ರಾಜಕೀಯ
ಬರಿದಾಗುತ್ತಿದೆ ಕರ್ನಾಟಕದ ಖಜಾನೆ
- ವಿವೇಕಾನಂದ ಹೆಚ್.ಕೆ
ಅಂದಿನ ಸಂಪಾದನೆ ಅಂದದಿಗೆ ಮಾತ್ರ ಎಂಬಂತಾಗಿದೆ. ಬಹುತೇಕ ಕೆಳ ಮಧ್ಯಮ ವರ್ಗದ ಅಥವಾ ಬಡವರ ಮನೆಯ ಸಂಸಾರದಂತಾಗಿದೆ. ಮೈನಸ್ ಬಜೆಟ್ ಆಗಿ ಮುಂದುವರಿಯುತ್ತಿದೆ. ಹೇಗೋ ಕಷ್ಟ ಪಟ್ಟು ತೂಗಿಸಿಕೊಂಡು ಹೋಗುವಂತಾಗಿದೆ.
ಕರ್ನಾಟಕ ಮೂಲದ ವಿಪ್ರೋ, ಇನ್ಫೋಸಿಸ್, ಬಯೋಕಾನ್ ಮುಂತಾದ ಖಾಸಗಿ ಸಂಸ್ಥೆಗಳು ಏರು ಮುಖದ ಪ್ರಗತಿ ದಾಖಲಿಸುತ್ತಿವೆ. ಸರ್ಕಾರದ ಲೆಕ್ಕವೂ ಏರು ಮುಖದಲ್ಲಿದೆ ಆದರೆ ಸಾಲ ಮತ್ತು ಬಡ್ಡಿಯ ಲೆಕ್ಕದಲ್ಲಿ. ಇದಕ್ಕೆ ಕೇವಲ ಒಂದು ಪಕ್ಷ, ಸರ್ಕಾರ ಅಥವಾ ವ್ಯಕ್ತಿ ಕಾರಣವಲ್ಲ. ಇಡೀ ಸರ್ಕಾರಿ ವ್ಯವಸ್ಥೆಯ ಇತಿಹಾಸ ಕಾರಣವಾಗಿದೆ. ಇದೇನು ಆಶ್ಚರ್ಯಪಡುವಂತಹ ವಿಷಯವಲ್ಲ. ಸರ್ಕಾರದ ಆದಾಯ ಖರ್ಚು ಲೆಕ್ಕಗಳನ್ನು ಸೂಕ್ಷ್ಮವಾಗಿ ಮತ್ತು ಕೂಲಂಕಷವಾಗಿ ಪರಿಶೀಲಿಸಿದರೆ ಎಲ್ಲರಿಗೂ ಅರ್ಥವಾಗುತ್ತದೆ.
ಸರ್ಕಾರವೆಂಬುದು ಆಳುವ ಪಕ್ಷಗಳಿಗೆ ಬಾಡಿಗೆ ಮನೆ ಇದ್ದಂತೆ. ಅದು ಯಾವತ್ತಿಗೂ ತಾತ್ಕಾಲಿಕ ಎಂಬ ಅರಿವು ಅಧಿಕಾರಸ್ಥರಿಗೆ ತಿಳಿದಿರುತ್ತದೆ. ಆದ್ದರಿಂದ ಅವರು ಎಷ್ಟು ಸಾಧ್ಯವೋ ಅಷ್ಟು ತಮ್ಮ ಹಿತಾಸಕ್ತಿಗೆ ಅನುಕೂಲಕರ ಕೆಲಸಗಳನ್ನು ಮಾಡಿ ತಕ್ಷಣದ ಲಾಭಗಳನ್ನು ಮಾಡಿಕೊಂಡು ದೀರ್ಘಕಾಲದಲ್ಲಿ ಅದರ ಪರಿಣಾಮಗಳನ್ನು ನಿರ್ಲಕ್ಷಿಸುತ್ತಾರೆ.
ಅದರಿಂದಾಗಿಯೇ ಇವತ್ತಿನ ಖಜಾನೆಯ ಪರಿಸ್ಥಿತಿ. ಇದು ತಾತ್ಕಾಲಿಕವೇ ಇರಬಹುದು. ಮುಂದೆ ಸರಿ ಹೋಗಬಹುದು. ಆದರೆ ಸರ್ಕಾರದ ಮಟ್ಟದಲ್ಲಿ ಈ ಸ್ಥಿತಿ ಒಳ್ಳೆಯದಲ್ಲ. ಒಬ್ಬ ವ್ಯಕ್ತಿ ಅಥವಾ ಒಂದು ಖಾಸಗಿ ಸಂಸ್ಥೆಯ ಏರಿಳಿತಗಳು ಸಹಜ ಮತ್ತು ಅದರ ಪರಿಣಾಮ ಕಡಿಮೆ ಪ್ರಮಾಣದಲ್ಲಿ ಇರುತ್ತದೆ. ಆದರೆ ಶಾಸಕಾಂಗ ಕಾರ್ಯಾಂಗ ನ್ಯಾಯಾಂಗಗಳ ಹದ್ದಿನ ಕಣ್ಣಿನಲ್ಲಿ, ಅಂಕಗಳ ದೃಷ್ಟಿಯಿಂದ ಅತಿ ಬುದ್ದಿವಂತರಾದವರು ಇದನ್ನು ನಿರ್ವಹಿಸುತ್ತಿರುತ್ತಾರೆ. ರಾಜ್ಯದ ಎಲ್ಲಾ ಅಧಿಕಾರ ಮತ್ತು ಸಂಪನ್ಮೂಲಗಳು ಅವರ ನಿಯಂತ್ರಣದಲ್ಲಿಯೇ ಇರುತ್ತವೆ. ಅಲ್ಲದೆ ಇಡೀ ರಾಜ್ಯದ ಜನರ ಬದುಕಿನ ಪ್ರಶ್ನೆ ಅಡಗಿರುತ್ತದೆ. ಆದ್ದರಿಂದ ತುಂಬಾ ತುಂಬಾ ಜವಾಬ್ದಾರಿಯುತವಾಗಿ ಆರ್ಥಿಕ ಪರಿಸ್ಥಿತಿ ನಿಭಾಯಿಸಬೇಕಾಗುತ್ತದೆ.
ಕೇವಲ ಇಷ್ಟೇ ಅಲ್ಲ. ಈ ಸರ್ಕಾರ ನಡೆಸಲು ರಾಜ್ಯ ಆದಾಯದ ಅತಿದೊಡ್ಡ ಭಾಗ ಅದರ ನಿರ್ವಹಣೆಗೇ ಹೋಗುತ್ತದೆ. ಹೀಗಿದ್ದರೂ ಅವ್ಯವಸ್ಥೆ ಇದೆ ಎಂದರೆ ಸರ್ಕಾರದ ಅದಕ್ಷತೆಗೆ ಇದಕ್ಕಿಂತ ಉದಾಹರಣೆ ಬೇಕಿಲ್ಲ.
ಹಾಗಾದರೆ, ಕರ್ನಾಟಕ ಭಾರತದಲ್ಲಿ ಬಡ ರಾಜ್ಯವೇ ? ಇಲ್ಲಿನ ಆದಾಯ ಕಡಿಮೆಯಾಗುತ್ತಿದೆಯೇ ? ಸಂಪನ್ಮೂಲಗಳು ಬರಿದಾಗಿವೆಯೇ ?ಖಂಡಿತ ಇಲ್ಲ. ಹಣವೇ ಅಭಿವೃದ್ಧಿ ಎಂದು ಭಾವಿಸಿರುವ ಈ ಆಧುನಿಕ ಕಾಲದಲ್ಲಿ, ಮಾಹಿತಿ ತಂತ್ರಜ್ಞಾನದ ಸೇವೆಯಲ್ಲಿ ಬೆಂಗಳೂರು ವಿಶ್ವದ ಒಂದೋ ಎರಡನೆಯದೋ ಅತಿ ಹೆಚ್ಚು ಹಣ ಸಂಪಾದನೆಯ ನಗರವಾಗಿದೆ. ಶಿಕ್ಷಣ, ಆರೋಗ್ಯ ವಿಷಯದಲ್ಲೂ ಮುಂಚೂಣಿಯಲ್ಲಿದೆ. ಪ್ರವಾಸೋದ್ಯಮದಲ್ಲಿ ಮೈಸೂರು, ರೇಷ್ಮೆ ಬೆಳೆಯಲ್ಲಿ ರಾಮನಗರ, ಮತ್ಸೋದ್ಯಮದಲ್ಲಿ ಕರಾವಳಿ ಕರ್ನಾಟಕ, ಅಡಿಕೆ ಕಾಫಿ ಉತ್ಪಾದನೆಯಲ್ಲಿ ಮಲೆನಾಡು, ವಾಣಿಜ್ಯ ನಗರಗಳಾಗಿ ಹುಬ್ಬಳ್ಳಿ ಬೆಳಗಾವಿ, ದ್ರಾಕ್ಷಿ ದಾಳಿಂಬೆ ತರಕಾರಿ ಕೃಷಿಯಲ್ಲಿ ಬಿಜಾಪುರ ಯಾದಗಿರಿ, ಸಿದ್ದ ಉಡುಪು ಕ್ಷೇತ್ರದಲ್ಲಿ ದಾವಣಗೆರೆ ಮುಂತಾದ ಲಾಭದಾಯಕ ಪ್ರದೇಶಗಳನ್ನು ಕರ್ನಾಟಕ ಒಳಗೊಂಡಿದೆ. ಆದರೂ ಈ ಪರಿಸ್ಥಿತಿ ಏಕೆ ?
ವಾಸ್ತವದಲ್ಲಿ ಸರ್ಕಾರದ ಆದಾಯ ವರ್ಷದಿಂದ ವರ್ಷಕ್ಕೆ ಹೆಚ್ಚಾಗುತ್ತಲೇ ಇದೆ. ಆದರೆ ಅದನ್ನು ಖರ್ಚು ಮಾಡುವ ರೀತಿ ಅಸಮರ್ಪಕವಾಗಿದೆ. ಮುಖ್ಯವಾಗಿ ಭ್ರಷ್ಟಾಚಾರ ಮತ್ತು ದುಂದು ವೆಚ್ಚ ಇದಕ್ಕೆ ಅತಿಮುಖ್ಯ ಕಾರಣವಾಗಿದೆ. ಉದಾಹರಣೆಗೆ 100 ರೂಪಾಯಿ ಖರ್ಚು ಮಾಡುವ ಅವಶ್ಯಕತೆ ಇರುವಲ್ಲಿ ಸುಮಾರು 500 ರಷ್ಟು ರೂಪಾಯಿ ಅಧಿಕೃತವಾಗಿಯೇ ಖರ್ಚಾಗುತ್ತದೆ. ಪಾರದರ್ಶಕ ಕಾನೂನು, ಟೆಂಡರ್ ಪ್ರಕ್ರಿಯೆ ಎಲ್ಲಾ ಇದ್ದರೂ ಆ ನಿಯಮಗಳನ್ನು ಸಹ ವಂಚಿಸಲಾಗುತ್ತದೆ.
ಈ ಅವ್ಯವಸ್ಥೆ ತಡೆಯಲು ನಮ್ಮಲ್ಲಿ ಕಂಟ್ರೋಲರ್ ಅಂಡ್ ಆಡಿಟರ್ ಜನರಲ್ ಎಂಬ ಲೆಕ್ಕ ಪತ್ರ ಇಲಾಖೆಯಿದೆ. ರಿಸರ್ವ್ ಬ್ಯಾಂಕ್, ಚುನಾವಣಾ ಆಯೋಗ, ತೆರಿಗೆ ಇಲಾಖೆಯ ರೀತಿ ಇದೂ ಸಹ ಸರ್ಕಾರದ ನಿಯಂತ್ರಣದಲ್ಲಿ ಇಲ್ಲದ ಸ್ವಾಯುತ್ತ ಸಂಸ್ಥೆ. ಸರ್ಕಾರದ ಪ್ರತಿ 1 ರೂಪಾಯಿ ಖರ್ಚು ವೆಚ್ಚ ಮತ್ತು ಅದರ ಸದುಪಯೋಗದ ಮೇಲೆ ನಿಗಾ ಇಡುವ ಸಂಸ್ಥೆ ಇದು. ಆದರೂ ವ್ಯವಸ್ಥೆಯ ಮೇಲೆ ನಿಯಂತ್ರಣ ಸಾಧ್ಯವಾಗುತ್ತಿಲ್ಲ.
ಸಾಮಾನ್ಯ ಪರಿಸ್ಥಿತಿಯಲ್ಲಿಯೇ ಹಣದ ಕೊರತೆಯ ವಿಷಯದಲ್ಲಿ ಎದುಸಿರು ಬಿಡುತ್ತಿರುವಾಗ ಇನ್ನು ಪ್ರಾಕೃತಿಕ ವಿಕೋಪದ ಸಂದರ್ಭದಲ್ಲಿ ಭೀಕರತೆ ಎದುರಾಗದೆ ಇರುತ್ತದೆಯೇ ? ಸರ್ಕಾರಗಳು ಓಟಿನ ರಾಜಕೀಯದಲ್ಲಿ ತಮಗೆ ಇಷ್ಟ ಬಂದಂತೆ ಯೋಜನೆಗಳನ್ನು ಘೋಷಿಸುತ್ತಾರೆ. ಯಾವುದೇ ಪೂರ್ವ ತಯಾರಿ, ಹಣಕಾಸಿನ ನಿರ್ಧಿಷ್ಟ ಮಾನದಂಡ ಇರುವುದಿಲ್ಲ. ಹೇಗೋ ಮುಂದೆ ನೋಡೋಣ. ಈಗ ಜನ ಮೆಚ್ಚಿದರೆ ಸಾಕು ಎಂದು ಧೋರಣೆ ಇವರದು. ಜನರೂ ಸಹ ತಾತ್ಕಾಲಿಕ ಲಾಭಕ್ಕೆ ಹೆಚ್ಚು ಕಾತುರರಾಗಿರುತ್ತಾರೆ. ಆ ಎಲ್ಲದರ ಪರಿಣಾಮ ಸದ್ಯಕ್ಕೆ ದಿವಾಳಿಯತ್ತ ಕರ್ನಾಟಕ ಸರ್ಕಾರದ ಆರ್ಥಿಕ ಪರಿಸ್ಥಿತಿ.
ಭಯ ಪಡುವ ಅವಶ್ಯಕತೆ ಇಲ್ಲ. ಕರ್ನಾಟಕ ನಿಜಕ್ಕೂ ಸಂಪದ್ಭರಿತ ರಾಜ್ಯ. ಆದರೆ ಇತ್ತೀಚಿನ ಸಮ್ಮಿಶ್ರ ಸರ್ಕಾರಗಳ ಬ್ಲ್ಯಾಕ್ ಮೇಲ್ ರಾಜಕೀಯದಲ್ಲಿ, ಜಾತಿ ಅಭಿಮಾನದಲ್ಲಿ, ಮತ್ತು ಒಟ್ಟು ವ್ಯವಸ್ಥೆಯ ಭ್ರಷ್ಟಾಚಾರದಲ್ಲಿ ನಲುಗುತ್ತಿದೆ. ಜನರು ಚುನಾವಣಾ ವ್ಯವಸ್ಥೆಯಲ್ಲಿ ಜಾಗೃತರಾದರೆ ಇದಕ್ಕೆ ಪರಿಹಾರ ಖಂಡಿತ ಸಿಗುತ್ತದೆ. ಅಲ್ಲಿಯವರೆಗೂ ಜನರನ್ನು ಪ್ರಬುದ್ದರಾಗಿಸುವ ಕೆಲಸ ನಾವು ಮಾಡೋಣ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಶಿವಮೊಗ್ಗಕ್ಕೆ ಇಂದು ಪ್ರಧಾನಿ ನರೇಂದ್ರ ಮೋದಿ
ಸುದ್ದಿದಿನ, ಶಿವಮೊಗ್ಗ : ಪ್ರಧಾನಮಂತ್ರಿ ನರೇಂದ್ರ ಮೋದಿ ಇಂದು ಮಧ್ಯಾಹ್ನ 2 ಗಂಟೆಗೆ ಶಿವಮೊಗ್ಗದಲ್ಲಿ ಬೃಹತ್ ಸಾರ್ವಜನಿಕ ಸಭೆಯನ್ನುದ್ದೇಶಿ ಮಾತನಾಡಲಿದ್ದಾರೆ.
ಯುವಜನರು, ಮಹಿಳೆಯರು, ರೈತರು ಸೇರಿ ಸುಮಾರು ಎರಡೂವರೆ ಲಕ್ಷಕ್ಕೂ ಹೆಚ್ಚು ಜನರು ಕಾರ್ಯಕ್ರಮದಲ್ಲಿ ಭಾಗವಹಿಸುವ ನಿರೀಕ್ಷೆ ಇದೆ ಎಂದು ವಿಧಾನಪರಿಷತ್ ಮುಖ್ಯ ಸಚೇತಕ ಎನ್.ರವಿಕುಮಾರ್ ಶಿವಮೊಗ್ಗದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಚುನಾವಣಾ ಬಾಂಡ್ ಕುರಿತ ದತ್ತಾಂಶ ಬಿಡುಗಡೆ
ಸುದ್ದಿದಿನ,ನವದೆಹಲಿ : ಚುನಾವಣಾ ಬಾಂಡ್ ಕುರಿತಂತೆ ಸುಪ್ರೀಂಕೋರ್ಟ್ನ ರಿಜಿಸ್ಟ್ರಿ ಇಂದ ಲಭ್ಯವಾದ ಅಂಕಿಕೃತ ದತ್ತಾಂಶ ಮಾದರಿಯನ್ನು ಚುನಾವಣಾ ಆಯೋಗ ಭಾನುವಾರ ತನ್ನ ವೆಬ್ಸೈಟ್ನಲ್ಲಿ ಅಪ್ಲೋಡ್ ಮಾಡಿದೆ. www.eci.gov.in/candidate-politicalparty ವೆಬ್ಸೈಟ್ನಲ್ಲಿ ಈ ದತ್ತಾಂಶ ಲಭ್ಯವಿರುತ್ತದೆ.
ಸುಪ್ರೀಂಕೋರ್ಟ್ ನಿರ್ದೇಶಿಸಿದಂತೆ ರಾಜಕೀಯ ಪಕ್ಷಗಳು ಚುನಾವಣಾ ಬಾಂಡ್ ಕುರಿತ ದತ್ತಾಂಶಗಳನ್ನು ಮೊಹರು ಹಾಕಿದ ಲಕೋಟೆಯಲ್ಲಿ ಸಲ್ಲಿಸಿದ್ದವು ಎಂದು ಚುನಾವಣಾ ಆಯೋಗದ ಹೇಳಿಕೆ ತಿಳಿಸಿದೆ. ರಾಜಕೀಯ ಪಕ್ಷಗಳಿಂದ ಸ್ವೀಕರಿಸಿದ ಮೊಹರು ಹಾಕಿದ ಲಕೋಟೆಗಳನ್ನು ತೆರೆಯದೇ ಸುಪ್ರೀಂಕೋರ್ಟ್ಗೆ ಸಲ್ಲಿಸಲಾಗಿತ್ತು.
ಇದೇ 15ರಂದು ಸುಪ್ರೀಂಕೋರ್ಟ್ ನೀಡಿದ ಆದೇಶದ ಮೇರೆಗೆ ಸುಪ್ರೀಂಕೋರ್ಟ್ನ ರಿಜಿಸ್ಟ್ರಿ, ಭೌತಿಕ ಪ್ರತಿ ಹಾಗೂ ಅದರ ಡಿಜಿಟಲ್ ದಾಖಲೆಯಿರುವ ಪೆನ್ಡ್ರೈವ್ ಒಳಗೊಂಡ ಮೊಹರು ಹಾಕಿದ ಲಕೋಟೆಯನ್ನು ಹಿಂತಿರುಗಿಸಿತ್ತು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಕಾಟನ್ ಕ್ಯಾಂಡಿ ಮತ್ತು ಗೋಬಿ ಮಂಚೂರಿ ನಿಷೇಧ : ಸಚಿವ ದಿನೇಶ್ ಗುಂಡೂರಾವ್
ಸುದ್ದಿದಿನ, ಬೆಂಗಳೂರು : ಕೃತಕ ಬಣ್ಣ ಬಳಸಿದ ಕಾಟನ್ ಕ್ಯಾಂಡಿ ಮತ್ತು ಗೋಬಿ ಮಂಚೂರಿ ಮಾರಾಟವನ್ನು ತಕ್ಷಣದಿಂದ ಜಾರಿಗೆ ಬರುವಂತೆ ರಾಜ್ಯಾದ್ಯಂತ ನಿಷೇಧಿಸಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಆದಾಗ್ಯೂ, ಬಣ್ಣ ಹಾಗೂ ರಾಸಾಯನಿಕ ಹಾಕದೇ ಇರುವ ಈ ತಿನಿಸುಗಳ ಮಾರಾಟಕ್ಕೆ ನಿರ್ಬಂಧ ಇಲ್ಲ ಎಂದು ಹೇಳಿದ್ದಾರೆ.
ಬೆಂಗಳೂರಿನಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಕ್ಕಳು ಸೇರಿದಂತೆ ಎಲ್ಲ ವಯೋಮಾನದವರಿಗೂ ಅಚ್ಚುಮೆಚ್ಚಾದ ಈ ಎರಡು ತಿನಿಸುಗಳನ್ನು ಆಕರ್ಷಕವಾಗಿ ಕಾಣುವಂತೆ ಮಾಡಲು ಬಳಸುವ ಕೃತಕ ಬಣ್ಣಗಳಲ್ಲಿ ಅಪಾಯಕಾರಿ ರಾಸಾಯನಿಕಗಳು ಇರುವುದು ಪರೀಕ್ಷೆಗಳಿಂದ ದೃಢಪಟ್ಟಿದೆ ಎಂದರು. ರಾಜ್ಯದ ಹಲವೆಡೆ ಬೀದಿಬದಿಯ ಗಾಡಿಗಳು, ಹೋಟೆಲ್ಗಳಲ್ಲಿ ತಯಾರಿಸಿದ ಗೋಬಿ ಮಂಚೂರಿ ತಿನಿಸಿನ 171ಮಾದರಿಗಳನ್ನು ಪರೀಕ್ಷಿಸಲಾಗಿದೆ. ಈ ಪೈಕಿ 107ಮಾದರಿಗಳಲ್ಲಿ ಅಸುರಕ್ಷಿತ ರಾಸಾಯನಿಕಗಳು ಪತ್ತೆಯಾಗಿರುವುದು ಆತಂಕಕಾರಿಯಾಗಿದೆ ಎಂದರು.
ಕೃತಕ ಬಣ್ಣಗಳಲ್ಲಿರುವ ರೋಡೊಮೈನ್-ಬಿ ಮತ್ತು ಟಾಟ್ರಝೀನ್ ರಾಸಾಯನಿಕಗಳು ಕ್ಯಾನ್ಸರ್ ರೋಗಕ್ಕೆ ಕಾರಣವಾಗಬಹುದು ಎನ್ನುವ ಅಂಶ ತಿಳಿದುಬಂದಿದೆ. ಬಣ್ಣ ಹಾಕಿದ ಗೋಬಿಮಂಚೂರಿ ಮತ್ತು ಕಾಟನ್ಕ್ಯಾಂಡಿಗಳನ್ನು ಮಾರಾಟ ಮಾಡುವವರ ಮೇಲೆ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುವುದು. ಏಳು ವರ್ಷದರೆಗೆ ಜೈಲು ಶಿಕ್ಷೆ, 10 ಲಕ್ಷ ರೂಪಾಯಿವರೆಗೆ ದಂಡ ಅಥವಾ ಜೀವಾವಧಿ ಶಿಕ್ಷೆಗೂ ಅವಕಾಶವಿದೆ ಎಂದು ಸಚಿವರು ಎಚ್ಚರಿಕೆ ನೀಡಿದರು.
ಹೇಳಿಕೆ
- ಬಣ್ಣ ಹಾಕಿರುವ ಈ ಎರಡು ತಿನಿಸುಗಳನ್ನು ಸೇವಿಸಬಾರದು ಎಂದು ಸಾರ್ವಜನಿಕರಿಗೂ ಎಚ್ಚರಿಕೆ ನೀಡಲಾಗಿದೆ. ಸಾರ್ವಜನಿಕರ ಆರೋಗ್ಯ ರಕ್ಷಣೆ ದೃಷ್ಟಿಯಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಇದಲ್ಲದೇ, ಕಬಾಬ್, ಪಾನಿಪೂರಿ ಮೊದಲಾದ ತಿನಿಸುಗಳಲ್ಲೂ ಕೃತಕ ಬಣ್ಣಗಳ ಬಳಕೆ ಆಗುತ್ತಿದೆಯೇ ಎಂದು ಪರಿಶೀಲಿಸಲಾಗುತ್ತಿದೆ.
| ಸಚಿವ ದಿನೇಶ್ ಗುಂಡೂರಾವ್
ಟ್ವೀಟ್
In consideration of public health, we are banning the use of artificial colours in Gobi Manchurian and cotton candy. Violation of this ban may result in imprisonment for up to 7 years and a fine of up to 10 lakhs.
Following reports of substandard quality and the presence of… pic.twitter.com/z2KWHi8Jbd
— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) March 11, 2024
ಸುದ್ದಿದಿನ.ಕಾಂ|ವಾಟ್ಸಾಪ್|9980346243