರ ಮಾನಸಿಕ ಆರೋಗ್ಯವು ವೃದ್ಧಿಸುವುದು.

ಹೊರತಾಗಿ ಹಾರಾಡಬಹುದಾದ ಹಕ್ಕಿಯ ರೆಕ್ಕೆಗಳನ್ನು ಕಟ್ಟಿ ಬಂಧಿಸಿಟ್ಟರೆ ಅದರ ಬಂಧನದ ಆಕ್ರಂದನ ಇಡೀ ವಾತಾವರಣವನ್ನು ಸೂತಕದ ಗಾಢತೆಗೆ ಒಳಮಾಡುತ್ತದೆ. ಮಕ್ಕಳು ಕಲಿಯುವ ಎಡೆಯಲ್ಲಾಗಲಿ, ನಲಿಯುವ ಕಡೆಯಾಗಲಿ, ನುಡಿಯುವಲ್ಲಿ, ನಡೆಯುವಲ್ಲಿ, ಕಲಿಯುವಲ್ಲಿ, ಬೆಳೆಯುವಲ್ಲಿ ಅವರು ವಿಹರಿಸುವಂತಹ ಶಿಶುಸ್ನೇಹಿ ಪರಿಸರವಿದ್ದಲ್ಲಿ ವರ್ತಮಾನ ಮತ್ತು ಭವಿಷ್ಯದ ಸಂಗತಿಗಳು ಪ್ರಫುಲ್ಲವಾಗಿರುತ್ತವೆ.

ಮಕ್ಕಳಿರುವ ಮನೆ, ಕಲಿಯುವ ಶಾಲೆ, ಆಡುವ ಅಂಗಳ ಎಲ್ಲವೂ ಶಿಶುವಿಹಾರವಾಗಿರಬೇಕು. ಮಕ್ಕಳು ವಿಹರಿಸುವ ಯಾವುದೇ ಜಾಗಗಳಲ್ಲಿ ಹಿರಿಯರು ಒತ್ತಾಸೆ ನೀಡುವ ಅಂಶಗಳೇ ಹೊರತು, ಮಕ್ಕಳ ಇರುವಿಕೆಯೊಂದು ಹಿರಿಯರಿರುವ ಎಡೆಯ ಸಣ್ಣ ಪ್ರಮಾಣದ ಭಾಗವಲ್ಲ.

ಶಿಶುತನದ ಮುಗ್ಧತೆಯ ಸ್ವಭಾವ ವ್ಯಕ್ತಿಯ ಮನದ ಸರಳತೆಯಾದರೆ ಆತನೂ ಕೂಡಾ ಶಿಶುವಿನಂತೆ ಈ ಲೋಕದಲ್ಲಿ ನಲಿಯಬಲ್ಲ. ತನ್ನದೇ ಆದ ಮಾನಸ ಸರೋವರದಲ್ಲಿ ವಿಹರಿಸಬಲ್ಲ. ಶಿಶುವೊಂದು ನಿರ್ಭಯವಾಗಿ, ಸುಖವಾಗಿ, ಹಿತವಾಗಿ, ಆರೋಗ್ಯವಾಗಿ, ಆನಂದವಾಗಿ ವಿಹರಿಸುವಂತಹ ಎಡೆಯಾಗಲಿ ಈ ಜಗ. ಆ ಕಂದಮ್ಮಗಳ ಆನಂದದ ಕಾರುಣ್ಯದಲ್ಲಿ ಹಿರಿಯರೆಲ್ಲರಿಗೂ ನೆಮ್ಮದಿಯಾಗಲಿ. ಲೋಕವೆಲ್ಲವೂ ಹಿತವಾಗಿರಲಿ.

(ಮುಗಿಯಿತು)

ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂತರಂಗ

ಮರೆಯಾದ ಅಪೂರ್ವ ಚಿತ್ರಕಲಾ ಪ್ರತಿಭೆ ‘ಶೋಭಾ ಕರಣಿಕ್’

Published

on

ಶೋಭಾ ಕರಣಿಕ್
  • ಡಾ.ಎನ್.ಕೆ.ಪದ್ಮನಾಭ, ಸಹಾಯಕ ಪ್ರಾಧ್ಯಾಪಕರು, ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ,ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರ,ಉಜಿರೆ

ವರು ಬಿಡಿಸುತ್ತಿದ್ದ ರೇಖೆಗಳು ನಮ್ಮ ದೇಶೀ ಸಂಸ್ಕೃತಿಯ ವಕ್ತಾರಿಕೆಯ ಪಾತ್ರ ನಿರ್ವಹಿಸುತ್ತಿದ್ದವು. ಕನ್ನಡದ್ದೇ ಆದ ಕಲಾತ್ಮಕ ಪರಂಪರೆಯನ್ನು ಸೂಕ್ಷ್ಮವಾಗಿ ಗ್ರಹಿಸಿದ್ದ ಅವರ ಚಿತ್ರಗಳು ಜೀವಂತಿಕೆಯ ಗುಣಲಕ್ಷಣದೊಂದಿಗೆ ಕಂಗೊಳಿಸುತ್ತಿದ್ದವು.

ಸಾಂಪ್ರದಾಯಿಕ ಚಿತ್ರಶೈಲಿಯನ್ನು ಆಧುನಿಕ ಅಗತ್ಯಗಳಿಗೆ ತಕ್ಕಂತೆ ಮಣಿಸಿ ಪರಂಪರೆಯೊಳಗೇ ಅಡಗಿದ್ದ ಮೌಲಿಕ ಮಾದರಿಗಳನ್ನು ಮನಗಾಣಿಸುವ ಶ್ರದ್ಧೆಯೊಂದಿಗೇ ಅವರು ಚಿತ್ರವಿನ್ಯಾಸ ರೂಪಿಸುತ್ತಿದ್ದರು. ಇನ್ಸ್ಟಾಗ್ರಾಮ್, ಫೇಸ್‌ಬುಕ್ ಮತ್ತಿತರ ಮಾಧ್ಯಮಗಳ ಮೂಲಕ ತಮ್ಮ ಚಿತ್ರಗಳನ್ನು ಕಾಣಿಸುತ್ತಿದ್ದರು. ಪರಂಪರೆ ಮತ್ತು ವರ್ತಮಾನವನ್ನು ಬೆಸೆದು ಹೊಸ ಬಗೆಯ ಚಿತ್ರಪ್ರಯೋಗಗಳನ್ನು ನಡೆಸುವ ಹುಮ್ಮಸ್ಸಿನೊಂದಿಗೆ ಚಿತ್ರಕಲಾಯಾನ ಮುಂದುವರೆಸಿದ್ದರು. ಅವರ ಹೆಸರು ಶೋಭಾ ಕರಣಿಕ್.

ಇತ್ತೀಚೆಗಷ್ಟೇ ಅವರ ಚಿತ್ರಕಲಾಯಾನ ನಿಂತಿತು. ಅವರ ನಿಧನವು ವಿನೂತನವಾದ ಪ್ರಯೋಗಶೀಲ ಚಿತ್ರಕಲಾ ಸಾಧ್ಯತೆಗಳನ್ನು ತಡೆದು ನಿಲ್ಲಿಸಿತು. ಪುರಾಣದ ಕಥನ ಪ್ರಸಂಗಗಳಲ್ಲಿ ಉಲ್ಲೇಖಿತ ದೇವರು-ದೇವತೆಗಳ ಅಸ್ಮಿತೆ ಮತ್ತು ದೇಸೀ ಸಂಸ್ಕೃತಿಯನ್ನು ಬಿಂಬಿಸುವ ವಿನ್ಯಾಸಗಳನ್ನು ಸಮನ್ವಯಗೊಳಿಸಿ ಚಿತ್ರಕಲೆಗೆ ಹೊಸ ಆಯಾಮ ತಂದುಕೊಟ್ಟ ಪ್ರತಿಭೆಯಾಗಿ ಶೋಭಾ ಕರಣಿಕ್ ಅವರದ್ದು ವಿಶೇಷ ವ್ಯಕ್ತಿತ್ವವಾಗಿತ್ತು. ಮ್ಯೂರಲ್ ಪೇಂಟಿಂಗ್‌ನಲ್ಲಿ ಅವರಿಗಿದ್ದ ಪರಿಣತಿ, ಉತ್ತರ ಕನ್ನಡದ ಕಾವಿ ಕಲೆಯ ಕುರಿತಾದ ವಿಸ್ತೃತ ಜ್ಞಾನವು ಚಿತ್ರಕಲೆಯನ್ನು ಉನ್ನತೀಕರಿಸುವುದಕ್ಕೆ ಅವರಿಗೆ ನೆರವಾಗಿತ್ತು.

ಕಲೆಯ ಜೊತೆಗಿನ ಅನುಸಂಧಾನದ ಕ್ಷಣಗಳು ಅಪೂರ್ವ. ಒಂದು ನಿರ್ದಿಷ್ಟ ನಿರ್ಣಾಯಕ ಸಂದರ್ಭ, ಸಮಯದಲ್ಲಿ ಕಲೆಯೊಂದು ವ್ಯಕ್ತಿತ್ವವನ್ನು ಪ್ರಭಾವಿಸಿ ಸೃಜನಶೀಲತೆಯ ಹಸಿವನ್ನು ನೆಲೆಗೊಳಿಸುವುದಕ್ಕೆ ಪ್ರೇರಣೆಯಾಗುತ್ತದೆ. ಕಲೆಯ ಪ್ರಭಾವ ಎರಡು ಬಗೆಯದ್ದು. ಸಹೃದಯರನ್ನು ತನ್ನ ಕಲಾತ್ಮಕ ಮಾದರಿಗಳಿಂದ ಸೆಳೆದು ಅವರೊಳಗೆ ವಿಶೇಷ ಅನುಭೂತಿ ಧಾರೆ ಎರೆಯುವಂಥದ್ದು ಒಂದು ಬಗೆಯಾದರೆ ಹೀಗೆ ಸೆಳೆದುಕೊಂಡು ಮತ್ತೆ ಮತ್ತೆ ಪ್ರಭಾವಿಸುತ್ತಾ ಸಹೃದಯರನ್ನೇ ಕಲಾವಿದರನ್ನಾಗಿಸುವ ಸಾಧ್ಯತೆ ಮತ್ತೊಂದು ತೆರನಾದದ್ದು.

ಈ ಕಾರಣಕ್ಕಾಗಿಯೇ ಕಲಾತ್ಮಕ ಸಂಭವನೀಯತೆಯು ಅನನ್ಯವೆನ್ನಿಸಿಕೊಂಡಿದೆ. ಇಂಥ ಅನನ್ಯತೆಯೊಂದಿಗೇ ಶೋಭಾ ಕರಣಿಕ್ ಗುರುತಿಸಿಕೊಂಡಿದ್ದರು. ಅವರು ಓದಿದ್ದು ತಾಂತ್ರಿಕ ವಿಜ್ಞಾನ. ಆದರೆ, ಅವರ ನಿಜದ ಪ್ರತಿಭೆ ಅಭಿವ್ಯಕ್ತವಾದದ್ದು ಚಿತ್ರಕಲೆಯ ಮೂಲಕ.

ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದ ಪರಿಸರದಲ್ಲಿ ಬೆಳೆದ ಶೋಭಾ ಕರಣಿಕ್ ಮೊದಲಿನಿಂದಲೂ ದೇಶೀ ಕಲೆಯ ಕುರಿತು ವಿಶೇಷ ಆಸಕ್ತಿಯನ್ನು ಬೆಳೆಸಿಕೊಂಡು ಬಂದಿದ್ದರು. ಹೈಸ್ಕೂಲ್ ಓದುತ್ತಿರುವಾಗಲೇ ಕಾವಿಕಲೆಯ ವಿನ್ಯಾಸ ಅವರನ್ನು ಸೆಳೆದಿತ್ತು. ಇವುಗಳನ್ನು ಮತ್ತೆ ಮತ್ತೆ ನೋಡುತ್ತಾ ಹೋದಂತೆಲ್ಲಾ ಕಾವಿ ಕಲೆಯ ಕುರಿತ ಆಕರ್ಷಣೆ ಕಲಿಕೆಯ ಹಂಬಲವಾಗಿ ಮಾರ್ಪಟ್ಟಿತು. ಉತ್ತರ ಕನ್ನಡದ ಟೆಂಪಲ್ ರ‍್ಟ್ ಪ್ರಕಾರದ ಭಾಗವಾಗಿ ಕಾವಿ ಕಲೆಯನ್ನು ಪರಿಚಯಿಸುವ ದೃಷ್ಟಿಯಿಂದ ಅವರು ರಚಿಸಿದ್ದ ತರಹೇವಾರಿ ವಿನ್ಯಾಸಗಳು ವಿವಿಧ ಚಿತ್ರಕಲಾ ಪ್ರದರ್ಶನ ಕಾರ್ಯಕ್ರಮಗಳಲ್ಲಿ ಗಮನ ಸೆಳೆದಿದ್ದವು.

ಕಾವಿ ಕಲೆಯೂ ಸೇರಿದಂತೆ ನಮ್ಮ ಸಾಂಪ್ರದಾಯಿಕ ಕಲೆಗಳು ಈ ಹಿಂದಿನ ಕಾಲದ ತಲೆಮಾರನ್ನಷ್ಟೇ ಪ್ರಭಾವಿಸಿದ್ದಲ್ಲದೇ ನಂತರದ ಹೊಸ ಪೀಳಿಗೆಯನ್ನೂ ಆಕರ್ಷಿಸುವ ಗುಣ ಹೊಂದಿವೆ. ಮೂಲ ಅಂತಃಸತ್ವಕ್ಕೆ ಧಕ್ಕೆಯೊದಗದ ಹಾಗೆ ಹೊಸ ಕಾಲದ ಅಗತ್ಯಗಳಿಗೆ ಅನುಗುಣವಾಗಿ ಈ ಸಾಂಪ್ರದಾಯಿಕ ಚಿತ್ರಕಲಾ ವಿನ್ಯಾಸಗಳನ್ನು ಮರುರೂಪಿಸಬಹುದು. ಹೊಸ ಕಾಲದಲ್ಲಿ ಅವುಗಳ ಮಹತ್ವವನ್ನು ಮನಗಾಣಿಸಬಹುದು ಎಂಬುದು ಅವರ ಆಶಯವಾಗಿತ್ತು.

ಕಲೆಯೊಂದು ಒಂದು ಕಾಲದಿಂದ ಮತ್ತೊಂದು ಕಾಲಕ್ಕೆ ದಾಟಿಕೊಳ್ಳುವಾಗ ಪಲ್ಲಟಗಳು ಸಹಜ. ಈ ಪಲ್ಲಟಗಳನ್ನು ದೃಷ್ಟಿಯಲ್ಲಿರಿಸಿಕೊಂಡು ಇಂತಹ ಕಲೆಗಳಿಗೆ ಹೊಸಕಾಲದಲ್ಲೂ ಜೀವಂತಿಕೆಯನ್ನು ತಂದುಕೊಡುವ ಪ್ರಯತ್ನದ ಅಗತ್ಯವನ್ನು ಮನಗಾಣಿಸುವುದಕ್ಕಾಗಿಯೇ ಶೋಭಾ ಕರಣಿಕ್ ಅವರು ಚಿತ್ರಕಲಾ ರಚನೆಯ ವೈವಿಧ್ಯಮಯ ಪ್ರಯೋಗಗಳಲ್ಲಿ ತೊಡಗಿಸಿಕೊಂಡಿದ್ದರು.

ಅವರ ನಿಧನದಿಂದ ಈ ಪ್ರಯೋಗಶೀಲ ಹೆಜ್ಜೆಗಳು ನಿಂತಂತಾಗಿವೆ. ಆದರೆ, ಅವರು ಪರಂಪರೆ ಮತ್ತು ವರ್ತಮಾನವನ್ನು ಸಮನ್ವಯಗೊಳಿಸಿ ಸಾಬೀತುಪಡಿಸಿದ ಅಪೂರ್ವ ಚಿತ್ರಕಲಾ ಪ್ರಯೋಗಶೀಲತೆಯ ಜೀವಂತಿಕೆ ಹೊಸ ಪೀಳಿಗೆಗೆ ಸದಾ ಸ್ಫೂರ್ತಿಯ ಸೆಲೆಯಾಗಿರುತ್ತದೆ. ಅವರ ಹೆಸರಿನ ಇನಸ್ಟಾಗ್ರಾಂನಲ್ಲಿ ಕಾಣಿಸಿಕೊಂಡಿರುವ ಚಿತ್ರಗಳು ಇಂಥ ಸ್ಫೂರ್ತಿಯ ಪ್ರಭೆಯನ್ನು ದಾಟಿಸುತ್ತಿವೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಅಂತರಂಗ

ಹೊಸತನದ ಹೊಸ್ತಿಲಲ್ಲಿ..!

Published

on

ಬರಹ : ಮೀನಾಕ್ಷಿ. ಬಿ
  • ಮೀನಾಕ್ಷಿ .ಬಿ, ಎಂ. ಎ ವಿದ್ಯಾರ್ಥಿನಿ, ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ, ದಾವಣಗೆರೆ ವಿಶ್ವವಿದ್ಯಾಲಯ

ಹೊಸವರ್ಷ ವೆಂಬುದು ಪ್ರತಿಯೊಬ್ಬರ ಬಾಳಲ್ಲಿ ವರ್ಷಕ್ಕೊಮ್ಮೆ ಬರುವ ಹೊಸದಿನಗಳ ಆಗಮನ ಯಾಕೆಂದರೆ ಹೊಸತನವನ್ನು ತರುತ್ತಾ ಇರುವ ಹೊಸವರ್ಷ ಕೂಡ ಒಂದು ಜೀವನದ ಭರವಸೆ, ನಿರೀಕ್ಷೆ ಕನಸುಗಳ ಬಂಡಿಯ ಮೇಲೆ ಸಾಗುವ ಪ್ರಯಾಣ ನಮ್ಮ ಜೀವನ.

ವ್ಯಕ್ತಿಯ ನಂಬಿಕೆಯ ಆಧಾರದ ಮೇಲೆಯೇ ಜೀವನ ಸಾಗುಸುತ್ತಿರುವುದು.ಯಾಕೆಂದರೆ ಪ್ರತಿಯೊಬ್ಬ ವ್ಯಕ್ತಿಯ ಜೀವನದಲ್ಲಿಯೂ ಕೂಡ ಕಷ್ಟ -ಸುಖ ದುಃಖದ ಸಂಗತಿಗಳು ಇದ್ದೆ ಇರುತ್ತದೆ. ಕೆಲವೊಂದು ಬಾರಿ ಹತಾಶೆಯನ್ನು ಹೊಂದಿ ಜೀವನದಲ್ಲಿ ಜಿಗುಪ್ಸೆ ಒಂದು ಕೆಟ್ಟ ನಿರ್ಧಾರಕ್ಕೆ ಮನಸ್ಸು ದಾರಿ ಮಾಡಿಕೊಡುತ್ತದೆ. ಹಾಗೆಯೇ ಕಷ್ಟ ಇದ್ದಲ್ಲಿ ಸುಖವಿರುವುದುಂಟು ಅನ್ನುವ ಹಾಗೇ ಇವತ್ತಲ್ಲ ನಾಳೆ ಒಳ್ಳೆಯ ದಿನಗಳು ನಮ್ಮ ಜೀವನದಲ್ಲಿ ಬರಬಹುದೆಂಬ ಭರವಸೆ,ಆತ್ಮವಿಶ್ವಾಸವನ್ನು ಇಟ್ಟುಕೊಂಡು ಜೀವನ ನಡೆಸುತ್ತಲೇ ಇದ್ದೇವೆ.

ಈ ವರ್ಷ ಒಳ್ಳೆಯದಾಗಿಲ್ಲ ಅಂದರೆ ಏನು ಮುಂದಿನ ವರ್ಷ ಆದರೂ ನನ್ನ ಬದುಕು ಬದಲಾಗಬಹುದು ಎಂಬ ಹೊಸತನವನ್ನು ನಮ್ಮಲ್ಲಿ ಭರವಸೆ,ನಂಬಿಕೆಯ ಬೇರಿನೊಂದಿಗೆ ಬೆರೆಸಿಕೊಂಡು ಬದುಕಬೇಕು.ನಾಳೆಯ ದಿನಗಳ ಮೇಲಿನ ಅನಿರೀಕ್ಷಿತ ತೀರಿವಿನಿಂದಾಗುವ ಬದುಕಿನಲ್ಲಾಗುವ ಬದಲಾವಣೆ ಹೊಸತನದ ಚಾಪನ್ನು ಮೂಡಿಸುತ್ತದೆ.
ಎಂಥ ಹತಾಶ ಮನಸ್ಥಿತಿಯವರಲ್ಲೂ ಹೊಸವರ್ಷ ಭರವಸೆಯ ಅಭಯ ಹಸ್ತವನ್ನು ಚಾಚುತ್ತದೆ. ಅದೆಲ್ಲಿಂದಲೇ ಆತ್ಮ ವಿಶ್ವಾಸದ ಬೆಳಕಿನ ಕಿಡಿಯೊಂದು ಕಾಣಿಸಿಕೊಳ್ಳುತ್ತದೆ.

ಹೊಸವರ್ಷವೆಂಬುದು ಕೇವಲ ಸಂಭ್ರಮದ ಕಾಲ ಮಾತ್ರವಲ್ಲ. ಕಳೆದ ದಿನಗಳತ್ತ ಹಿಂತಿರುಗಿ ನೋಡುವ ಸಮಯ ಕೂಡ ಹಿಂದಿನ ದಿನಗಳ ಪುಟಗಳನ್ನು ತೆಗೆದು ನೋಡಿದರೆ. ಉತ್ಸಾಹದ ಗಳಿಗೆಗಳು ಮುಂದಿನ ಕೆಲಸಗಳಿಗೆ ಚೈತನ್ಯ, ಉತ್ಸಾಹ ನೀಡಬಲ್ಲದು.ನಮ್ಮ ದಿಕ್ಕಿಲ್ಲದ ದಾರಿಗೆ ಖಚಿತ ದಿಕ್ಕು ದಾರಿಯನ್ನು ತೋರಬಲ್ಲದು.

ಜೀವನದ ಪ್ರಯಾಣಕ್ಕೆ ಒಂದು ನಿಲ್ದಾಣವಾಗಿದೆ. ನಾವು ಕಾಣುವ ಕನಸಗಳು ಕನಸಾಗಿಯೇ ಉಳಿದಿದೆ ಯಾಕೆಂದರೆ ನಮ್ಮಲ್ಲಿನ ಬೇಜವಾಬ್ದಾರಿ, ನಿರ್ಲಕ್ಷತನ ಆಮೇಲೆ ಮಾಡಿದರೆ ಆಯ್ತು ಅನ್ನೋ ಮನೋಭಾವನೆ ಯಾವುದರ ಬಗ್ಗೆಯೂ ಆಸಕ್ತಿ ಕೊಡದೆ ಇರೋದು ಎಲ್ಲವು ನಮ್ಮ ಕನಸಿನ ಜೀವನ ರೂಪಿಸಿಕೊಳ್ಳುವಲ್ಲಿ ಸಫಲರಾಗದೆ ಉಳಿಯಲು ಕಾರಣ.

ಮೊದಲು ಆತ್ಮವಿಶ್ವಾಸ ಬೇಕು ನಾನು ಈ ಕೆಲಸವನ್ನು ಮಾಡುವೆ ಎಂಬ ಒಂದು ನಿರ್ಧಿಷ್ಟ ಗುರಿ ಇರಬೇಕು ಅಂಗಿದ್ರೆ ಅಷ್ಟೇ ಜೀವನದ ಪಯಣದ ಹಾದಿಯಲ್ಲಿ ಯಶಸ್ಸನ್ನು ಕಾಣಲು ಸಾಧ್ಯ ಇಲ್ಲವಾದಲ್ಲಿ ಸೋಲನ್ನು ಅನುಭವಿಸುವ ಪರಿಸ್ಥಿತಿ ಎದುರಾಗುತ್ತದೆ. ಮುಂದಿನ ದಿನಗಳ ಆಗಮನದೊಂದಿಗೆ ನಾವು ಕಂಡ ಕನಸನ್ನು ಈಡೇರಿಸಿಕೊಳ್ಳುವ ಸತತ ಪ್ರಯತ್ನದೊಂದಿಗೆ ಬರುವ ದಿನವನ್ನು ಸ್ವಾಗತಿಸಿಕೊಳ್ಳೋಣ.
ಎಲ್ಲರ ಬಾಳಲಿ ಹರುಷ ,ಸಂತೋಷ ಮನೆಮಾಡಲಿ ಎಂದು ಆಶಿಸುತ್ತಾ ಎಲ್ಲರಿಗೂ ಹೊಸವರ್ಷದ ಶುಭಾಶಯಗಳು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಅಂತರಂಗ

ಕಾಮರೂಪದ ಪ್ರಭಾಕರ

Published

on

  • ಪ್ರೊ.ರಹಮತ್ ತರೀಕೆರೆ

ನಾನು ಕೋಲಾರಕ್ಕೆ ಹೋದಾಗೆಲ್ಲ ಎರಡು ಜಾಗಗಳಿಗೆ ತಪ್ಪದೆ ಭೇಟಿ ಕೊಡುತ್ತೇನೆ. ಒಂದು-ಕೆ.ರಾಮಯ್ಯ ಮತ್ತವರ ಸಂಗಾತಿಗಳು ಸೇರಿ ತೇರುಹಳ್ಳಿ ಬೆಟ್ಟದ ಮೇಲೆ ಕಟ್ಟಿರುವ `ಆದಿಮ’ಕ್ಕೆ; ಇನ್ನೊಂದು-`ಕಾಮರೂಪಿ’ ಎಂಬ ಹೆಸರಲ್ಲಿ ಬರೆಯುತ್ತಿದ್ದ ಕನ್ನಡ ಲೇಖಕ ಡಾ. ಎಂ.ಎಸ್. ಪ್ರಭಾಕರ ಅವರಿರುವ ಕಠಾರಿಪಾಳ್ಯದ ಮನೆಗೆ. 50ರ ದಶಕದ ಕೊನೆಯಲ್ಲಿ ಕರ್ನಾಟಕ ಬಿಟ್ಟುಹೋದ ಪ್ರಭಾಕರ, ‘ಹಿಂದೂ’ ಪತ್ರಿಕೆಯ ವರದಿಗಾರರಾಗಿ ಆಫ್ರಿಕಾ ಅಮೇರಿಕ ಬಾಂಗ್ಲಾದೇಶ ಈಶಾನ್ಯ ಭಾರತವನ್ನೆಲ್ಲ ಅಲೆದಾಡಿ, ಕಡೆಗೆ ಕಾಮರೂಪದಲ್ಲಿ (ಅಸ್ಸಾಮಿನ ಪುರಾತನ ಹೆಸರಿದು) ನೆಲೆಸಿಬಿಟ್ಟರು.

`ಕಾಮರೂಪ’ ಶಬ್ದಕ್ಕೆ ಬಯಸಿದ ರೂಪಧಾರಣೆ ಮಾಡುವ ಮಾಯಾವಿ ವಿದ್ಯೆ ಎಂಬರ್ಥವೂ ಇದೆ. ಎಂಬತ್ತರ ಪ್ರಾಯದಲ್ಲಿ ಕರ್ನಾಟಕಕ್ಕೆ ಮರಳಿ ಬಂದಿರುವ ಪ್ರಭಾಕರ ಅವರು, ತಾವು ಹುಟ್ಟಿಬೆಳೆದ ಮನೆಯಲ್ಲಿ ಬಿಡಾರ ಹೂಡಿದ್ದಾರೆ. ಹಿರೀಕರು ಕಟ್ಟಿದ ದೊಡ್ಡಮನೆ. ಮನೆಯೊಳಗೊಂದೇ ಜೀವ; ಮನೆ ತುಂಬ ಪುಸ್ತಕದ ರಾಶಿ (ಹೆಚ್ಚಿನವು ಇಂಗ್ಲೀಶ್ ಬಂಗಾಳಿ ಅಸ್ಸಾಮಿ). ನಟ್ಟನಡುವಿರುವ ಹಾಲಿನ ಮೂಲೆಯಲ್ಲಿ ಬೀದಿಗೆ ಬೆನ್ನುಕೊಟ್ಟಂತೆ ಕೂತು, ಲ್ಯಾಪ್‌ಟಾಪಿನಲ್ಲಿ ಬರೆಯುತ್ತ, ವೆಬ್‌ಸೈಟುಗಳನ್ನು ಜಾಲಾಡುತ್ತ, ಬ್ಲಾಗುಗಳನ್ನೋದುತ್ತ ಪ್ರಭಾಕರ ಕುಳಿತಿರುತ್ತಾರೆ.

ಅವರ ಮನಗೆ ಹೋದಾಗಲೆಲ್ಲ ನನಗೆ ರಾಗಿಮುದ್ದೆ ಸೊಪ್ಪಿನ ಸಾರಿನ ಊಟ ಸಿಗುತ್ತದೆ. ಅವರು ಉಣ್ಣುವುದೊಂದು ಅಪೂರ್ವ ದೃಶ್ಯ. ತಣಿಗೆಯ ನಡುವೆ ಹದವಾಗಿ ಬೆಂದು ಕಂಪು ಬೀರುವ ಗೋಂದಿನಂತಹ ಕೆಂಗಪ್ಪು ಬಣ್ಣದ ಬಿಸಿಮುದ್ದೆಯನ್ನಿಟ್ಟು, ಅದರ ತಲೆಯ ಮೇಲೆ ಶಿಖರವನ್ನು ಹಿಮವು ಅಲಂಕರಿಸುವಂತೆ ಬೆಣ್ಣೆಯ ಚೂರನ್ನಿಡುತ್ತಾರೆ; ಬೆಣ್ಣೆಯು ಮುದ್ದೆ ಕಾವಿಗೆ ಕರಗಿ ಇಡೀ ಚೆಂಡನ್ನು ಆವರಿಸಿ ಅಭಿಷೇಕ ಮಾಡಿಸಿಕೊಂಡ ಮೂರುತಿಯಂತೆ ಥಳಥಳ ಹೊಳೆಯುತ್ತದೆ. ಆಗ ಘಮಿಸುವ ಮುದ್ದೆಯನ್ನು ಚೆನ್ನಾಗಿ ಮಿದ್ದು, ಒಂದು ಬದಿಯಿಂದ ಇಷ್ಟಿಷ್ಟೇ ಮುರಿದು ತುತ್ತು ಮಾಡಿ, ಸೊಪ್ಪಿನ ಗಟ್ಟಿಸಾರಲ್ಲಿ ಹೊರಳಾಡಿಸಿ ಗುಕ್ಕನೆ ನುಂಗಿ ಕಣ್ಮುಚ್ಚಿ ಕೊಳ್ಳುತ್ತಾರೆ. ತರುವಾಯ ಶ್ರೀಯುತರು ಜ್ಞಾನೋದಯವಾದ ಸಿದ್ಧನಂತೆ ಅವರ ಮುಖದಲ್ಲಿ ಪರಮಾನಂದದ ಒಂದು ಕಳೆ ಆವಿರ್ಭವಿಸುತ್ತದೆ. ಇದನ್ನೆಲ್ಲ ಕಾಣುವಾಗ, ಲೋಕವನ್ನೆಲ್ಲ ಸುತ್ತಾಡಿರುವ ಇವರು ಕೋಲಾರಕ್ಕೆ ಮುದ್ದೆಸುಖಕ್ಕಾಗಿಯೆ ಬಂದರೇನೊ ಎಂದು ಶಂಕೆ ಬರುತ್ತದೆ. ಪ್ರಭಾಕರ ಅವರಿಗೆ ಆಧುನಿಕ ಕನ್ನಡ ಸಾಹಿತ್ಯದ ಮೇಲೆ ಅನೇಕ ದೂರುಗಳಿವೆ. ಅವುಗಳಲ್ಲಿ ಆಹಾರ ತಯಾರಿಕೆ ಮತ್ತು ಸೇವನೆ ಕುರಿತು ಅದರಲ್ಲಿ ವಿವರಗಳೇ ಇಲ್ಲ ಎಂಬುದೂ ಒಂದು.

ಕನ್ನಡದ ಅತಿಹಿರಿಯ ಮತ್ತು ಹೆಚ್ಚು ಬರೆಯದ ಲೇಖಕರಲ್ಲಿ ಪ್ರಭಾಕರ ಅವರೂ ಒಬ್ಬರು. ನಾನು ಅವರ ‘ಕುದುರೆಮೊಟ್ಟೆ’ ಕಾದಂಬರಿಯನ್ನೂ ‘ಒಂದು ತೊಲ ಪುನುಗು ಮತ್ತು ಇತರ ಕತೆಗಳು’ ಸಂಕಲನವನ್ನೂ ಓದಿದ್ದೆ. ಇವುಗಳಲ್ಲಿ ‘ಕುದುರೆ ಮೊಟ್ಟೆ’ ಈಗಲೂ ಪ್ರಿಯವಾದ ಪುಸ್ತಕ. ಅದರಲ್ಲಿರುವ ಕೆಲವು ಪಾತ್ರಗಳು ಕೊಂಚ ವಿಕ್ಷಿಪ್ತವಾಗಿವೆ; ಅಲ್ಲಿನ ಬಾಳಿನ ಸನ್ನಿವೇಶಗಳೂ ಅನಿರೀಕ್ಷಿತವಾಗಿವೆ. ಆದರೆ ಎಲ್ಲಿಯೂ ಹುಸಿ ಅನಿಸದಂತೆ, ಒಂದೇ ಶಬ್ದ ಅಪವ್ಯಯವಾಗದಂತೆ ಅದನ್ನು ಬರೆಯಲಾಗಿದೆ. ಪಾತ್ರಗಳನ್ನು ತಮ್ಮ ಸಿದ್ಧಾಂತಕ್ಕೆ ತಕ್ಕಂತೆ ಮಣಿಸಿ ಕೈಗೊಂಬೆಯಂತೆ ಆಡಿಸುತ್ತ, ಕೆಲವನ್ನು ಮುದ್ದಾಮಾಗಿ ದುರುಳಗೊಳಿಸಿ ಕಲೆಯ ಜಾಣಮುಸುಕಿನಲ್ಲಿ ಅಡಗಿಸುತ್ತ, ಕೆಲವು ಕಾದಂಬರಿಗಳು ಕನ್ನಡದಲ್ಲಿ ಪ್ರಕಟವಾಗುತ್ತಿವೆ. ಇಂತಹ ಹೊತ್ತಲ್ಲಿ ಅರ್ಧ ಶತಮಾನದ ಹಿಂದೆ ಪ್ರಕಟವಾದ ಈ ಕಾದಂಬರಿ, ಬಾಳನ್ನು ಕುರಿತು ತೋರುವ ಕಕ್ಕುಲಾತಿ ಕಂಡು ಖುಶಿಯಾಗುತ್ತದೆ. ಕತೆಗಾರರಿಗೆ ತಾವು ಸೃಷ್ಟಿಸುವ ಕೆಲವು ಪಾತ್ರಗಳ ಮೇಲೆ ಕೊಂಚ ಭಾವ ಪಕ್ಷಪಾತವಿರುತ್ತದೆ. ಆದರೆ ತಾವು ಸೃಜಿಸುವ ಎಲ್ಲ ಪಾತ್ರಗಳನ್ನು ತಾಯಿಯಂತೆ ನೋಡುವುದು ಬರೆಹದ ನೈತಿಕತೆ. ಈ ಸಂಗತಿ ಕುವೆಂಪು ಮತ್ತು ಟಾಲ್ ಸ್ಟಾಯ್ ಕಾದಂಬರಿ ಓದಿದವರಿಗೆ ಗೊತ್ತಿದೆ.

ಕಾಮವನ್ನು ಇಟ್ಟುಕೊಂಡು ಜೀವನದ ಸತ್ಯಗಳನ್ನು ಶೋಧಿಸುವ ವಿಷಯದಲ್ಲಿ ಕಾಮರೂಪಿಯವರು, ಒಬ್ಬ ಟಿಪಿಕಲ್ ನವ್ಯಲೇಖಕರೇ. ಆದರೆ ನವ್ಯದ ಕೆಲವು ಲೇಖಕರಲ್ಲಿ ಕಾಣುವಂತೆ, ಅದಕ್ಕವರು ಅನಗತ್ಯ ಪ್ರಾಮುಖ್ಯ ಕೊಡುವುದಿಲ್ಲ. ಅದನ್ನು ಚಪ್ಪರಿಸುವುದಿಲ್ಲ. ವೈಭವೀಕರಿಸುವುದಿಲ್ಲ. ಬದಲಿಗೆ, ಮನುಷ್ಯರಾದವರು ಜೀವನದ ಇಕ್ಕಟ್ಟುಗಳಲ್ಲಿ ಸಿಲುಕಿ ಅನಿವಾರ್ಯವಾಗಿ ವರ್ತಿಸುವ ಪರಿಯನ್ನು ತಣ್ಣಗೆ ವ್ಯಂಗ್ಯವಾಗಿ ಚಿತ್ರಿಸುತ್ತಾ ಹೋಗುತ್ತಾರೆ. ಸತ್ಯಕ್ಕಿರುವ ಹಲವು ಮುಖಗಳನ್ನು ಹಿಡಿಯುವಂತಹ ಕುರುಸೋವಾನ ‘ರಶೋಮನ್’ ಸಿನಿಮಾ ನೆನಪಿಸುವ ಈ ಕಾದಂಬರಿ, ಮತ್ತೆಮತ್ತೆ ಓದಬೇಕು ಎನಿಸುವಷ್ಟು ತಾಜಾ ಆಗಿದೆ. ‘ಉಪಪತ್ತಿಯೋಗ’ ಎಂಬುದನ್ನು ಬಿಟ್ಟರೆ, ಉಳಿದಂತೆ ವ್ಯಕ್ತಿವಾದವನ್ನು ಅತಿಯಾಗಿ ಬಿಂಬಿಸುವ ತಂತ್ರದ ಬಿಗಿತದಲ್ಲಿರುವ ಅವರ ಕತೆಗಳು ಅಷ್ಟು ಆಪ್ತವೆನಿಸಿಲ್ಲ.

ನನಗೆ ಪ್ರಭಾಕರ್ ಕುರಿತು ಆಸಕ್ತಿ ಮೂಡಿಸಿದವರು ಮಾರ್ಕ್ಸ್‌ವಾದಿ ಚಿಂತಕ ಕೆ.ರಾಘವೇಂದ್ರರಾವ್ ಅವರು. ಅಮೆರಿಕೆಯ ವಿಶ್ವವಿದ್ಯಾಲಯಗಳಲ್ಲಿ ಕೆಲಸ ಮಾಡುತ್ತಿದ್ದ ಎ.ಕೆ.ರಾಮಾನುಜನರ ಹೊಂದಾಣಿಕೆಯ ಗುಣವನ್ನು ಕಟುವಾಗಿ ವಿಮರ್ಶಿಸುತ್ತ, ಅಲ್ಲಿನ ಶೈಕ್ಷಣಿಕ ಕ್ಷೇತ್ರದಲ್ಲಿರುವ ಬಿಳಿಯರ ಯಜಮಾನಿಕೆಗೆ ಬಾಗದೆ ಹೊರಬಂದ ಪ್ರಭಾಕರ ಅವರ ದಿಟ್ಟ ಸ್ವಭಾವವನ್ನು ಅವರು ತಮ್ಮ ಸಂದರ್ಶನದಲ್ಲಿ ಪ್ರಸ್ತಾಪಿಸಿದ್ದರು. ಪ್ರಭಾಕರ ಅವರನ್ನು ಭೇಟಿಯಾಗಬೇಕು ಎಂದು ಅನಿಸುತ್ತಿತ್ತು. ಅದರಲ್ಲೂ ಭಾರತದ ಶಾಕ್ತಪೀಠಗಳಲ್ಲಿ ಮುಖ್ಯವಾಗಿರುವ ಅಸ್ಸಾಮಿನ ಕಾಮಾಖ್ಯಕ್ಕೆ ಹೋಗಲು ಯತ್ನಿಸುತ್ತಿದ್ದ ನಾನು, ಅಲ್ಲೇ ಸಮೀಪದ ಗೌಹಾತಿಯಲ್ಲಿರುವ ಅವರನ್ನು ಕಾಣಲು ಹವಣಿಕೆ ಮಾಡಿಕೊಂಡಿದ್ದೆ. ಆದರೆ ಸಾರ್ವಜನಿಕ ವ್ಯಕ್ತಿಯಾಗಲು ನಿರಾಕರಿಸಿ ಅಜ್ಞಾತವಾಗಿಯೇ ಬಾಳುವ ಅವರು ಸುಲಭವಾಗಿ ಸಿಗುತ್ತಿರಲಿಲ್ಲ.

ನನ್ನ ತವಕವನ್ನರಿತಿದ್ದ ಕೆ.ರಾಮಯ್ಯ, ‘ಪ್ರಭಾಕರ್ ಕರ್ನಾಟಕಕ್ಕೆ ಬಂದಿದ್ದಾರೆ. ಬನ್ನಿ’ ಎಂದು ಅವರ ಮನೆಗೆ ಕರೆದುಕೊಂಡು ಹೋದರು. ಮಧ್ಯಾಹ್ನದ ಸುಡುಹೊತ್ತು. ಪ್ರಭಾಕರ ಪ್ರೀತಿಯಿಂದ ಬರಮಾಡಿಕೊಂಡು ನೊರೆ ತುಂಬಿದ ಒಗರು ಬೀರಿನ ಮಗ್ಗನ್ನು ಕೈಗೆ ಕೊಟ್ಟು, ಕಾಮಾಖ್ಯದ ಬಗ್ಗೆಯೂ ತಂತ್ರ ಪಂಥದ ಬಗ್ಗೆಯೂ ಇರುವ ಕೃತಿಗಳನ್ನು ತೋರಿಸುತ್ತ, ಗಂಟೆಗಟ್ಟಳೆ ಮಾತಾಡಿದರು. ಅರಿವಿನ ಕಿಡಿಗಳು ಹಾರುವ ಅದೊಂದು ವಿದ್ವತ್‌ಪೂರ್ಣ ಹರಟೆ.

ನಾನು ಅವರಲ್ಲಿ ಶಿಷ್ಯವೃತ್ತಿ ಸ್ವೀಕರಿಸಿ ಹಲವಾರು ಸಲ ಕೋಲಾರಕ್ಕೆ ಹೋಗಿ ಬಂದಿದ್ದೇನೆ. ಅವರ ಮಾತುಕತೆಗಳಲ್ಲಿ ನನಗೆ ಮುಖ್ಯವಾಗಿ ಕಂಡಿದ್ದು, ಜಾತ್ಯತೀತವಾದ ಮನಸ್ಸು; ಸಣ್ಣಪುಟ್ಟ ಸಂಗತಿಗಳ ಮೇಲೂ ಕಾಳಜಿಯಿಂದ ಸೂಕ್ಷ್ಮವಾಗಿ ಚಿಂತಿಸುವ ಮಾನವೀಯತೆ; ಗತಕಾಲದ ಬಗ್ಗೆ ಹಳಹಳಿಕೆಯಿಲ್ಲದೆ ವರ್ತಮಾನದ ಸಮಸ್ಯೆಗಳನ್ನು ಕುರಿತು ಚಿಂತಿಸುವ ಪ್ರಖರವೂ ನಿಷ್ಠುರವೂ ಆದ ರಾಜಕೀಯ ಪ್ರಜ್ಞೆ. ಸಾರ್ವಜನಿಕ ಬದುಕಿನಲ್ಲಿ ಜಾತಿಪದ್ಧತಿ ಎಲ್ಲೆಮೀರಿ ನಿರತವಾಗಿರುವ ಕುರಿತ ಹೇವರಿಕೆ. ಹಿರಿಯ ಲೇಖಕರಲ್ಲಿ ಸಾಮಾನ್ಯವಾಗಿ ಎರಡು ಸ್ವಭಾವಗಳಿರುತ್ತವೆ. ಒಂದು- ಕಳೆದುಹೋದ ಕಾಲದ ಬಗ್ಗೆ ಭಾವುಕ ಮರುಕಳಿಕೆ. ಎರಡು-ವರ್ತಮಾನದ ಸಾಮಾಜಿಕ ರಾಜಕೀಯ ವೈರುಧ್ಯಗಳನ್ನು ಉದಾರವಾಗಿ ನೋಡುತ್ತ, ಚಿಂತನೆಯ ಮೊನಚನ್ನು ಕಳೆದುಕೊಳ್ಳುವುದು. ಆದರೆ ಆತ್ಮಕ್ಕೆ ಸದಾ ಬೆಂಕಿ ಹತ್ತಿಸಿಕೊಂಡಂತೆ ಉರಿಯುವ ಕೆಲವರಿದ್ದಾರೆ. ಕೋಚೆ, ಕುಸುಮಾಕರ ದೇವರಗೆಣ್ಣೂರ, ಎಂ.ಡಿ. ನಂಜುಂಡಸ್ವಾಮಿ, ನೀಲಗಂಗಯ್ಯ ಪೂಜಾರ, ಕೆ.ರಾಘವೇಂದ್ರರಾವ್, ಅಬ್ಬಿಗೇರಿ ವಿರೂಪಾಕ್ಷಪ್ಪ, ಸಾರಾ ಅಬೂಬಕರ್, ಕಾಮರೂಪಿ ಪ್ರಭಾಕರ-ಇವರೆಲ್ಲ ಇಂತಹವರು. ಈ ಹಿರಿಯರ ಜತೆ ಮಾತಾಡುವಾಗ ಇವರ ಹಠಮಾರಿತನ, ಜಗಳಗಂಟಿತನ, ಆದರ್ಶವಾದ, ನೈತಿಕ ಪ್ರಜ್ಞೆ ಹಾಗೂ ಭಿನ್ನಮತ ಇಷ್ಟವಾಗುತ್ತದೆ.

ಕರ್ನಾಟಕದಿಂದ ಬಹುಕಾಲ ದೂರವಿದ್ದ ಕಾರಣದಿಂದ ಏರ್ಪಟ್ಟಿರುವ ಅಪರಿಚಿತತೆಯಿಂದಲೊ ಅಥವಾ ಕರ್ನಾಟಕದ ಒಳಗೇ ಇದ್ದೂಇದ್ದೂ ನಮಗೆ ಕಾಣದಂತಾಗಿರುವ ವೈರುಧ್ಯಗಳು ‘ಹೊರಗಿನಿಂದ’ ಬಂದಿರುವ ಅವರಿಗೆ ಒಡೆದು ಕಾಣುತ್ತಿರುವುದರಿಂದಲೊ, ಪ್ರಭಾಕರ ಕರ್ನಾಟಕದ ಸಮಕಾಲೀನ ಸಾಂಸ್ಕೃತಿಕ ರಾಜಕಾರಣದ ವೈರುಧ್ಯಗಳ ಬಗ್ಗೆ ತೀಕ್ಷ್ಣವಾದ ಟಿಪ್ಪಣಿ ಮಾಡುತ್ತಿರುತ್ತಾರೆ; ಕನ್ನಡಿಗರ ಸ್ವಭಾವದಲ್ಲೇ ವ್ಯಕ್ತಿನಿಷ್ಠೆಗಾಗಿ ವಿಮರ್ಶೆಯ ನಿಷ್ಠುರತೆ ಬಿಟ್ಟುಕೊಡುವ, ಸಜ್ಜನಿಕೆಯ ಭಾಷೆಯಲ್ಲಿ ವಾಸ್ತವವನ್ನು ಅಡಗಿಸುವ ಪ್ರವೃತ್ತಿಯಿದೆ ಎಂದು ಹೇಳುತ್ತಿರುತ್ತಾರೆ. ಸಂಘಟಕರೊಬ್ಬರು ಕಾರ್ಯಕ್ರಮವೊಂದಕ್ಕೆ ಕರೆಸಿಕೊಂಡು ಪರಿಚಯ ಭಾಷಣದಲ್ಲಿ ತಮ್ಮನ್ನು ಅತಿಯಾಗಿ ಹೊಗಳಿದ್ದನ್ನು ನೆನೆಯುತ್ತ ಅವರೊಮ್ಮೆ ಹೇಳಿದರು: “ಏನ್ ಸ್ವಾಮಿ ಕನ್ನಡಿಗರು? ಎಷ್ಟು ಉದಾರತೆ! ನನ್ನ ಬಗ್ಗೆ ಅವರಿಗೆ ಏನೂ ಗೊತ್ತಿಲ್ಲ. ನಾನು ಎಲ್ಲ ಸೇರಿದರೆ ನೂರೈವತ್ತು ಪುಟಗಳನ್ನೂ ಬರೆದಿಲ್ಲ. ಕನ್ನಡಕ್ಕೆ ದೊಡ್ಡ ಕೊಡುಗೆಯನ್ನು ಕೊಟ್ಟಿಲ್ಲ. ಆದರೂ ವಾಚಾಮಗೋಚರ ಹೊಗಳಿಬಿಟ್ಟರು. ಕರ್ನಾಟಕದಲ್ಲಿ ಮಾತಿಗೆ ಬೆಲೆಯೇ ಇದ್ದಂತಿಲ್ಲ.’’

ಇದನ್ನು ಕೇಳುವಾಗ ಈಚೆಗೆ ಕಲ್ಕತ್ತಾದಲ್ಲಿ ನಾನು ಕಂಡ, ಹಿರಿಯ ಲೇಖಕ ರುದ್ರಪ್ರತಾಪ ಸೇನರ ಸನ್ಮಾನ ಕಾರ್ಯಕ್ರಮ ನೆನಪಾಯಿತು. ಸೇನರಿಗೆ 75ವರ್ಷ ತುಂಬಿದ ನೆಪದಲ್ಲಿ ಇರಿಸಿಕೊಂಡಿದ್ದ ಆ ಕಾರ್ಯಕ್ರಮ ಎಷ್ಟು ವಿಮರ್ಶಾತ್ಮಕವಾಗಿತ್ತು ಎಂದರೆ, ಅವರ ಶಿಷ್ಯರು ತಮ್ಮ ಗುರುವಿನ ಜತೆ ಕೋರ್ಟ್ಮಾರ್ಶಲ್ ನಡೆಸುವವರ ಹಾಗೆ ಪ್ರಶ್ನೆ ಕೇಳುತ್ತಿದ್ದರು. ಸೇನರು ಆ ಕಟುತರ ಪ್ರಶ್ನೆಗಳಿಗೆಲ್ಲ ಪ್ರಾಮಾಣಿಕವಾಗಿ ದ್ವಂದ್ವವಿಲ್ಲದೆ ಉತ್ತರಿಸುತ್ತಿದ್ದರು. ಹಿರಿಯರ ತಲೆಗೆ ಅಭಿನಂದನ ಗ್ರಂಥಗಳ ಸರಮಾಲೆಯನ್ನು ತಂದು ಕಟ್ಟಿ, ಎಗ್ಗಿಲದೆ ಹೊಗಳಿ ವೈಭವೀಕರಿಸುವ ಪದ್ಧತಿಯಿರುವ ಕರ್ನಾಟಕದಲ್ಲಿ, ಈ ಪರಿಯ ನಿಷ್ಠುರತೆ ಕಲ್ಪಿಸಿಕೊಳ್ಳುವುದೇ ಕಷ್ಟ.

ತೋರುಗಾಣಿಕೆಯನ್ನು ಸದಾ ನಿರಾಕರಿಸುವ ಪ್ರಭಾಕರ ಅವರಲ್ಲಿ, ಅವರ ಖಂಡಿತವಾದಿ ನಿಲುವಿಗೆ ಅಷ್ಟೊಂದು ತಾಳೆಯಾಗದ ಇನ್ನೊಂದು ಮುಖವಿದೆ. ಅದೆಂದರೆ, ಜೀವನಪ್ರೀತಿಯ ಸಂಕೇತದಂತಿರುವ ತಮಾಶೆ ಮತ್ತು ಪೋಲಿತನ. ಈ ತಮಾಶೆಯ ಗುಣ ಅದ್ಭುತ ನಾಟಕೀಯ ಶೈಲಿಯಾಗಿ ಅವರ ಕಥೆ ಕಾದಂಬರಿಗಳಲ್ಲೆಲ್ಲ ಆವರಿಸಿಕೊಂಡಿದೆ. ತಮಗೆ ಪಾಠ ಹೇಳಿದ ಗುರುಗಳ ವೈಯಕ್ತಿಕ ಬದುಕಿನಲ್ಲಿದ್ದ ಸನಾತನವಾದ ಮತ್ತು ತರಗತಿಗಳಲ್ಲಿ ಕನ್ನಡ ಬಳಸದ ಅವರ ಇಂಗ್ಲಿಷಿನ ವ್ಯಾಮೋಹ ಕುರಿತಂತೆ, ಅವರಲ್ಲಿ ಸ್ವಾರಸ್ಯಕರ ಮಾಹಿತಿಗಳಿವೆ. ಪ್ರಭಾಕರ ಅವರು ಆಪ್ತರ ಎದುರು ತಾವು ಬರೆದಿರುವ ಅಪ್ರಕಟಿತ ಪೋಲಿ ಪದ್ಯಗಳನ್ನು ವಾಚಿಸುವುದುಂಟು. ಬಹುಶಃ ಇದು ಅವರ ಗೆಳೆಯರಾಗಿದ್ದ ಎಚ್.ಎಸ್. ಬಿಳಿಗಿರಿಯವರ ಸಹವಾಸ ಫಲವಿರಬೇಕು.

ಒಂದೇ ವ್ಯಕ್ತಿತ್ವದಲ್ಲಿ ಒಟ್ಟಿಗೇ ಇರಲು ಕಷ್ಟವೆನಿಸಬಹುದಾದ ಇನ್ನೂ ಅನೇಕ ಸಂಗತಿಗಳು ಅವರಲ್ಲಿ ಸಹಜವಾಗಿ ನಿರಾಳವಾಗಿ ಇವೆ. ಉದಾ.ಗೆ, ಬಹುಭಾಷಿಕರಾದ ಅವರ ಮನೆಮಾತು ತಮಿಳುಗನ್ನಡ; ಬರವಣಿಗೆ ಕನ್ನಡ ಮತ್ತು ಇಂಗ್ಲೀಶಿನಲ್ಲಿ; ಸಂಸ್ಕೃತ ಅಸ್ಸಾಮಿ ಬಂಗಾಳಿ ಭಾಷೆಗಳಲ್ಲಿ ದೊಡ್ಡ ವಿದ್ವತ್ತು. (ಅವರ ಅಸ್ಸಾಮಿ ಬಂಗಾಳಿ ತಿಳಿವಳಿಕೆಯಿಂದ ಕನ್ನಡಕ್ಕೆ ಪ್ರಯೋಜನವಿನ್ನೂ ಆಗಿಲ್ಲ). ಪಂಪ ಅವರ ಇಷ್ಟದ ಕವಿ. ಮೂಲತಃ ಇಂಗ್ಲೀಶ್ ಸಾಹಿತ್ಯದ ವಿದ್ಯಾರ್ಥಿಯಾದರೂ ಸಾಹಿತ್ಯಕ್ಕಿಂತ ಹೆಚ್ಚಾಗಿ ಅಂತರಾಷ್ಟ್ರೀಯ ರಾಷ್ಟ್ರೀಯ ರಾಜಕಾರಣದ ಮೇಲೆ ಹೆಚ್ಚು ಬರೆವಣಿಗೆ. ಅದರಲ್ಲೂ ಈಶಾನ್ಯ ಭಾರತದ ರಾಜಕಾರಣ ಭಾಷೆ ಧರ್ಮ ಸಂಸ್ಕೃತಿ ಕುರಿತ ಅವರ ತಿಳಿವಳಿಕೆ ಅಪರೂಪದ್ದು. ಇವನ್ನೆಲ್ಲ ಒಟ್ಟಿಗೆ ಹೇಗೆ ಕಲ್ಪಿಸಿಕೊಳ್ಳುವುದು? ಪ್ರಭಾಕರ ತಮ್ಮ ಕಾದಂಬರಿಯ ಒಂದು ಪಾತ್ರದ ಹಾಗೇ ಬದುಕಿದ್ದಾರೆ.

ಅವರು ಈಚೆಗೆ ಮಾತಾಡುತ್ತ ಕೊಂಚ ದಣಿದ ದನಿಯಲ್ಲಿ “ಸ್ವಾಮಿ, ಕರ್ನಾಟಕ ನನಗೆ ಸಾಕಾಗಿದೆ. ಗೌಹಾಟಿಗೆ ಹೋಗಬೇಕು ಅನಿಸುತ್ತಿದೆ’ ಎಂದು ಗೊಣಗಿದರು. “ಹೋಗಿ. ಆದರೆ ಮತ್ತೆಬನ್ನಿ’’ ಎಂದೆ. ಅವರಲ್ಲಿ ಕೋಲಾರ-ಗೌಹಾತಿಗಳ ನಡುವೆ ವಿಚಿತ್ರವಾದ ಆಕರ್ಷಣೆ ವಿಕರ್ಷಣೆಯಿದೆ. ಇದು ಬಹುಕಾಲ ಬೇರೆಡೆ ಬೆಳೆದ ಮರ ತನ್ನ ಮೂಲನೆಲಕ್ಕೆ ಬಂದು ನಾಟಿಗೊಂಡರೆ ಬೇರೂರುವ ಕಷ್ಟ. ಮರಳಿ ಹುಟ್ಟಿದೂರಿಗೆ ಬರುವಿಕೆ ಬಾಲ್ಯದ ನೆನಪುಗಳನ್ನು ಎಚ್ಚರಿಸಿ ಸುಖ ಕೊಡುತ್ತದೆ; ಆದರೆ ಹೊಚ್ಚ ಹೊಸತೆೆನಿಸುವಷ್ಟು ಬದಲಾಗಿರುವ ಪರಿಸರವು, ಕಾಡುವ ಏಕಾಂಗಿತನವನ್ನೂ ತಂದಿಡುತ್ತದೆ. ಯಾರ ಮರುಕವನ್ನೂ ಬಯಸದೆ ಏಕಾಂತದಲ್ಲಿ ಘನತೆಯಿಂದ ಕೊನೆಯ ದಿನಗಳನ್ನು ಕಳೆಯ ಬಯಸುವ ಇಂತಹ ಹಠಮಾರಿ ಜೀವಗಳು, ಒಳಗೇ ಮೃದ್ವಂಗಿಗಳಾಗಿ ಆಪ್ತಸಂಗಾತಕ್ಕೆ ಹಾತೊರೆಯುತ್ತಿರುತ್ತವೆ.

ಆ ಸಂಗಾತದ ಸ್ವರೂಪ ಎಂತಹುದು ಎಂದು ಸ್ಪಷ್ಟವಾಗುವುದಿಲ್ಲ. ನಾನು ‘ಕಾಮರೂಪಕ್ಕೆ ಯಾವಾಗ ಹೋಗುತ್ತೀರಿ’ ಎಂದು ಕೇಳಿದೆ: ‘ಆದಿಮದ 50ನೇ ಬೆಳುದಿಂಗಳ ಕಾರ್ಯಕ್ರಮ ಮುಗಿಸಿಕೊಂಡು’ ಎಂದರು.
ಪ್ರತಿಯೊಬ್ಬರಿಗೂ ಬಾಳಿನಲ್ಲಿ ಬಹುರೂಪಧಾರಣೆ ಮಾಡಬೇಕಾದ ಒತ್ತಡಗಳು ಎದುರಾಗಬಹುದು. ಆದರೆ ಈ ರೂಪಧಾರಣೆಗೆ ಕಾರಣ, ನಮ್ಮ ಇಚ್ಛಾನಿಚ್ಛೆಗಳು ಮಾತ್ರವಲ್ಲ, ಬಾಳಿನ ಅನೂಹ್ಯ ಒತ್ತಡಗಳು ಸಹ. ಈ ಒತ್ತಡಗಳು ಬರೆಹ ಇಲ್ಲವೇ ಮಾತಿನ ವ್ಯಾಖ್ಯಾನಕ್ಕೆ ಕೆಲವೊಮ್ಮೆ ನಿಲುಕುವಂತೆ ಇರುವುದಿಲ್ಲ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending