ದಿನದ ಸುದ್ದಿ
ಐಪಿಎಸ್ ಅಧಿಕಾರಿ ಮಧುಕರ ಶೆಟ್ಟರ ಸಾವು ಅಕಾಲಿಕ ಮತ್ತು ಆಘಾತಕಾರಿ
ಐಪಿಎಸ್ ಅಧಿಕಾರಿ ಮಧುಕರ ಶೆಟ್ಟರ ಸಾವು ಅಕಾಲಿಕ ಮತ್ತು ಆಘಾತಕಾರಿ. ಅವರ ಸೇವೆ ನಾಡಿಗೆ ಅಗತ್ಯವಿತ್ತು. ಅವರು ಕರ್ನಾಟಕದಿಂದ ಹೊರಹೋಗುವಂತಹ ವಾತಾವರಣ ನಿರ್ಮಿಸಿದ ನಮ್ಮ ಸಂವೇದನಾರಹಿತ ಮತ್ತು ಭ್ರಷ್ಟ ವ್ಯವಸ್ಥೆಯೇ ಅವರ ಸಾವಿಗೆ ನೇರ ಹೊಣೆ. ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಪ್ರಕರಣದಲ್ಲಿ ರಾಜ್ಯ ಹೈಕೋರ್ಟ್’ನ ಒಂದು ಭ್ರಷ್ಟ ತೀರ್ಪು ಅವರು ಕರ್ನಾಟಕದಿಂದ ಕೇಂದ್ರ ಸೇವೆಗೆ ಹೋಗುವ ಸಂದರ್ಭದಲ್ಲಿ ಅವರನ್ನು ತೀವ್ರವಾಗಿ ಬಾಧಿಸಿತ್ತು.
ದೆಹಲಿಯ ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯದಲ್ಲಿ ಅವರ ಸಹಪಾಠಿ ಯಾಗಿದ್ದ ಮೈಸೂರಿನ ಗೆಳೆಯ ಪೃಥ್ವಿ ದತ್ತ ಚಂದ್ರ ಶೋಭಿ ಒಮ್ಮೆ 2011 ರ ಸುಮಾರಿನಲ್ಲಿ ಅವರಿಗೆ ನನ್ನನ್ನು ಪರಿಚಯಿಸಿದ್ದರು. ಅಷ್ಟೊತ್ತಿಗೆ ಅವರಿಗೆ ವ್ಯವಸ್ಥೆಯ ಮೇಲೆ ಸಾಕಷ್ಟು ಭ್ರಮನಿರಸನ ಆಗಿತ್ತು. ಲೋಕಾಯುಕ್ತದಲ್ಲಿ ಇದ್ದ ಭ್ರಷ್ಟರನ್ನು ಮತ್ತು ನೀಚರನ್ನು ಜಸ್ಟೀಸ್ ಸಂತೋಷ್ ಹೆಗಡೆಯವರು ಸಾಕಷ್ಟು ಹತೋಟಿಗೆ ತರಲಿಲ್ಲ ಎನ್ನುವ ಅಸಮಾಧಾನ ಇತ್ತು. ಸಂತೋಷ್ ಹೆಗಡೆಯವರು ಜನಪ್ರಿಯತೆಯ ಉತ್ತುಂಗದಲ್ಲಿ ಇದ್ದಾಗಲೇ ಈ ವಿಚಾರದ ಬಗ್ಗೆ ಅವರು ಧ್ವನಿ ಎತ್ತಿದ್ದರು. ಈ ತರಹದ ಬೇಸರದಲ್ಲಿ ಅಮೆರಿಕದಲ್ಲಿ ಇದ್ದ ತಮ್ಮ ಪತ್ನಿ ಮತ್ತು ಚಿಕ್ಕವಯಸ್ಸಿನ ಮಗಳ ಬಳಿಗೆ ತೆರಳಿ ಅಲ್ಲಿಯೇ ಮೂರ್ನಾಲ್ಕು ವರ್ಷ ಇದ್ದು ಪಿ.ಎಚ್.ಡಿ ಮುಗಿಸಿಕೊಂಡು ವಾಪಸಾಗಿದ್ದರು.
ಅವರು ಹಿಂದಿರುಗಿ ಬಂದ ಮೇಲೆಯೂ ಸರ್ಕಾರ ಅವರನ್ನು ಸರಿಯಾಗಿ ನಡೆಸಿಕೊಂಡಿರಲಿಲ್ಲ. ಅವರು ಭ್ರಷ್ಟರೊಂದಿಗೆ ರಾಜಿ ಆಗುತ್ತಿರಲಿಲ್ಲ. ಎರಡು ವರ್ಷದ ಹಿಂದೆ ಕಟ್ಟಾ ಸುಬ್ರಹ್ಮಣ್ಯ ನಾಯ್ಡುವನ್ನು ರಾಜ್ಯ ಉಚ್ಛ ನ್ಯಾಯಾಲಯದ ಒಂದು ಅತಿ ಕೆಟ್ಟ ತೀರ್ಪು ದೋಷಮುಕ್ತಗೊಳಿಸಿದಾಗ ಬಹಳ ಬೇಸರಗೊಂಡಿದ್ದರು. ಅದೇ ಸಮಯದಲ್ಲಿ ನಾನು ಅವರನ್ನು ಇನ್ನೊಮ್ಮೆ ಭೇಟಿ ಆಗಿದ್ದೆ. ಬಹಳ ವಿಶ್ವಾಸದಿಂದ ಸುಮಾರು ಒಂದು ಗಂಟೆಯ ಕಾಲ ಅವರ ಕಚೇರಿಯಲ್ಲಿ ಮಾತನಾಡಿದ್ದೆವು. ಲೋಕಾಯುಕ್ತದಲ್ಲಿ ಇದ್ದಾಗ ಅವರೇ ಸಿದ್ಧಪಡಿಸಿದ್ದ ಸಾವಿರಾರು ಪುಟಗಳ ಸಾಕ್ಷ್ಯಾಧಾರಗಳ ದೋಷಾರೋಪ ಪಟ್ಟಿಯನ್ನು (ಚಾರ್ಜ್ ಶೀಟ್) ನ್ಯಾಯಾಲಯ ತಿರಸ್ಕರಿಸಿದ್ದ ಬಗ್ಗೆ ತೀವ್ರವಾಗಿ ನೊಂದಿದ್ದರು. ಕಾನೂನು ಪದವಿ ಮಾಡಿ ಆ ಭ್ರಷ್ಟ ತೀರ್ಪು ನೀಡಿದ ನ್ಯಾಯಮೂರ್ತಿಯ ಮುಂದೆ ನಿಂತು ಆತನ ಮುಖಕ್ಕೆ ರಾಚುವಂತೆ ಹೇಳುವ ಅಭಿಲಾಷೆಯ ಮಾತನ್ನು ನನ್ನೊಂದಿಗೆ ಆಡಿದ್ದರು. ಆದರೆ ಕೆಲವೇ ತಿಂಗಳುಗಳಲ್ಲಿ ಕೇಂದ್ರ ಸೇವೆಗೆಂದು ಹೈದರಾಬಾದ್’ಗೆ ಹೋದರು. ನಾಡು ಅವರನ್ನು ಶಾಶ್ವತವಾಗಿ ಕಳೆದುಕೊಂಡಿತು.
https://m.facebook.com/story.php?story_fbid=2474973089242008&id=100001880229123
ಸರಳರೂ ಪ್ರಾಮಾಣಿಕರೂ ಆಗಿದ್ದ ಅವರು ಮಿತಭಾಷಿಯೂ ಆಗಿದ್ದರು. ಬೌದ್ಧಿಕತೆಯೂ ಇತ್ತು. ಹಾಗಾಗಿ ಸಹಜವಾಗಿ ಅವರಿಗೆ ಇಲಾಖೆಯಲ್ಲಿ ಹೆಚ್ಚು ಜನ ಆಪ್ತ ಸ್ನೇಹಿತರು ಇದ್ದಂತಿರಲಿಲ್ಲ. ಆರಡಿಗಿಂತ ಎತ್ತರವಾಗಿದ್ದ ಅವರು, ಒಳ್ಳೆಯ ಬಾಡಿಬಿಲ್ಡರ್ ತರಹದ ದೇಹದಾರ್ಢ್ಯ ಹೊಂದಿದ್ದರು. ಕನ್ನಡದ ಪ್ರಾಮಾಣಿಕ ಮತ್ತು ಹೆಸರುವಾಸಿ ಪತ್ರಕರ್ತರಾಗಿದ್ದ ವಡ್ಡರ್ಸೆ ರಘುರಾಮ ಶೆಟ್ಟರ ಮಗನಾಗಿದ್ದ ಕಾರಣಕ್ಕೆ ಕನ್ನಡದಲ್ಲೂ ಅವರಿಗೆ ಸಾಕಷ್ಟು ಹಿಡಿತ ಇತ್ತು.
ತಮ್ಮದಲ್ಲದ ತಪ್ಪಿಗೆ ಇನ್ನೊಬ್ಬರಿಗೆ ಆಗುವ ಅನಾಹುತಗಳಿಗೆ ಮರುಗುವ ಮತ್ತು ಪೊಲೀಸ್ ಉದ್ಯೋಗಕ್ಕೆ ಅಪರೂಪವಾದ ಮತ್ತು ಕೆಲವೊಮ್ಮೆ ಅನಗತ್ಯವಾದ ಅನುಕಂಪ ಮತ್ತು ಪಾಪಪ್ರಜ್ಞೆಯೂ ಅವರಿಗಿತ್ತು. ಸೂಕ್ಷ್ಮ ಮತ್ತು ಸಂವೇದನಾಶೀಲ ವ್ಯಕ್ತಿಗಳ ಅಗಲಿಕೆ ಮತ್ತು ದಾರಿದ್ರ್ಯ ಸಮಾಜವನ್ನು ಹಿಂಸೆ ಮತ್ತು ಪಾಪದತ್ತ ದೂಡುತ್ತದೆ.
https://www.facebook.com/ravikrishnareddy2011
ಮುಂದಿನ ದಿನಗಳಲ್ಲಿ ಅವರು ಕರ್ನಾಟಕಕ್ಕೆ ವಾಪಸಾಗುತ್ತಾರೆ ಮತ್ತು ಹಿರಿಯ ಅಧಿಕಾರಿಯೂ ಆಗುತ್ತಾರೆ ಎನ್ನುವ ವಿಶ್ವಾಸ ಇತ್ತು ಮತ್ತು ಆ ಮೂಲಕ ನಮ್ಮ ಕೆಲವು ಹೋರಾಟಗಳಿಗೆ ನ್ಯಾಯ ಪಡೆಯುವುದೂ ಸಾಧ್ಯವಾಗಬಹುದು ಎನ್ನುವ ಆಸೆ ನನಗಿತ್ತು. ಅನಿರೀಕ್ಷಿತವಾಗಿ ಶೆಟ್ಟರು ನೆನ್ನೆ ರಾತ್ರಿ ನಮ್ಮನ್ನೆಲ್ಲ ಅಗಲಿದ್ದಾರೆ. ಅವರ ಕುಟುಂಬದವರಿಗೆ ಈ ಸಾವನ್ನು ಭರಿಸುವ ಶಕ್ತಿ ದೊರೆಯಲಿ.
-ರವಿಕೃಷ್ಣ ರಡ್ಡಿ
ರಾಜಕಾರಣಿ
ಸುದ್ದಿದಿನ.ಕಾಂ|ವಾಟ್ಸಾಪ್|9986715401
ದಿನದ ಸುದ್ದಿ
ಸಂವಿಧಾನಕ್ಕೆ ಅಪಾಯವಾದರೆ, ಬಡವರ, ಶ್ರಮಿಕರ ಭವಿಷ್ಯಕ್ಕೆ ಅಪಾಯವಾದಂತೆ : ಸಿಎಂ ಸಿದ್ದರಾಮಯ್ಯ
ಸುದ್ದಿದಿನ,ಮಡಿಕೇರಿ : ದೇಶದ ಸಂವಿಧಾನಕ್ಕೆ ಅಪಾಯವಾದರೆ ಈ ದೇಶದ ಮಹಿಳೆಯರ, ಬಡವರ, ಮಧ್ಯಮ ವರ್ಗದವರ, ಶ್ರಮಿಕರ, ಬದುಕು-ಭವಿಷ್ಯಕ್ಕೆ ಅಪಾಯ ಎಂದರ್ಥ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಮಡಿಕೇರಿಯಲ್ಲಿ ನಡೆದ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಈ ಲೋಕಸಭಾ ಚುನಾವಣೆ ನಮಗೊಂದು ಅವಕಾಶ. ಈ ಬಾರಿ ಬಿಜೆಪಿಯನ್ನು ಸೋಲಿಸಿ ಕಾಂಗ್ರೆಸ್ ಗೆಲ್ಲಿಸುವ ಮೂಲಕ ಪ್ರಜಾತಂತ್ರ ಉಳಿಸಬೇಕು ಎಂದು ಕರೆ ನೀಡಿದರು.
ಬಳಿಕ ತುಮಕೂರಿನಲ್ಲಿ ಮಾತನಾಡಿದ ಅವರು, ರಾಜ್ಯದ ಹಿತಾಸಕ್ತಿ ಕಾಪಾಡುವಲ್ಲಿ ಕಳೆದ ಲೋಕಸಭಾ ಚುನಾವಣೆಯಲ್ಲಿ ಆಯ್ಕೆಯಾಗಿದ್ದ ಬಿಜೆಪಿ ಸಂಸದರು ವಿಫಲರಾಗಿದ್ದಾರೆ ಎಂದು ಮುಖ್ಯಮಂತ್ರಿ ಆರೋಪಿಸಿದರು.
ಮಹಿಳೆಯರ ಅಭ್ಯುದಯಕ್ಕಾಗಿ ಪಂಚ ಗ್ಯಾರಂಟಿ ಯೋಜನೆಗಳನ್ನು ನುಡಿದಂತೆ ಜಾರಿಗೆ ತಂದಿದ್ದೇವೆ. ಇದರಿಂದಾಗಿ ಮಹಿಳೆಯರ ಜೀವನದಲ್ಲಿ ಸುಧಾರಣೆ ಕಂಡಿದೆ, ಈ ಯೋಜನೆಯ ಫಲಾನುಭವಿಗಳ ಬಗ್ಗೆ ಟೀಕಿಸುವುದು ಸರಿಯಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಮಡಿಕೇರಿಯಲ್ಲಿ ನಡೆದ ಜನಧ್ವನಿ-2 ಬೃಹತ್ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದೆ.
ಸಂವಿಧಾನಕ್ಕೆ ಅಪಾಯ ಎಂದರೆ ದೇಶದ ಮಹಿಳೆಯರು, ಬಡವರು, ಮಧ್ಯಮ ವರ್ಗದವರು, ಶೂದ್ರರು, ಶ್ರಮಿಕರ ಬದುಕು-ಭವಿಷ್ಯಕ್ಕೆ ಅಪಾಯ ಎಂದರ್ಥ.
ಭಾರತದಲ್ಲಿ ಪ್ರಜಾತಂತ್ರ ಅಪಾಯದಲ್ಲಿದೆ. ಇದನ್ನು ಉಳಿಸುವ ಅನಿವಾರ್ಯತೆ ನಮ್ಮೆಲ್ಲರ ಮುಂದಿದೆ. ಈ ಲೋಕಸಭಾ ಚುನಾವಣೆ ನಮಗೊಂದು… pic.twitter.com/UapeRxBcZP
— Siddaramaiah (@siddaramaiah) April 14, 2024
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ದಾವಣಗೆರೆ | ದ್ವಿತೀಯ ಪಿ.ಯು.ಸಿ ಪರೀಕ್ಷೆ; ಜಿಲ್ಲೆಗೆ ಶೇ 80.96 ರಷ್ಟು ಫಲಿತಾಂಶ
ಸುದ್ದಿದಿನ,ದಾವಣಗೆರೆ : 2024 ರ ಮಾರ್ಚ್ನಲ್ಲಿ ನಡೆದ ದ್ವಿತೀಯ ಪಿ.ಯು.ಸಿ. ಫಲಿತಾಂಶ ಪ್ರಕಟವಾಗಿದ್ದು ಜಿಲ್ಲೆಗೆ ಶೇ 80.96 ರಷ್ಟು ಫಲಿತಾಂಶ ಬಂದಿದ್ದು ಶೇ 74.27 ಗಂಡು, ಶೇ 82.01 ರಷ್ಟು ಹೆಣ್ಣು ಮಕ್ಕಳು ಉತ್ತೀರ್ಣರಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ; ವೆಂಕಟೇಶ್ ಎಂ.ವಿ ತಿಳಿಸಿದರು.
ಅವರು ಬುಧವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಚುನಾವಣಾ ಸಂಬಂಧ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಏಪ್ರಿಲ್ 10 ರಂದು ಫಲಿತಾಂಶ ಪ್ರಕಟವಾಗಿದ್ದು ಹೆಚ್ಚಿನ ವಿವರಗಳು ಬರಬೇಕಾಗಿದೆ. ಈ ವರ್ಷ ಜಿಲ್ಲೆಯಲ್ಲಿ ದ್ವಿತೀಯ ಪಿ.ಯು.ಸಿ ಪರೀಕ್ಷೆಯನ್ನು 19644 ರೆಗ್ಯುಲರ್, 422 ಖಾಸಗಿ ಸೇರಿ 20066 ವಿದ್ಯಾರ್ಥಿಗಳು ತೆಗೆದುಕೊಂಡಿದ್ದರು. ಇದರಲ್ಲಿ 15904 ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ಶೇ 80.96 ರಷ್ಟು ಫಲಿತಾಂಶ ಪಡೆದಿದ್ದಾರೆ.
ಕಳೆದ ವರ್ಷ ಶೇ 75.72 ರಷ್ಟು ಫಲಿತಾಂಶ ಬಂದಿತ್ತು, ಈ ವರ್ಷ ಶೇ 5.24 ರಷ್ಟು ಫಲಿತಾಂಶ ಹೆಚ್ಚಳವಾಗಿದೆ. ಜಿಲ್ಲೆಗೆ ಟಾಪ್ ಬಂದವರಲ್ಲಿ ಕಲಾ ವಿಭಾಗದಲ್ಲಿ ಹರಿಹರದ ಶ್ರೀಮತಿ ಗಿರಿಯಮ್ಮ ಕಾಂತಪ್ಪ ಮಹಿಳಾ ಪದವಿ ಪೂರ್ವ ಕಾಲೇಜಿನ ಹೀನಬಾನು ಪಿ.ಕೆ. 591 ಅಂಕ ಪಡೆದು ಶೇ 98.5, ವಾಣಿಜ್ಯ; ದಾವಣಗೆರೆ ತಾ; ಗೋಪನಾಳು ಸರ್ಕಾರಿ ಪದವಿ ಪೂರ್ವ ಕಾಲೇಜಿನ ರೇಷ್ಮಾ ಬಾನು 589 ಅಂಕ ಪಡೆದು ಶೇ 98.16 ರಷ್ಟು ಫಲಿತಾಂಶ ಪಡೆದು ಜಿಲ್ಲೆಗೆ ಮೊದಲಿಗರಾಗಿದ್ದಾರೆ.
ವಿಜ್ಞಾನ ವಿಭಾಗದಲ್ಲಿ ಲೋಕಿಕೆರೆ ರಸ್ತೆಯಲ್ಲಿನ ಸರ್ಎಂವಿ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಮೊಹಮ್ಮದ್ ಸುಹೇಲ್, ಅಮೃತ ದೊಡ್ಡ ಬಸಪ್ಪನವರ್, ಅನನ್ಯ ಹೆಚ್.ಎಸ್, ಆಕಾಶ್ ಸಿ.ಪಾಟೀಲ್ ಇವರು 593 ಅಂಕ ಶೇ 98.83 ರಷ್ಟು ಸಮನಾದ ಫಲಿತಾಂಶ ಹಂಚಿಕೊಂಡಿದ್ದಾರೆ ಎಂದರು.
ವಿಭಾಗವಾರು ಫಲಿತಾಂಶ; ಕಲಾ ವಿಭಾಗದಲ್ಲಿ ಶೇ 57.83 ರಷ್ಟು ಫಲಿತಾಂಶ ಬಂದಿದ್ದು ಇದರಲ್ಲಿ ಗಂಡು ಶೇ 45, ಹೆಣ್ಣು ಶೇ 66.46 ರಷ್ಟು ಉತ್ತೀರ್ಣರಾಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಶೇ 76.22 ರಷ್ಟು ಫಲಿತಾಂಶ ಬಂದಿದ್ದು ಗಂಡು ಶೇ 65.5, ಹೆಣ್ಣು ಶೇ 80.8, ವಿಜ್ಞಾನ ವಿಭಾಗದಲ್ಲಿ ಶೇ 91.13 ರಷ್ಟು ಫಲಿತಾಂಶ ಬಂದಿದ್ದು ಗಂಡು ಶೇ 91.39 ಹಾಗೂ ಹೆಣ್ಣು ಶೇ 88.69 ರಷ್ಟು ಫಲಿತಾಂಶ ಬಂದಿದೆ.
ನಗರಕ್ಕಿಂತ ಗ್ರಾಮೀಣರ ಮೇಲುಗೈ; ಫಲಿತಾಂಶದಲ್ಲಿ ನಗರ ಪ್ರದೇಶಕ್ಕಿಂತ ಗ್ರಾಮೀಣ ವಿದ್ಯಾರ್ಥಿಗಳು ಶೇ 1.1 ರಷ್ಟು ಮೇಲುಗೈ ಸಾಧಿಸಿದ್ದಾರೆ. ಗ್ರಾಮೀಣ ಪ್ರದೇಶದಲ್ಲಿ ಶೇ 73.65 ಗಂಡು, ಶೇ 84.6 ಹೆಣ್ಣು ಉತ್ತೀರ್ಣರಾದರೆ ನಗರ ಪ್ರದೇಶದ ಒಟ್ಟು ಫಲಿತಾಂಶ ಶೇ 80.75 ರಲ್ಲಿ ಗಂಡು ಶೇ 74.41, ಹೆಣ್ಣು ಶೇ 81.37 ರಷ್ಟು ಫಲಿತಾಂಶ ಪಡೆದಿದ್ದಾರೆ.
ಶೇ 100 ರಷ್ಟು ಫಲಿತಾಂಶ ಪಡೆದ ಶಾಲೆಗಳು; ದಾವಣಗೆರೆ ಅಂಜುಂ ಪದವಿ ಪೂರ್ವ ಕಾಲೇಜು, ಲೇಬರ್ ಕಾಲೋನಿ, ಜೈನ್ ಟ್ರಿನಿಟಿ ಪದವಿ ಪೂರ್ವ ಕಾಲೇಜು, ಅನ್ಮೋಲ್ ಪದವಿ ಪೂರ್ವ ಕಾಲೇಜು, ಶ್ರೀ ಗೀತಂ ಪದವಿ ಪೂರ್ವ ಕಾಲೇಜು, ದಾವಣಗೆರೆ ಇವು ಶೇ 100 ರಷ್ಟು ಫಲಿತಾಂಶ ಪಡೆದ ಕಾಲೇಜುಗಳಾಗಿವೆ.
ಈ ವೇಳೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್ ಬಿ.ಇಟ್ನಾಳ್, ಜಿಲ್ಲಾ ರಕ್ಷಣಾಧಿಕಾರಿ ಉಮಾ ಪ್ರಶಾಂರ್, ಶಾಲಾ ಶಿಕ್ಷಣ, ಪದವಿ ಪೂರ್ವ ಇಲಾಖೆ ಉಪನಿರ್ದೇಶಕ ಕರಿಸಿದ್ದಪ್ಪ ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಗ್ರಾಹಕರಿಂದ ಹೆಚ್ಚುವರಿಯಾಗಿ ಪೇಪರ್ ಬ್ಯಾಗ್ಗೆ ರೂ.10 ಪಡೆದ ಶಾಪಿಂಗ್ ಮಾಲ್ಗೆ ದಂಡ
ಸುದ್ದಿದಿನ ,ದಾವಣಗೆರೆ : ವಕೀಲ ವೃತ್ತಿಯಲ್ಲಿ ತೊಡಗಿಕೊಂಡಿರುವ ಆರ್. ಬಸವರಾಜ್ ಎಂಬುವವರು ದಾವಣಗೆರೆ ನಗರದ ಮ್ಯಾಕ್ಸ್ ರೀಟೈಲ್ ಅಂಗಡಿಯಲ್ಲಿ 2023 ರ ಅಕ್ಟೋಬರ್ 29 ರಂದು ರೂ.1,499 ಪಾವತಿಸಿ, ಡೆನಿವಾ ಪ್ಯಾಂಟ್ ಖರೀದಿಸಿದರು. ಈ ವೇಳೆಯಲ್ಲಿ ಇಲ್ಲಿಯೇ ಲೈಫ್ ಸ್ಟೈಲ್ ಇಂಟರ್ನ್ಯಾಷನಲ್ ವಾಣಿಜ್ಯ ಸಂಸ್ಥೆ ಪ್ಯಾಂಟ್ ಮಾರಾಟದ ವೇಳೆ ಹೆಚ್ಚುವರಿಯಾಗಿ ರೂ.10/- ಪೇಪರ್ ಬ್ಯಾಗ್ಗೆ ಪಡೆಯಲಾಯಿತು.
ಗ್ರಾಹಕರಾದ ಆರ್. ಬಸವರಾಜ್ ಇವರ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದಲ್ಲಿ ದೂರನ್ನು ದಾಖಲಿಸಿ ವಾಣಿಜ್ಯ ಸಂಸ್ಥೆ ವಿರುದ್ದ ರೂ.50,000 ಮಾನಸಿಕ ಕಿರುಕುಳ ಹಾಗೂ ದೂರು ದಾಖಲಿಸಲು ಖರ್ಚು ಮಾಡಿದ ಮೊ ರೂ.10,000 ಗಳನ್ನು ಪಾವತಿಸುವಂತೆ ದೂರನ್ನು ದಾಖಲಿಸಿದರು.
ವಾಣಿಜ್ಯ ಸಂಸ್ಥೆಗೆ ನೋಟಿಸ್ ಜಾರಿ ಮಾಡಿದ್ದು ಈ ಸಂಸ್ಥೆ ವಕೀಲರ ಮುಖಾಂತರ ಹಾಜರಾಗಿ ಬ್ಯಾಗ್ಗೆ ಹೆಚ್ಚುವರಿಯಾಗಿ ಪಡೆದ ಹಣಕ್ಕೆ ಸಮರ್ಥಿಸಿಕೊಂಡಿತ್ತು. ಆದರೆ ಗ್ರಾಹಕರ ಆಯೋಗ ಈ ಮೊದಲು ರಾಷ್ಟ್ರೀಯ ಗ್ರಾಹಕರ ಆಯೋಗ ಬಿಗ್ ಬಜಾರ್ ವಿರುದ್ಧ ಸಾಯಲ್ ದಾವ ಪ್ರಕರಣದ ನ್ಯಾಯ ನಿರ್ಣಯದ ತೀರ್ಪಿನ ಅನುಗುಣವಾಗಿ ವಾಣಿಜ್ಯ ಸಂಸ್ಥೆಗಳು ಕ್ಯಾರಿ ಬ್ಯಾಗ್ಗಳಿಗೆ ಹೆಚ್ಚಿನ ಹಣವನ್ನು ಪಡೆಯುವಂತಿಲ್ಲ ಎಂಬ ತೀರ್ಪನ್ನು ಉಲ್ಲೇಖಿಸಿ ಹೆಚ್ಚುವರಿಯಾಗಿ ರೂ.10 ಪಡೆದ ಸಂಸ್ಥೆಯ ಕ್ರಮವು ಗ್ರಾಹಕರ ಸಂರಕ್ಷಣಾ ಕಾಯ್ದೆಯ ಅಡಿಯಲ್ಲಿ ಅನುಚಿತ ವ್ಯಾಪಾರ ಪದ್ದತಿಯೆಂದು ಪರಿಗಣಿಸಿ ದಾವಣಗೆರೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷರಾದ ಮಹಂತೇಶ ಈರಪ್ಪ ಶಿಗ್ಲಿ, ಸದಸ್ಯರಾದ ತ್ಯಾಗರಾಜನ್ ಮತ್ತು ಮಹಿಳಾ ಸದಸ್ಯರಾದ ಶ್ರೀಮತಿ ಬಿ.ಯು. ಗೀತಾ ಇವರು ವಾಣಿಜ್ಯ ಸಂಸ್ಥೆಗೆ ರೂ.7000 ದಂಡವಿದಿಸಿ ಆದೇಶಿಸಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243