ದಿನದ ಸುದ್ದಿ
ದಾವಣಗೆರೆ | ಸಂವಿಧಾನವನ್ನು ಅರ್ಥೈಸಿಕೊಳ್ಳುವುದು ಕಥೆ ಕಾದಂಬರಿ ಓದಿದಂತಲ್ಲ : ನ್ಯಾ.ನಾಗಮೋಹನ ದಾಸ್
ಸುದ್ದಿದಿನ,ದಾವಣಗೆರೆ : ದೇಶದ ಬಹುತ್ವವನ್ನು ರಕ್ಷಿಸಿಕೊಂಡು ಬರುತ್ತಿರುವ ನಮ್ಮ ಸಂವಿಧಾನವನ್ನು ಪ್ರತಿಯೊಬ್ಬರೂ ಓದಿ, ಅರ್ಥೈಸಿಕೊಂಡು ಅದರಂತೆ ನಡೆಯಬೇಕೆಂದು ಕರ್ನಾಟಕ ಉಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿ ಹೆಚ್.ಎನ್.ನಾಗಮೋಹನ ದಾಸ್ ಕರೆ ನೀಡಿದರು.
ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾಡಳಿತ ಜಿಲ್ಲಾ ಪಂಚಾಯತ್, ಜಿಲ್ಲಾ ವಕೀಲರ ಸಂಘ, ಜಿಲ್ಲಾ ಆರೋಗ್ಯ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ದಾವಣಗೆರೆ, ಸಹಯಾನ ಮತ್ತು ಸಮುದಾಯ ಕರ್ನಾಟಕ ಇವರುಗಳ ಸಂಯುಕ್ತಾಶ್ರಯದಲ್ಲಿ ಜು. 19 ರ ರಂದು ನಗರದ ಜಿಲ್ಲಾಡಳಿತ ಭವನದ ತುಂಗಭದ್ರ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ‘ಸಂವಿಧಾನ ಓದು ಕಾರ್ಯಗಾರ’ ಉದ್ಘಾಟಿಸಿ ಮಾತನಾಡಿ, ಪಿಪಿಟಿ ಪ್ರದರ್ಶನದ ಮೂಲಕ ಭಾರತ ಸಂವಿಧಾನ ರಚನೆ, ಮೂಲತತ್ವಗಳು-ಸವಾಲುಗಳು ಕುರಿತು ವಿವರಣೆ ನೀಡಿದರು.
ರಾಜಕೀಯ ಅಧಿಕಾರ ಎಂದರೇನು ಎಂಬುದನ್ನು ತಿಳಿಯಬೇಕು. ಕಾನೂನು ಮಾಡುವುದು ಶಾಸಕಾಂಗ, ಇದನ್ನು ಜಾರಿಗೆ ತರುವುದು ಕಾರ್ಯಾಂಗ ಮತ್ತು ಈ ಕಾನೂನುಗಳನ್ನು ಉಲ್ಲಂಘನೆ ಮಾಡಿದರೆ ಶಿಕ್ಷಿಸುವುದು ನ್ಯಾಯಾಂಗ. ಈ ಅಂಗಗಳ ಕಾರ್ಯವೈಖರಿ ನಿಯಂತ್ರಿಸುವುದು ಸಂವಿಧಾನ. ಹಿಂದೆ ರಾಜರುಗಳ ಕೈಯಲ್ಲಿ ಈ ಎಲ್ಲ ಅಧಿಕಾರಿಗಳಿದ್ದವು. ಕ್ರಮೇಣ ಪ್ರಜಾಪ್ರಭುತ್ವ ವ್ಯವಸ್ಥೆ ಬಂತು. ಇಂದು 199 ರಾಷ್ಟ್ರಗಳ ಪೈಕಿ 190 ರಾಷ್ಟ್ರಗಳು ತಮ್ಮದೇ ಆದ ಸಂವಿಧಾನವನ್ನು ಹೊಂದಿವೆ.
ನಾವು ನಮ್ಮ ಸಂವಿಧಾನವನ್ನು ಓದಿ ಅರ್ಥೈಸಿಕೊಂಡು ಅದರಂತೆ ನಡೆಯಬೇಕು. ಈ ನಿಟ್ಟಿನಲ್ಲಿ ಕಳೆದ 10 ವರ್ಷಗಳಲ್ಲಿ ಪಠ್ಯದಲ್ಲಿ ಅಳವಡಿಸಿರುವ ಸಂವಿಧಾನವನ್ನು ವಿದ್ಯಾರ್ಥಿಗಳು ಕೇವಲ 35 ಅಂಕ ಪಡೆಯುವ ಉದ್ದೇಶದಿಂದ ಓದುತ್ತಿದ್ದಾರೆ. ಹೀಗಾದರೆ ಇದನ್ನು ಅರ್ಥೈಸಿಕೊಂಡು ಇದರ ಆಶಯಗಳನ್ನು ಮೈಗೂಡಿಸಿಕೊಳ್ಳಲು ಹೇಗೆ ಸಾಧ್ಯ. ಸಂವಿಧಾನವನ್ನು ಎಲ್ಲರೂ ತಿಳಿಯಬೇಕೆಂಬ ನಿಟ್ಟಿನಲ್ಲಿ ರಾಜ್ಯಾದ್ಯಂತ ಸಂವಿಧಾನ ಓದು ಅಭಿಯಾನವನ್ನು ಕೈಗೊಳ್ಳಲಾಗಿದೆ ಎಂದರು.
ಭಾರತ 1947 ರಲ್ಲಿ ಸ್ವಾತಂತ್ರ್ಯ ಪಡೆದ ದೇಶ. 1950 ರಲ್ಲಿ ವಿಶ್ವದಲ್ಲೇ ಅತಿದೊಡ್ಡ ಮತ್ತು ಮಹತ್ತರವಾದ ಸಂವಿಧಾನವನ್ನು ರಚಿಸಿತು. ಸಂವಿಧಾನ ಜಾರಿಯಾದ ಈ 70 ವರ್ಷಗಳಲ್ಲಿ ನಾವು ಸಾಧಿಸಿದ್ದೇನು ಎಂಬ ಪ್ರಶ್ನೆಗೆ ಉತ್ತರ ಹಿಂದೆ ಸುಮಾರು 600 ರಾಜರು ನಮ್ಮನ್ನು ಆಳುತ್ತಿದ್ದರು. ಅದು ಬದಲಾಗಿ ಪ್ರಜಾಪ್ರಭುತ್ವ ವ್ಯವಸ್ಥೆ ಜಾರಿಗೆ ಬಂದು, ದೇಶಕ್ಕೆ ಗಡಿ ನಿಗದಿಯಾಗಿ, ಸಂವಿಧಾನ ಬಂದ ನಂತರ ಪ್ರಜಾಪ್ರಭುತ್ವ ಸಂಸ್ಥೆಗಳನ್ನು ಕಟ್ಟಲಾಯಿತು. ರಾಜಕೀಯ, ಸಾಮಾಜಿಕ, ಆರ್ಥಿಕ, ಸಾಂಸ್ಕøತಿಕ, ಶೈಕ್ಷಣಿಕ ಹೀಗೆ ಅನೇಕ ವಲಯಗಳಲ್ಲಿ ಉತ್ತಮ ಬದಲಾವಣೆಗಳನ್ನು ಕಂಡಿದ್ದೇವೆ. ಬಡತನ ಕಡಿಮೆಯಾಗಿದೆ, ಶಿಕ್ಷಣ ಮಟ್ಟ ಹೆಚ್ಚಿದೆ, ಮಹಿಳೆ, ದಲಿತರು, ಬುಡಕಟ್ಟು ಜನಾಂಗ, ಅಲ್ಪಸಂಖ್ಯಾತರು ಅಭಿವೃದ್ದಿ ಹೊಂದುತ್ತಿದ್ದಾರೆ. ಇಂದು ಎಲ್ಲ ಕ್ಷೇತ್ರದಲ್ಲಿ ಮಹಿಳೆ ಇದ್ದಾಳೆ. ಹಿಂದುಳಿದ, ಕೆಳಜಾತಿಯವರು ಉನ್ನತ ಸ್ಥಾನಲ್ಲಿದ್ದಾರೆ ಎಂದರೆ ಇದಕ್ಕೆ ಸಂವಿಧಾನ ಕೊಟ್ಟ ಅವಕಾಶಗಳೇ ಕಾರಣ. ಆದರೆ ಇಂತಹ ಸಂವಿಧಾನದ ಮಹತ್ವ ಅರಿಯಬೇಕಿದೆ. ಇದನ್ನು ಓದಿ ಅದರಂತೆ ನಡೆಯುವ ತುರ್ತು ಇದೆ.
ಸಂವಿಧಾನವನ್ನು ಅರ್ಥೈಸಿಕೊಳ್ಳುವುದು ಕಥೆ ಕಾದಂಬರಿ ಓದಿದಂತಲ್ಲ. ಭಾರತ ದೇಶವನ್ನು ತಿಳಿಯದೇ ಭಾರತದ ಸಂವಿಧಾನವನ್ನು ತಿಳಿಯಲು ಸಾಧ್ಯವಿಲ್ಲ. ದೇಶದ ಜನರು ಇಲ್ಲಿಯ ಇತಿಹಾಸ, ಧರ್ಮ, ಜಾತಿ, ಸಾಮಾಜಿಕ ಸಂಬಂಧಗಳು, ಆರ್ಥಿಕ ಸಂಬಂಧಗಳು, ಮೌಲ್ಯ, ಸಂಸ್ಕøತಿ ತಿಳಿಯದೇ ಸಂವಿಧಾನ ತಿಳಿಯಲು ಸಾಧ್ಯವಿಲ್ಲ. ಆದ್ದರಿಂದ ನಮ್ಮ ದೇಶವನ್ನು ತಿಳಿಯಬೇಕೆಂದರು.
ದೇಶದ ಬಹುತ್ವವನ್ನು ರಕ್ಷಿಸುತ್ತಿರುವ ನಮ್ಮ ಸಂವಿಧಾನವನ್ನು ತಿಳಿಯಬೇಕಾದರೆ ಮೊದಲು ನಮ್ಮ ದೇಶವನ್ನು ತಿಳಿಯಬೇಕು. ಸುಮಾರು 4635 ಜನಾಂಗಗಳು, 325 ಭಾಷೆಗಳು, 25 ಲಿಪಿಗಳೊಂದಿಗೆ ಸಹಜೀವನ ನಡೆಸುತ್ತಿರುವ ಬಹುತ್ವದ ದೇಶ ನಮ್ಮದು. ಈ ಬಹುತ್ವ ಅರ್ಥವಾಗಬೇಕಾದರೆ ನಮ್ಮ ಮೂಲ ನಮಗೆ ತಿಳಿಯಬೇಕು. ನಮ್ಮ ಸಾಮಾಜಿಕ, ಆರ್ಥಿಕ ಸಂಬಂಧಗಳು ಅರ್ಥವಾಗದೇ ಹೋದರೆ ಕಲ್ಯಾಣ ರಾಜ್ಯದ ಅರ್ಥ ಆಗುವುದಿಲ್ಲ. ನಮ್ಮದು ಹಳ್ಳಿಗಳ ದೇಶ. ಸುಮಾರು 6.50 ಲಕ್ಷ ಹಳ್ಳಿಗಳಿವೆ. ದೇಶದಲ್ಲಿ ಮಿಶ್ರ ಆರ್ಥಿಕತೆ ಇದೆ. ಇಂತಹ ಪರಿಸ್ಥಿತಿಯಲ್ಲಿ ಮಲ್ಟಿ ನ್ಯಾಷನಲ್, ಟ್ರಾನ್ಸ್ನ್ಯಾಷನಲ್ ಕಂಪೆನಿಗಳು ಕೇವಲ ಮಾರುಕಟ್ಟೆಯನ್ನಲ್ಲ ಬದಲಾಗಿ ಮನಸ್ಸುಗಳನ್ನು ನಿಯಂತ್ರಿಸುತ್ತಿರುವುದನ್ನು ಅರ್ಥ ಮಾಡಿಕೊಳ್ಳಬೇಕಿದೆ.
ಸಮಾನತೆ, ಧರ್ಮ, ಅಹಿಂಸೆ, ಸಾಮಾಜಿಕ ನ್ಯಾಯ ನಮ್ಮ ಸಂವಿಧಾನದ ಆಧಾರವಾಗಿದ್ದು, ಸಂವಿಧಾನ ಬಂದ ನಂತರ ಅನೇಕ ಉತ್ತಮ ಬದಲಾವಣೆಗಳು ಆಗಿವೆ. ಆದರೂ ನಮ್ಮ ಮುಂದೆ ಇಂದಿಗೂ ಅನೇಕ ಸವಾಲುಗಳು ಮತ್ತು ಸಮಸ್ಯೆಗಳಿವೆ. ಅನೇಕರು ಸಂವಿಧಾನವನ್ನೇ ದೂಷಿಸುತ್ತಿದ್ದಾರೆ. ದೋಷ ಇರುವುದು ಸಂವಿಧಾನದಲ್ಲಲ್ಲ. ಬದಲಾಗಿ ಇದನ್ನು ಅನುಷ್ಟಾನಗೊಳಿಸುವವರಲ್ಲಿದೆ.
ಎಲ್ಲರೂ ಸಂವಿಧಾನ ಅರ್ಥೈಸಿಕೊಂಡು ಅದರಂತೆ ನಡೆಯುವಲ್ಲಿ ಹೆಜ್ಜೆ ಇಡಬೇಕಿದೆ. ಈ ಸಂವಿಧಾನವನ್ನು ಉಳಿಸಿಕೊಂಡರೆ ಮಾತ್ರ ಸವಾಲು ಮತ್ತು ಸಮಸ್ಯೆಗಳಿಗೆ ಉತ್ತರ ಕಂಡುಕೊಳ್ಳಬಹುದೆಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷ ಕುಲಕರ್ಣಿ ಅಂಬಾದಾಸ್ ಜಿ, ದೇಶದಲ್ಲಿ ಪ್ರತಿ ಧರ್ಮಗಳಿಗೆ ಇರುವ ಒಂದೊಂದು ಪವಿತ್ರ ಗ್ರಂಥಗಳಂತೆ ಇಡೀ ಭಾರತ ದೇಶಕ್ಕೆ ಸಂವಿಧಾನ ಒಂದು ಪವಿತ್ರ ಗ್ರಂಥವಾಗಿದೆ. ಸಂವಿಧಾನವನ್ನು ಪ್ರತಿಯೊಬ್ಬರು ಓದಿ, ಅರ್ಥೈಸಿಕೊಂಡು ಮತ್ತೊಬ್ಬರಿಗೆ ಓದುವ ಹಾಗೆ ಉತ್ತೇಜಿಸಬೇಕು. ಸಂವಿಧಾನವನ್ನು ಓದಿ ತಿಳಿದುಕೊಂಡಲ್ಲಿ ಅಪರಾಧಗಳು ನಡೆಯುವುದು ಕಡಿಮೆಯಾಗುತ್ತವೆ ಎಂದರು.
ಸಂವಿಧಾನ ಮೂಲಭೂತ ಹಕ್ಕುಗಳೊಂದಿಗೆ ಮೂಲಭೂತ ಕರ್ತವ್ಯಗಳನ್ನು ನೀಡಿದ್ದು, ಅವುಗಳನ್ನು ನಿರ್ವಹಿಸಬೇಕಾಗಿರುವುದು ಪ್ರತಿಯೊಬ್ಬ ಭಾರತೀಯನ ಪ್ರಮುಖ ಜವಾಬ್ದಾರಿಯಾಗಿದೆ. ಕಾರ್ಯಾಗಾರದಲ್ಲಿ ಭಾಗವಹಿಸಿರುವ ಶಿಕ್ಷಕರು ಸಂವಿಧಾನವನ್ನು ಓದಿಕೊಂಡು ವಿದ್ಯಾರ್ಥಿಗಳು ಸಂವಿಧಾನ ಓದಿ ತಿಳಿಯುವಂತೆ ಪ್ರೇರೇಪಿಸಬೇಕು. ಆಗ ಈ ಕಾರ್ಯಕ್ರಮ ಆಯೋಜಿಸಿದಕ್ಕೂ ಸಾರ್ಥಕವಾಗುತ್ತದೆ ಎಂದು ಅಭಿಪ್ರಾಯಪಟ್ಟರು.
ಜಿಲ್ಲಾಧಿಕಾರಿ ಜಿ.ಎನ್. ಶಿವಮೂರ್ತಿ ಮಾತನಾಡಿ, ಇಂದು ಸಂವಿಧಾನ ಓದು ಅಭಿಯಾನ ಕೈಗೊಳ್ಳುವ ಮೂಲಕ ಸಾಮಾನ್ಯರ ಕೈಗೆ ಸಂವಿಧಾನ ಓದು ಪುಸ್ತಕ ದೊರಕುವಂತೆ ಮಾಡಿರುವ ನ್ಯಾಯಾಮೂರ್ತಿ ನಾಗಮೋಹನ್ ದಾಸ್ರವರ ಕಾರ್ಯ ಶ್ಲಾಘನೀಯ. ಇವರು ನಮ್ಮ ಸಂವಿಧಾನದ ಕುರಿತು ಅತ್ಯಂತ ಸರಳವಾಗಿ ಬರೆದು ಎಲ್ಲರಿಗೂ ದೊರಕುವಂತೆ ಮಾಡಿದ್ದಾರೆ. ಈ ಪುಸ್ತಕ ಭಾರತದ ಇತಿಹಾಸದೊಂದಿಗೆ ತುಲನಾತ್ಮಕವಾಗಿ ರಚಿತವಾಗಿದ್ದು ಕಥಾ ಪುಸ್ತಕದಂತೆ ಓದಿಸಿಕೊಂಡು ಹೋಗುತ್ತದೆ. ಇಂತಹ ಪುಸ್ತಕಗಳು ಎಲ್ಲಾ ಶಾಲಾ ಮಕ್ಕಳ ಕೈಯಲ್ಲಿದ್ದರೆ ಮಕ್ಕಳಿಗೆ ಪ್ರಾರಂಭದಿಂದಲೇ ಸಂವಿಧಾನದ ಕುರಿತು ಪ್ರಜ್ಞೆ ಬೆಳೆಯುತ್ತದೆ. ಹೈಕೋರ್ಟ್ನ ನಿವೃತ್ತ ನ್ಯಾಯಮೂರ್ತಿ ಒಬ್ಬರು ಇಂದು ಸಾಮಾನ್ಯರ ನಡುವೆ ಬಂದು ಸಂವಿಧಾನ ಓದು ಎನ್ನುವ ಅಭಿಯಾನಕ್ಕೆ ಕೈಜೋಡಿಸುತ್ತಿರುವುದಕ್ಕೆ ಅಭಿನಂದನೀಯವಾಗಿದ್ದು ಅವರ ಈ ಸಾಮಾಜಿಕ ಕಾಳಜಿಗೆ ಯಶಸ್ಸು ಸಿಗಲೆಂದು ಆಶಿಸಿದರು.
ಕಾರ್ಯಾಗಾರದಲ್ಲಿ ಕರ್ನಾಟಕ ರಾಜ್ಯ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಎಲ್.ಹೆಚ್.ಅರುಣಕುಮಾರ್ ಪ್ರಾಸ್ತಾವಿಕವಾಗಿ ಮಾತನಾಡಿ, ಎಲ್ಲ ಕಾನೂನುಗಳ ತಾಯಿಯಾಗಿರುವ ನಮ್ಮ ಸಂವಿಧಾನವನ್ನು ಅತ್ಯಂತ ಸರಳವಾಗಿ, ಅರ್ಥವಾಗುವ ರೀತಿಯಲ್ಲಿ ಪುಸ್ತಕ ಬರೆದು, ಅದರ ಕುರಿತು ರಾಜ್ಯಾದ್ಯಂತ ಅಭಿಯಾನದ ಮೂಲಕ ತಿಳಿಸುತ್ತಿರುವ ಉಚ್ಚ ನ್ಯಾಯಾಲಯದ ನಿವೃತ್ತ ನ್ಯಾ.ಹೆಚ್.ಎನ್.ನಾಗಮೋಹನ ದಾಸ್ರವರು ಉತ್ತಮ ವಾಗ್ಮಿ ಮತ್ತು ಸಾಹಿತಿ ಆಗಿದ್ದು, ನ್ಯಾಯಾಮೂರ್ತಿ ನಾಗಮೋಹನ್ದಾಸ್ ಇವರು ಹುಟ್ಟಿದ್ದು ಕೋಲಾರ ಜಿಲ್ಲೆ ಮುಳಬಾಗಿಲು ತಾಲೂಕಿನ ಹೆಬ್ಬಣ್ಣಿ ಗ್ರಾಮದಲ್ಲಿ 1952 ಫೆ. 12 ರಂದು. ತಂದೆ ಸ್ವಾತಂತ್ರ್ಯ ಹೋರಾಟಗಾರ ಎಚ್.ಎನ್.ನಾಗಪ್ಪ, ತಾಯಿ ಪಾರ್ವತಮ್ಮ. ಬೆಂಗಳೂರು ವಿಶ್ವವಿದ್ಯಾನಿಲಯದಿಂದ ಕಾನೂನು ಪದವಿ, ಅಖಿಲ ಭಾರತ ವಕೀಲರ ಸಂಘಟನೆ, ಯಂಗ್ ಅಡ್ವೊಕೇಟ್ಸ್ ಫೋರಂ ಮತ್ತು ರಾಷ್ಟ್ರೀಯ ನ್ಯಾಯಾಂಗ ಅಕಾಡೆಮಿಯಲ್ಲಿ ಸದಸ್ಯರಾಗಿ, ಕಾರ್ಯದರ್ಶಿಯವಾಗಿ ಸಕ್ರಿಯ ಪಾತ್ರವಹಿಸಿದ್ದಾರೆ ಎಂದರು.
ಜಿ.ಪಂನ ಸಿಇಓ ಹೆಚ್.ಬಸವರಾಜೇಂದ್ರ, ಅಪರ ಜಿಲ್ಲಾಧಿಕಾರಿ ಪದ್ಮ ಬಸವಂತಪ್ಪ, ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪ್ರಭು.ಎನ್.ಬಡೀಗೇರ್, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಎನ್.ಟಿ. ಮಂಜುನಾಥ್, ಹಿರಿಯ ಸಿವಿಲ್ ನ್ಯಾಯಾಧೀಶ ಕೆಂಗಬಾಲಯ್ಯ, ಸರ್ಕಾರಿ ಅಭಿಯೋಜಕ ವಿ.ಎಸ್.ಪಾಟೀಲ್, ಡಿಡಿಪಿಐ ಸಿ.ಆರ್.ಪರಮೇಶ್ವರಪ್ಪ, ಡಿಎಚ್ಓ ಡಾ.ರಾಘವೇಂದ್ರಸ್ವಾಮಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ವಿಜಯ್ಕುಮಾರ್ ಸೇರಿದಂತೆ ಜಿಲ್ಲೆಯ ವಿವಿಧ ಶಾಲೆಗಳ ಶಿಕ್ಷಕರು, ಆಶಾಕಾರ್ಯಕರ್ತೆರು, ವಕೀಲರು ಸೇರಿದಂತೆ ಇತರರು ಭಾಗವಹಿಸಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಸಂವಿಧಾನಕ್ಕೆ ಅಪಾಯವಾದರೆ, ಬಡವರ, ಶ್ರಮಿಕರ ಭವಿಷ್ಯಕ್ಕೆ ಅಪಾಯವಾದಂತೆ : ಸಿಎಂ ಸಿದ್ದರಾಮಯ್ಯ
ಸುದ್ದಿದಿನ,ಮಡಿಕೇರಿ : ದೇಶದ ಸಂವಿಧಾನಕ್ಕೆ ಅಪಾಯವಾದರೆ ಈ ದೇಶದ ಮಹಿಳೆಯರ, ಬಡವರ, ಮಧ್ಯಮ ವರ್ಗದವರ, ಶ್ರಮಿಕರ, ಬದುಕು-ಭವಿಷ್ಯಕ್ಕೆ ಅಪಾಯ ಎಂದರ್ಥ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಮಡಿಕೇರಿಯಲ್ಲಿ ನಡೆದ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಈ ಲೋಕಸಭಾ ಚುನಾವಣೆ ನಮಗೊಂದು ಅವಕಾಶ. ಈ ಬಾರಿ ಬಿಜೆಪಿಯನ್ನು ಸೋಲಿಸಿ ಕಾಂಗ್ರೆಸ್ ಗೆಲ್ಲಿಸುವ ಮೂಲಕ ಪ್ರಜಾತಂತ್ರ ಉಳಿಸಬೇಕು ಎಂದು ಕರೆ ನೀಡಿದರು.
ಬಳಿಕ ತುಮಕೂರಿನಲ್ಲಿ ಮಾತನಾಡಿದ ಅವರು, ರಾಜ್ಯದ ಹಿತಾಸಕ್ತಿ ಕಾಪಾಡುವಲ್ಲಿ ಕಳೆದ ಲೋಕಸಭಾ ಚುನಾವಣೆಯಲ್ಲಿ ಆಯ್ಕೆಯಾಗಿದ್ದ ಬಿಜೆಪಿ ಸಂಸದರು ವಿಫಲರಾಗಿದ್ದಾರೆ ಎಂದು ಮುಖ್ಯಮಂತ್ರಿ ಆರೋಪಿಸಿದರು.
ಮಹಿಳೆಯರ ಅಭ್ಯುದಯಕ್ಕಾಗಿ ಪಂಚ ಗ್ಯಾರಂಟಿ ಯೋಜನೆಗಳನ್ನು ನುಡಿದಂತೆ ಜಾರಿಗೆ ತಂದಿದ್ದೇವೆ. ಇದರಿಂದಾಗಿ ಮಹಿಳೆಯರ ಜೀವನದಲ್ಲಿ ಸುಧಾರಣೆ ಕಂಡಿದೆ, ಈ ಯೋಜನೆಯ ಫಲಾನುಭವಿಗಳ ಬಗ್ಗೆ ಟೀಕಿಸುವುದು ಸರಿಯಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಮಡಿಕೇರಿಯಲ್ಲಿ ನಡೆದ ಜನಧ್ವನಿ-2 ಬೃಹತ್ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದೆ.
ಸಂವಿಧಾನಕ್ಕೆ ಅಪಾಯ ಎಂದರೆ ದೇಶದ ಮಹಿಳೆಯರು, ಬಡವರು, ಮಧ್ಯಮ ವರ್ಗದವರು, ಶೂದ್ರರು, ಶ್ರಮಿಕರ ಬದುಕು-ಭವಿಷ್ಯಕ್ಕೆ ಅಪಾಯ ಎಂದರ್ಥ.
ಭಾರತದಲ್ಲಿ ಪ್ರಜಾತಂತ್ರ ಅಪಾಯದಲ್ಲಿದೆ. ಇದನ್ನು ಉಳಿಸುವ ಅನಿವಾರ್ಯತೆ ನಮ್ಮೆಲ್ಲರ ಮುಂದಿದೆ. ಈ ಲೋಕಸಭಾ ಚುನಾವಣೆ ನಮಗೊಂದು… pic.twitter.com/UapeRxBcZP
— Siddaramaiah (@siddaramaiah) April 14, 2024
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ದಾವಣಗೆರೆ | ದ್ವಿತೀಯ ಪಿ.ಯು.ಸಿ ಪರೀಕ್ಷೆ; ಜಿಲ್ಲೆಗೆ ಶೇ 80.96 ರಷ್ಟು ಫಲಿತಾಂಶ
ಸುದ್ದಿದಿನ,ದಾವಣಗೆರೆ : 2024 ರ ಮಾರ್ಚ್ನಲ್ಲಿ ನಡೆದ ದ್ವಿತೀಯ ಪಿ.ಯು.ಸಿ. ಫಲಿತಾಂಶ ಪ್ರಕಟವಾಗಿದ್ದು ಜಿಲ್ಲೆಗೆ ಶೇ 80.96 ರಷ್ಟು ಫಲಿತಾಂಶ ಬಂದಿದ್ದು ಶೇ 74.27 ಗಂಡು, ಶೇ 82.01 ರಷ್ಟು ಹೆಣ್ಣು ಮಕ್ಕಳು ಉತ್ತೀರ್ಣರಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ; ವೆಂಕಟೇಶ್ ಎಂ.ವಿ ತಿಳಿಸಿದರು.
ಅವರು ಬುಧವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಚುನಾವಣಾ ಸಂಬಂಧ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಏಪ್ರಿಲ್ 10 ರಂದು ಫಲಿತಾಂಶ ಪ್ರಕಟವಾಗಿದ್ದು ಹೆಚ್ಚಿನ ವಿವರಗಳು ಬರಬೇಕಾಗಿದೆ. ಈ ವರ್ಷ ಜಿಲ್ಲೆಯಲ್ಲಿ ದ್ವಿತೀಯ ಪಿ.ಯು.ಸಿ ಪರೀಕ್ಷೆಯನ್ನು 19644 ರೆಗ್ಯುಲರ್, 422 ಖಾಸಗಿ ಸೇರಿ 20066 ವಿದ್ಯಾರ್ಥಿಗಳು ತೆಗೆದುಕೊಂಡಿದ್ದರು. ಇದರಲ್ಲಿ 15904 ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ಶೇ 80.96 ರಷ್ಟು ಫಲಿತಾಂಶ ಪಡೆದಿದ್ದಾರೆ.
ಕಳೆದ ವರ್ಷ ಶೇ 75.72 ರಷ್ಟು ಫಲಿತಾಂಶ ಬಂದಿತ್ತು, ಈ ವರ್ಷ ಶೇ 5.24 ರಷ್ಟು ಫಲಿತಾಂಶ ಹೆಚ್ಚಳವಾಗಿದೆ. ಜಿಲ್ಲೆಗೆ ಟಾಪ್ ಬಂದವರಲ್ಲಿ ಕಲಾ ವಿಭಾಗದಲ್ಲಿ ಹರಿಹರದ ಶ್ರೀಮತಿ ಗಿರಿಯಮ್ಮ ಕಾಂತಪ್ಪ ಮಹಿಳಾ ಪದವಿ ಪೂರ್ವ ಕಾಲೇಜಿನ ಹೀನಬಾನು ಪಿ.ಕೆ. 591 ಅಂಕ ಪಡೆದು ಶೇ 98.5, ವಾಣಿಜ್ಯ; ದಾವಣಗೆರೆ ತಾ; ಗೋಪನಾಳು ಸರ್ಕಾರಿ ಪದವಿ ಪೂರ್ವ ಕಾಲೇಜಿನ ರೇಷ್ಮಾ ಬಾನು 589 ಅಂಕ ಪಡೆದು ಶೇ 98.16 ರಷ್ಟು ಫಲಿತಾಂಶ ಪಡೆದು ಜಿಲ್ಲೆಗೆ ಮೊದಲಿಗರಾಗಿದ್ದಾರೆ.
ವಿಜ್ಞಾನ ವಿಭಾಗದಲ್ಲಿ ಲೋಕಿಕೆರೆ ರಸ್ತೆಯಲ್ಲಿನ ಸರ್ಎಂವಿ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಮೊಹಮ್ಮದ್ ಸುಹೇಲ್, ಅಮೃತ ದೊಡ್ಡ ಬಸಪ್ಪನವರ್, ಅನನ್ಯ ಹೆಚ್.ಎಸ್, ಆಕಾಶ್ ಸಿ.ಪಾಟೀಲ್ ಇವರು 593 ಅಂಕ ಶೇ 98.83 ರಷ್ಟು ಸಮನಾದ ಫಲಿತಾಂಶ ಹಂಚಿಕೊಂಡಿದ್ದಾರೆ ಎಂದರು.
ವಿಭಾಗವಾರು ಫಲಿತಾಂಶ; ಕಲಾ ವಿಭಾಗದಲ್ಲಿ ಶೇ 57.83 ರಷ್ಟು ಫಲಿತಾಂಶ ಬಂದಿದ್ದು ಇದರಲ್ಲಿ ಗಂಡು ಶೇ 45, ಹೆಣ್ಣು ಶೇ 66.46 ರಷ್ಟು ಉತ್ತೀರ್ಣರಾಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಶೇ 76.22 ರಷ್ಟು ಫಲಿತಾಂಶ ಬಂದಿದ್ದು ಗಂಡು ಶೇ 65.5, ಹೆಣ್ಣು ಶೇ 80.8, ವಿಜ್ಞಾನ ವಿಭಾಗದಲ್ಲಿ ಶೇ 91.13 ರಷ್ಟು ಫಲಿತಾಂಶ ಬಂದಿದ್ದು ಗಂಡು ಶೇ 91.39 ಹಾಗೂ ಹೆಣ್ಣು ಶೇ 88.69 ರಷ್ಟು ಫಲಿತಾಂಶ ಬಂದಿದೆ.
ನಗರಕ್ಕಿಂತ ಗ್ರಾಮೀಣರ ಮೇಲುಗೈ; ಫಲಿತಾಂಶದಲ್ಲಿ ನಗರ ಪ್ರದೇಶಕ್ಕಿಂತ ಗ್ರಾಮೀಣ ವಿದ್ಯಾರ್ಥಿಗಳು ಶೇ 1.1 ರಷ್ಟು ಮೇಲುಗೈ ಸಾಧಿಸಿದ್ದಾರೆ. ಗ್ರಾಮೀಣ ಪ್ರದೇಶದಲ್ಲಿ ಶೇ 73.65 ಗಂಡು, ಶೇ 84.6 ಹೆಣ್ಣು ಉತ್ತೀರ್ಣರಾದರೆ ನಗರ ಪ್ರದೇಶದ ಒಟ್ಟು ಫಲಿತಾಂಶ ಶೇ 80.75 ರಲ್ಲಿ ಗಂಡು ಶೇ 74.41, ಹೆಣ್ಣು ಶೇ 81.37 ರಷ್ಟು ಫಲಿತಾಂಶ ಪಡೆದಿದ್ದಾರೆ.
ಶೇ 100 ರಷ್ಟು ಫಲಿತಾಂಶ ಪಡೆದ ಶಾಲೆಗಳು; ದಾವಣಗೆರೆ ಅಂಜುಂ ಪದವಿ ಪೂರ್ವ ಕಾಲೇಜು, ಲೇಬರ್ ಕಾಲೋನಿ, ಜೈನ್ ಟ್ರಿನಿಟಿ ಪದವಿ ಪೂರ್ವ ಕಾಲೇಜು, ಅನ್ಮೋಲ್ ಪದವಿ ಪೂರ್ವ ಕಾಲೇಜು, ಶ್ರೀ ಗೀತಂ ಪದವಿ ಪೂರ್ವ ಕಾಲೇಜು, ದಾವಣಗೆರೆ ಇವು ಶೇ 100 ರಷ್ಟು ಫಲಿತಾಂಶ ಪಡೆದ ಕಾಲೇಜುಗಳಾಗಿವೆ.
ಈ ವೇಳೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್ ಬಿ.ಇಟ್ನಾಳ್, ಜಿಲ್ಲಾ ರಕ್ಷಣಾಧಿಕಾರಿ ಉಮಾ ಪ್ರಶಾಂರ್, ಶಾಲಾ ಶಿಕ್ಷಣ, ಪದವಿ ಪೂರ್ವ ಇಲಾಖೆ ಉಪನಿರ್ದೇಶಕ ಕರಿಸಿದ್ದಪ್ಪ ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಗ್ರಾಹಕರಿಂದ ಹೆಚ್ಚುವರಿಯಾಗಿ ಪೇಪರ್ ಬ್ಯಾಗ್ಗೆ ರೂ.10 ಪಡೆದ ಶಾಪಿಂಗ್ ಮಾಲ್ಗೆ ದಂಡ
ಸುದ್ದಿದಿನ ,ದಾವಣಗೆರೆ : ವಕೀಲ ವೃತ್ತಿಯಲ್ಲಿ ತೊಡಗಿಕೊಂಡಿರುವ ಆರ್. ಬಸವರಾಜ್ ಎಂಬುವವರು ದಾವಣಗೆರೆ ನಗರದ ಮ್ಯಾಕ್ಸ್ ರೀಟೈಲ್ ಅಂಗಡಿಯಲ್ಲಿ 2023 ರ ಅಕ್ಟೋಬರ್ 29 ರಂದು ರೂ.1,499 ಪಾವತಿಸಿ, ಡೆನಿವಾ ಪ್ಯಾಂಟ್ ಖರೀದಿಸಿದರು. ಈ ವೇಳೆಯಲ್ಲಿ ಇಲ್ಲಿಯೇ ಲೈಫ್ ಸ್ಟೈಲ್ ಇಂಟರ್ನ್ಯಾಷನಲ್ ವಾಣಿಜ್ಯ ಸಂಸ್ಥೆ ಪ್ಯಾಂಟ್ ಮಾರಾಟದ ವೇಳೆ ಹೆಚ್ಚುವರಿಯಾಗಿ ರೂ.10/- ಪೇಪರ್ ಬ್ಯಾಗ್ಗೆ ಪಡೆಯಲಾಯಿತು.
ಗ್ರಾಹಕರಾದ ಆರ್. ಬಸವರಾಜ್ ಇವರ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದಲ್ಲಿ ದೂರನ್ನು ದಾಖಲಿಸಿ ವಾಣಿಜ್ಯ ಸಂಸ್ಥೆ ವಿರುದ್ದ ರೂ.50,000 ಮಾನಸಿಕ ಕಿರುಕುಳ ಹಾಗೂ ದೂರು ದಾಖಲಿಸಲು ಖರ್ಚು ಮಾಡಿದ ಮೊ ರೂ.10,000 ಗಳನ್ನು ಪಾವತಿಸುವಂತೆ ದೂರನ್ನು ದಾಖಲಿಸಿದರು.
ವಾಣಿಜ್ಯ ಸಂಸ್ಥೆಗೆ ನೋಟಿಸ್ ಜಾರಿ ಮಾಡಿದ್ದು ಈ ಸಂಸ್ಥೆ ವಕೀಲರ ಮುಖಾಂತರ ಹಾಜರಾಗಿ ಬ್ಯಾಗ್ಗೆ ಹೆಚ್ಚುವರಿಯಾಗಿ ಪಡೆದ ಹಣಕ್ಕೆ ಸಮರ್ಥಿಸಿಕೊಂಡಿತ್ತು. ಆದರೆ ಗ್ರಾಹಕರ ಆಯೋಗ ಈ ಮೊದಲು ರಾಷ್ಟ್ರೀಯ ಗ್ರಾಹಕರ ಆಯೋಗ ಬಿಗ್ ಬಜಾರ್ ವಿರುದ್ಧ ಸಾಯಲ್ ದಾವ ಪ್ರಕರಣದ ನ್ಯಾಯ ನಿರ್ಣಯದ ತೀರ್ಪಿನ ಅನುಗುಣವಾಗಿ ವಾಣಿಜ್ಯ ಸಂಸ್ಥೆಗಳು ಕ್ಯಾರಿ ಬ್ಯಾಗ್ಗಳಿಗೆ ಹೆಚ್ಚಿನ ಹಣವನ್ನು ಪಡೆಯುವಂತಿಲ್ಲ ಎಂಬ ತೀರ್ಪನ್ನು ಉಲ್ಲೇಖಿಸಿ ಹೆಚ್ಚುವರಿಯಾಗಿ ರೂ.10 ಪಡೆದ ಸಂಸ್ಥೆಯ ಕ್ರಮವು ಗ್ರಾಹಕರ ಸಂರಕ್ಷಣಾ ಕಾಯ್ದೆಯ ಅಡಿಯಲ್ಲಿ ಅನುಚಿತ ವ್ಯಾಪಾರ ಪದ್ದತಿಯೆಂದು ಪರಿಗಣಿಸಿ ದಾವಣಗೆರೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷರಾದ ಮಹಂತೇಶ ಈರಪ್ಪ ಶಿಗ್ಲಿ, ಸದಸ್ಯರಾದ ತ್ಯಾಗರಾಜನ್ ಮತ್ತು ಮಹಿಳಾ ಸದಸ್ಯರಾದ ಶ್ರೀಮತಿ ಬಿ.ಯು. ಗೀತಾ ಇವರು ವಾಣಿಜ್ಯ ಸಂಸ್ಥೆಗೆ ರೂ.7000 ದಂಡವಿದಿಸಿ ಆದೇಶಿಸಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243