ದಿನದ ಸುದ್ದಿ
ಪ್ರಖ್ಯಾತ ನೇತ್ರತಜ್ಞ ಡಾ.ಎಂ.ಸಿ.ಮೋದಿ ಬಗ್ಗೆ ನಿಮಗೆಷ್ಟು ಗೊತ್ತು..!?
- ಸಂಗಮೇಶ ಎನ್ ಜವಾದಿ, ಕೊಡಂಬಲ
ಭಾರತದ ಪ್ರಖ್ಯಾತ ನೇತ್ರತಜ್ಞರಲ್ಲೊಬ್ಬರು,ಅವರ ಅರವತ್ತು ವರ್ಷಕ್ಕಿಂತ ಮೇಲ್ಪಟ್ಟ ವೃತ್ತಿ ಜೀವನದಲ್ಲಿ ಸುಮಾರು 7 ಲಕ್ಷಕ್ಕಿಂತ ಹೆಚ್ಚು ಜನರಿಗೆ ನೇತ್ರ ಶಸ್ತ್ರ ಚಿಕಿತ್ಸೆ ಮಾಡಿ ವೈದ್ಯ ಲೋಕದಲ್ಲಿ ಜಗತ್ತಪ್ರಸಿದ್ದಿ ಪಡೆದಿರುವ ಎಂ.ಸಿ.ಮೋದಿಯವರ ಸೇವೆ ಅಜರಾಮ ಮತ್ತು ಅನನ್ಯ ಎಂದೇ ಹೇಳಬೇಕಾಗುತ್ತದೆ.
ಅಂದು ಮುಂಬೈ ಒಂದರ ಸಭೆಯಲ್ಲಿ ಸೇರಿದ್ದ ಅನೇಕ ದೇಶಭಕ್ತ ಮಹನೀಯರ ಮಾತುಗಳಿಂದ ಪ್ರಭಾವಿತರಾಗಿ,ತಮಗಿದ್ದ ಸಾವಿರಾರು ರೂಪಾಯಿಗಳ ಆದಾಯದ ಮೂಲವಾಗಿದ್ದ ಖಾಸಗಿ ವೈದ್ಯ ವೃತ್ತಿಯನ್ನು ತೊರೆದು, ಬಿಡಿಗಾಸು ಪಡೆಯದೇ ಅಂಧರಿಗೆ ನೇತ್ರಚಿಕಿತ್ಸೆ ಮಾಡಲು ಸಂಕಲ್ಪಿಸಿ ಸಾವಿರಾರು ಜನರಿಗೆ ನೇತ್ರ ಶಸ್ತ್ರಚಿಕಿತ್ಸೆ ಮಾಡುವುದರೊಂದಿಗೆ ಜನಸಾಮಾನ್ಯರ ಪ್ರೀತಿ – ಸ್ನೇಹಕ್ಕೆ ಸಾಕ್ಷಿಯಾಗುವ ಮೂಲಕ ವಿಶ್ವ ಗಿನ್ನಿಸ್ ದಾಖಲೆ ಮಾಡಿದ ಈ ನಾಡಿನ ಧೀಮಂತ ವೈದ್ಯ ಲೋಕದ ವೈದ್ಯರಾದ ಮುರುಗಪ್ಪ ಚನ್ನವೀರಪ್ಪ ಮೋದಿಯವರು ಎಂದು ಹೆಮ್ಮೆಯಿಂದ ಹೇಳುತ್ತೇವೆ.
ಜನನ,ಕಾಯಕ ಜೀವನ
ಮುರಿಗೆಪ್ಪ ಚನ್ನವೀರಪ್ಪ ಮೋದಿಯವರು ಕರ್ನಾಟಕ ರಾಜ್ಯದ ಬಾಗಲಕೋಟೆ ಜಿಲ್ಲೆಯ ಬೀಳಗಿಯ ಗ್ರಾಮದ ಚನ್ನವೀರಪ್ಪ ಮತ್ತು ದುಂಡಮ್ಮ ದಂಪತಿಗಳ ಮಗನಾಗಿ ದಿನಾಂಕ 04-10-1916 ರಲ್ಲಿ ಜನಿಸಿದರು. ಜಮಖಂಡಿಯ ಪಿ ಬಿ ಶಾಲೆಯಲ್ಲಿ ಪ್ರಾಥಮಿಕ ,ಪ್ರೌಢ ಶಿಕ್ಷಣ ಪಡೆದು ನಂತರ ಬಡತನದ ನಡುವೆಯೂ ವಿದ್ಯಾರ್ಜನೆ ಮುಂದುವರೆಸಿ ಬೆಳಗಾವಿ ಆಯುರ್ವೇದ ಕಾಲೇಜಿನಲ್ಲಿ ಅಭ್ಯಾಸ ಮಾಡಿದರು.
ತದನಂತರ ಮತ್ತೆ ಕೆಬಿಎಚ್ಬಿ ಕಣ್ಣಿನ ಆಸ್ಪತ್ರೆ ಹಾಗೂ ರಾಮವಾಡಿ ಕಣ್ಣಿನ ಆಸ್ಪತ್ರೆಯಲ್ಲಿ ವೈದ್ಯ ಶಿಕ್ಷಣ ಪಡೆದರು.ಇದಲ್ಲದೆ ಮೋದಿಯವರು ಕೊಲಂಬಿಯಾ ಮತ್ತು ನ್ಯೂಯಾರ್ಕ್ ವಿಶ್ವವಿದ್ಯಾಲಯಗಳಲ್ಲಿ ಸ್ನಾತಕೋತ್ತರ ಪದವಿಗಳಿಸಿದರು.ನಂತರ ಬೆಳಗಾವಿಯಲ್ಲಿ ಅವರು ಕಾಯಕ ಜೀವನ ಆರಂಭಿಸಿ ದಾವಣಗೆರೆಯಲ್ಲಿ ನೆಲೆಸಿದರು.
1942 ರಲ್ಲಿ ಕ್ವಿಟ್ ಇಂಡಿಯಾ ಚಳುವಳಿಯ ಸಮಯದಲ್ಲಿ ಮಹಾತ್ಮ ಗಾಂಧಿಯವರ ಭಾಷಣದಿಂದ ಪ್ರೇರಿತರಾಗಿ ಕೆಲವೇ ಸ್ವಯಂಸೇವಕರ ಜತೆ ಹಳ್ಳಿಗಳಿಗೆ ಹೋಗಿ ರೋಗಿಗಳಿಂದ ಹಣ ಪಡೆಯದೆ ಕಣ್ಣಿನ ಶಸ್ತ್ರ ಚಿಕಿತ್ಸೆ ಮಾಡುತ್ತಿದ್ದರು,ಮಾಡಿದ ಶ್ರೇಯಸ್ಸು ಇವರಿಗೆ ಸಲ್ಲುತ್ತದೆ.
ಜೊತೆಗೆ ಕರ್ನಾಟಕ, ಆಂಧ್ರ ಪ್ರದೇಶ, ತಮಿಳುನಾಡು, ಮಹಾರಾಷ್ಟ್ರ ಮತ್ತು ಇತರ ಹಲವಾರು ರಾಜ್ಯಗಳಲ್ಲಿ ಕಣ್ಣಿನ ಶಸ್ತ್ರ ಚಿಕಿತ್ಸಾ ಶಿಬಿರಗಳನ್ನು ಏರ್ಪಡಿಸಿ ಉಚಿತ ತಪಾಸಣೆ ಮತ್ತು ಚಿಕಿತ್ಸೆ ಮಾಡಿರುತ್ತಾರೆ. ಕಣ್ಣಿನ ಪೊರೆ (ಕ್ಯಟರಾಕ್ಟ್) ತೆಗೆಯುವ ಶಸ್ತ್ರ ಚಿಕಿತ್ಸೆಯಲ್ಲಿ ಪರಿಣಿತಿ ಹೊಂದಿದ್ದ ಡಾ.ಮೋದಿಯವರು ಪ್ರತಿ ಗ್ರಾಮದಲ್ಲೂ ಶಾಲೆ, ಕಾಲೇಜುಗಳನ್ನು ತೆಗೆದುಕೊಂಡು ಅದನ್ನೇ ಚಿಕಿತ್ಸಾ ಕೇಂದ್ರವಾಗಿ ಪರಿವರ್ತಿಸಿ ಸತತವಾಗಿ ಶಸ್ತ್ರಚಿಕಿತ್ಸೆ ನಡೆಸುತ್ತಿದ್ದರು.
ರಷ್ಯಾ ಮತ್ತು ಅಮೇರಿಕ ಸೇರಿದಂತೆ ಹಲವಾರು ರಾಷ್ಟ್ರಗಳಲ್ಲೂ ಅವರು ಸೇವೆ ಸಲ್ಲಿಸಿ ಗೌರವಗಳಿಗೆ ಪಾತ್ರರಾಗಿದ್ದಾರೆ.ಇದಲ್ಲದೆ ದಾವಣಗೆರೆ, ಬೆಂಗಳೂರು ಮತ್ತು ಬೆಳಗಾವಿಗಳಲ್ಲಿ ಕಣ್ಣು ಚಿಕಿತ್ಸಾಲಯಗಳನ್ನು ಸ್ಥಾಪಿಸಿದ ಶ್ರೀಯುತರು ತಮ್ಮ ಆಸ್ಪತ್ರೆಗಳಲ್ಲಿ ಬಡವರಿಗೆ ಉಚಿತ ಸೇವೆ ಒದಗಿಸುತ್ತಿದ್ದರು.
ಸಾಮೂಹಿಕ ನೇತ್ರ ಚಿಕಿತ್ಸೆ ಹಾಗೂ ಸಂಚಾರಿ ಘಟಕವನ್ನು ತೆರೆದ ಮೊದಲ ವೈದ್ಯ ಎಂಬ ಖ್ಯಾತಿಯನ್ನು ಗಳಿಸಿದ್ದ ಹಿರಿಮೆ ಇವರದು ಜೊತೆಗೆ ಮೋದಿಯವರು ತಮ್ಮ ಸ್ವಂತ ಹಣವನ್ನು ವ್ಯಯಿಸಿ ಬಡಜನರ ಸೇವೆ ಮಾಡುತ್ತಿದ್ದರು ಎಂಬುದು ನಾವ್ಯಾರೂ ಮರೆಯಬಾರದು.
ಇನ್ನು ಕಣ್ಣಿನ ಆರೋಗ್ಯದ ಕುರಿತು ಅವರ ಮನಸ್ಸು ಎಷ್ಟು ತುಡಿಯುತ್ತಿತ್ತೆಂದರೆ, ರೈಲಿನಲ್ಲಿ ಪ್ರಯಾಣ ಮಾಡುವಾಗಲೂ ಅಲ್ಲಿನ ಪ್ರಯಾಣಿಕರ ಕಣ್ಣುಗಳನ್ನು ಉಚಿತವಾಗಿ ಪರೀಕ್ಷಿಸಿ ಸಲಹೆ ನೀಡುತ್ತಿದ್ದರು ಎನ್ನುವುದು ಮರೆಯುವಂತಿಲ್ಲ.
ಡಾ. ಮೋದಿಯವರೇ ಹೇಳುತ್ತಿದ್ದ ಹಾಗೆ ಮೊದ ಮೊದಲು ರೋಗಿಗಳು ಇವರ ಶಿಬಿರಕ್ಕೆ ಬರಲು ಹಿಂಜರಿಯುತ್ತಿದ್ದರು.
ಆಪರೇಷನ್ ಪದ ಕೇಳಿ ಶಿಬಿರಕ್ಕೆ ಬಂದವರಲ್ಲಿ ಕೆಲವರು ಓಡಿ ಹೋಗುತ್ತಿದ್ದರು. ಆದರೆ ಕ್ರಮೇಣ ಶಸ್ತ್ರ ಚಿಕಿತ್ಸೆಗೊಳಗಾಗಿ ದೃಷ್ಟಿಯನ್ನು ಮತ್ತೆ ಪಡೆದವರನ್ನು ಕಂಡು ಶಿಬಿರಕ್ಕೆ ಬರುವವರು ಹೆಚ್ಚಾದರು. ಹೀಗೆ ಅವರ ಸೇವೆ ನಾಡಿನ ತುಂಬೆಲ್ಲ ಪಸರಿಸಿತ್ತು.
ಈ ಕಾರಣದಿಂದ ಅವರ ಸೇವೆಯನ್ನು ಗುರುತಿಸಿದ ಅಂದಿನ ಕರ್ನಾಟಕ ಸರ್ಕಾರ, ಏಕವ್ಯಕ್ತಿಯ ಯುದ್ಧ (one man’s war) ಎಂಬ ಒಂದು ಕಿರು ದೃಶ್ಯ ದಾಖಲೆಯನ್ನು ತಯಾರಿಸಿದ್ದು ವಿಶೇಷ ಹಾಗಾಗಿ ಅವರು ಮಾಡಿರುವ ಸೇವೆ ನಿಸ್ವಾರ್ಥ ಎಂಬುದು ಇದರಿಂದ ಗೊತ್ತಾಗುತ್ತದೆ.ಈ ಎಲ್ಲಾ ಕಾರಣಗಳಿಂದ ಲಕ್ಷಗಟ್ಟಲೆ ಅಂಧರಿಗೆ ದೃಷ್ಟಿ ನೀಡಿದ ಆ ಮಹಾನ್ ಚೇತನರ ಜ್ಞಾಪಕಾರ್ಥವಾಗಿ ದಾವಣಗೆರೆ ಹಾಗೂ ಬೆಂಗಳೂರಿನಲ್ಲಿ ಮೋದಿ ಕಣ್ಣಿನ ಆಸ್ಪತ್ರೆ ಎಂಬ ಹೆಸರಿನ ಆಸ್ಪತ್ರೆಯು ದಿನನಿತ್ಯ ನೂರಾರು ಜನರಿಗೆ ಸೇವೆ ನೀಡುವಲ್ಲಿ ನಿರಂತವಾಗಿದೆ.
ಗಾಂಧೀಜಿ ಪ್ರೇರಣೆ
ಭಾರತದಲ್ಲಿ ವ್ಯಾಪಕವಾಗಿ ಕಾಡುವ ಅಂಧತ್ವದ ನಿವಾರಣೆ ಇವರ ಬದುಕಿನ ಗುರಿಯಾಯಿತು. ಮಹಾತ್ಮ ಗಾಂಧಿಯವರ ಅರ್ಪಣಾಭಾವ, ಜನಸೇವೆ, ಪ್ರಭಾವ ಇವರ ಮೇಲೆ ಹೆಚ್ಚು ಪರಿಣಾಮ ಬೀರಿತು. ಸಮಾಜದ ಒಳಿತಿಗಾಗಿ ದುಡಿಯಲು ತಮ್ಮನ್ನು ತಾವು ಅರ್ಪಿಸಿಕೊಂಡರು. ವೈಯಕ್ತಿಕ ಸುಖ ಸಂತೋಷ ತ್ಯಜಿಸಿ, ತಮ್ಮ ಪ್ರತಿಭೆ ಮತ್ತು ಪರಿಣತಿಯನ್ನು ಜನಸಾಮಾನ್ಯರಿಗೆ ಮುಟ್ಟಿಸಲು ಕಣ್ಣಿಲ್ಲದವರಿಗೆ ಮೋದಿ ಬೆಳಕಾದರು ಬಂಧುಗಳೆ.
ವಿಶ್ವ ದಾಖಲೆ
ಮೋದಿಯವರು ತಿರುಪತಿಯಲ್ಲಿ ಒಂದೆ ದಿನದಲ್ಲಿ 833 ಶಸ್ತ್ರ ಚಿಕಿತ್ಸೆ ಮಾಡಿ ವಿಶ್ವ ದಾಖಲೆ ಸ್ಥಾಪಿಸಿದರು. ಒಟ್ಟಾರೆ 7 ಲಕ್ಷಕ್ಕೂ ಹೆಚ್ಚು ಕಣ್ಣಿನ ಶಸ್ತ್ರ ಚಿಕಿತ್ಸೆ ಮಾಡುವ ಮೂಲಕ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಇದನ್ನು ಗಿನ್ನಿಸ್ ದಾಖಲೆಗಳ ಪುಸ್ತಕದಲ್ಲಿ ಸೇರಿಸಲಾಗಿದೆ. ವೈದ್ಯಕೀಯ ವೃತ್ತಿಯಲ್ಲಿ ಮೋದಿಯವರ ಸಾಧನೆ ಅನುಪಮ ಮತ್ತು ಅದ್ವಿತೀಯ.
ಭಾರತದ ಬಹುತೇಕ ಪ್ರದೇಶದಲ್ಲಿ ಸಂಚರಿಸಿ, ದೃಷ್ಟಿಹೀನರಿಗೆ ದೃಷ್ಟಿ ಕೊಟ್ಟ ಖ್ಯಾತಿ ಇವರದು. ಸಂಚಾರಿ ನೇತ್ರ ಚಿಕಿತ್ಸಾಲಯವನ್ನು ಸ್ಥಾಪಿಸಿದ ಮೊದಲ ವ್ಯಕ್ತಿ. ಈಗ ಇದು ಬೃಹತ್ತಾಗಿ ಬೆಳೆದಿದೆ. ಸಾಮೂಹಿಕ, ಉಚಿತ ನೇತ್ರ ಚಿಕಿತ್ಸೆಯನ್ನು ಪ್ರಾರಂಭಿಸಿದವರಲ್ಲಿ ಇವರೇ ಮೊದಲಿಗರು. ಅಂಧತ್ವ ನಿವಾರಣೆಗೆ ಇವರು ಹಮ್ಮಿಕೊಂಡ ಆಂದೋಲನದಲ್ಲಿ 1993ರವರೆಗೆ 6,10,564 ಜನರ ಕಣ್ಣುಗಳ ಶಸ್ತ್ರ ಚಿಕಿತ್ಸೆಯನ್ನೂ, 1,21,18,630ಕ್ಕೂ ಹೆಚ್ಚಿನ ರೋಗಿಗಳ ಕಣ್ಣು ತಪಾಸಣೆಯನ್ನು ಇವರು ಮಾಡಿದ್ದಾರೆ.
ಒಂದೇ ದಿನದಲ್ಲಿ ತಿರುಪತಿಯಲ್ಲಿ 833 ಮಂದಿಗೆ ಮೋತಿಬಿಂದು ಕಣ್ಣಿನ ಶಸ್ತ್ರ ಚಿಕಿತ್ಸೆ ಮಾಡಿ ಗಿನ್ನೆಸ್ ದಾಖಲೆ ಸ್ಥಾಪಿಸಿದ್ದಾರೆ. ಈ ಹಿಂದೆ ಇಂಥ ದಾಖಲೆ ಕೆನಡದ ಆಂಟೇರಿಯೋದ ವೈದ್ಯ ಡಾ. ರಾಬರ್ಟ್ ಮ್ಯಾಕ್ಲ್ಯೂರ್ ಅವರ ಹೆಸರಿನಲ್ಲಿತ್ತು. ಈ ವೈದ್ಯ (1924-78) 20,424 ಶಸ್ತ್ರ ಚಿಕಿತ್ಸೆ ಮಾಡಿ ದಾಖಲೆ ಸ್ಥಾಪಿಸಿದ್ದ. ಡಾ. ಮೋದಿಯವರು ತಮ್ಮ ಜೀವಿತಾವಧಿಯಲ್ಲಿ ಕಣ್ಣಿನ ರೋಗಿಗಳನ್ನು ತಪಾಸಣೆ ಮಾಡಲು 46,120 ಹಳ್ಳಿಗಳನ್ನು ಸಂದರ್ಶಿಸಿದ್ದರು.
ಅಂಧರ ಬಾಳಿಗೆ ಬೆಳಕಾದರ ಡಾ.ಮೋದಿ: ಆಗಿನ ಕಾಲಕ್ಕೆ ಖ್ಯಾತ ನೇತ್ರ ವೈದ್ಯರೆಂದು ಹೆಸರು ಪಡೆದ ಮೋದಿಯವರ ಪ್ರೊಫೆಸರ್ ಆಗಿದ್ದ ಡಾ. ಡಿ.ಎಸ್. ಸರ್ದೇಸಾಯ್ ಅವರು ಪಾಟ್ನಾ ಮತ್ತು ಗುಜರಾತಿನಲ್ಲಿ ಹಮ್ಮಿಕೊಂಡಿದ್ದ ನೇತ್ರ ಚಿಕಿತ್ಸೆಯ ಶಿಬಿರದಲ್ಲಿ ಭಾಗವಹಿಸಲು ಮೋದಿಯವರನ್ನು ಆಹ್ವಾನಿಸಿದರು. ಗುರುವಿನ ಜೊತೆ ಕೈಜೋಡಿಸಿ ಸ್ವತಂತ್ರವಾಗಿ ಮೋದಿಯವರು 20 ಮಂದಿಯ ಕಣ್ಣಿನ ಶಸ್ತ್ರ ಚಿಕಿತ್ಸೆಯನ್ನು ಯಶಸ್ವಿಯಾಗಿ ಮಾಡಿ ಸೈ ಎನಿಸಿಕೊಂಡರು.
ಗ್ರಾಮೀಣ ಜನತೆಗೆ ಸೇವೆ ಮಾಡಲು ಅವರಿಗೆ ಇದು ಮತ್ತಷ್ಟು ಪ್ರೇರಕ ಶಕ್ತಿಯನ್ನು ಕೊಟ್ಟಿತು. ಇದರ ಹಿಂದೆಯೇ ಧಾರವಾಡ ಜಿಲ್ಲೆಯ ನರಗಲ್ ಹಳ್ಳಿಯಲ್ಲಿ ಕಣ್ಣಿನ ಶಸ್ತ್ರ ಚಿಕಿತ್ಸೆಯ ಶಿಬಿರವನ್ನು ಯಶಸ್ವಿಯಾಗಿ ನಿರ್ವಹಿಸಿದರು. ಸ್ಥಳೀಯರಿಗೆ ಆಗ ಶಸ್ತ್ರ ಚಿಕಿತ್ಸೆಗೆ ತಮ್ಮನ್ನು ಒಡ್ಡಿಕೊಳ್ಳಲು ಇನ್ನೂ ಅಳುಕಿತ್ತು. ಇದನ್ನು ಮನಗಂಡ ಮೋದಿಯವರು ಶಸ್ತ್ರ ಚಿಕಿತ್ಸೆ ಮಾಡುವ ಮುನ್ನ ರೋಗಿಗಳನ್ನುದ್ದೇಶಿಸಿ ಅದು ಅಪಾಯಕಾರಿಯಲ್ಲ ಎಂದು ಮನವರಿಕೆ ಮಾಡಿಕೊಡಲು ದೀರ್ಘ ಪ್ರವಚನವನ್ನೇ ನೀಡುತ್ತಿದರು. ಇದರಿಂದ ಪ್ರೇರಿತರಾಗಿ ಕಣ್ಣಿನ ರೋಗಿಗಳು ಶಸ್ತ್ರ ಚಿಕಿತ್ಸೆಗೆ ಮುಂದಾಗುತ್ತಿದರು.
ಕೇವಲ ಎರಡೇ ಗಂಟೆಯಲ್ಲಿ 20 ಜನರಿಗೆ ಯಶಸ್ವಿಯಾಗಿ ಚಿಕಿತ್ಸೆ ಮಾಡಿರುವುದು ಇತಿಹಾಸದ ಪುಟಗಳಲ್ಲಿ ದಾಖಲಾಗಿದೆ.ಹೀಗೆ ಅಂಧರು ನನ್ನ ಬಳಿಗೆ ಬರಲು ಶಕ್ತರಲ್ಲ. ನಾನೇ ಅವರ ಬಳಿಗೆ ಹೋಗಬಾರದೇಕೆ? ಎಂದು ಯೋಚನೆ ಮಾಡುವ ಮೂಲಕ ಲಕ್ಷಾಂತರ ಅಂಧರ ಬಳಿಗೆ ತೆರಳಿ ಅವರ ಕಷ್ಟಕ್ಕೆ ಮಿಡಿದ ಹೃದಯ ಇವರದಾಗಿತ್ತು.ಇದಲ್ಲದೆ ತಮ್ಮ ಸುತ್ತ ತ್ಯಾಗಜೀವಿಗಳ ದೊಡ್ಡ ಗುಂಪನ್ನೇ ಬೆಳೆಸಿ, ಮಾನವೀಯ ಸೇವೆಗೆ ನಿಂತ ಮಹಾನ್ ವ್ಯಕ್ತಿ ಇವರು.
ಇಂಥವರು ಕೂಡ ತಮ್ಮ ಬದುಕಿನಲ್ಲಿ ಕೆಲವೊಂದು ಕಹಿ ಪ್ರಸಂಗಗಳನ್ನು ಎದುರಿಸಬೇಕಾಯಿತು. ಆಧುನಿಕ ಶಸ್ತ್ರ ಚಿಕಿತ್ಸಾ ವೈದ್ಯರು, ಡಾ. ಮೋದಿಯವರು ಕಳಪೆ ಪರಿಸರದಲ್ಲಿ ಶಸ್ತ್ರ ಕ್ರಿಯೆಯನ್ನು ನಡೆಸುತ್ತಾರೆಂದು ದೂರಿದ್ದರು. ಜೊತೆಗೆ ಮೋದಿಯವರ ವೈದ್ಯಕೀಯ ಹಿನ್ನೆಲೆ ಕೇವಲ ಎಲ್.ಐ.ಎಮ್. ಎಂದೂ ಇತರ ವೈದ್ಯರಿಗಿರುವಂತೆ ಎಲ್.ಸಿ.ಪಿ.ಎಸ್.(ಲೈಸೆನ್ಸಿಯೇಟ್ ಆಫ್ ದಿ ಕಾಲೇಜ್ ಆಫ್ ಫಿಸಿಷಿಯನ್ಸ್ ಅಂಡ್ ಸರ್ಜನ್ಸ್) ಅಲ್ಲವೆಂದೂ ಅವರು ಕಣ್ಣಿನ ಶಸ್ತ್ರ ಚಿಕಿತ್ಸೆ ನಡೆಸಲು ಅರ್ಹರಲ್ಲವೆಂದೂ ಆರೋಪಿಸಿದ್ದರು.
ಕರ್ನಾಟಕ ಸರ್ಕಾರ ಇಂಥ ಆರೋಪಗಳನ್ನು ಸ್ವೀಕರಿಸಲು ಸಿದ್ಧವಿರಲಿಲ್ಲ. ಕಣ್ಣಿನ ಶಸ್ತ್ರ ಚಿಕಿತ್ಸೆಯ ಯಾವುದೇ ಪರಿಣತರಿಗಿಂತ ಇವರು ತ್ವರಿತವಾಗಿ ಚಿಕಿತ್ಸೆ ನಡೆಸುತ್ತಾರೆಂಬುದನ್ನೂ ಒಪ್ಪಿಕೊಂಡಿತು. ಮೋದಿಯವರ ವೃತ್ತಿಪರ ವೈಶಿಷ್ಟ್ಯವೆಂದರೆ ಮೋತಿಬಿಂದು ಶಸ್ತ್ರ ಚಿಕಿತ್ಸೆಗೆ ಇವರು ತೆಗೆದುಕೊಳ್ಳುತ್ತಿದ್ದ ಸಮಯ ಕೇವಲ 14 ಸೆಕೆಂಡುಗಳು ಅಷ್ಟೇ ಆಗಿತ್ತು ಬಂಧುಗಳೆ.
ಗೌರವ ಪ್ರಶಸ್ತಿಗಳು
ಡಾ.ಮೋದಿಯವರ ಸೇವೆ ಮತ್ತು ಸಾಧನೆಗಳನ್ನು ಶ್ಲಾಘಿಸಿ ಕೇಂದ್ರ ಸರಕಾರದಿಂದ 1956 ರಲ್ಲಿ ಪದ್ಮಶ್ರೀ ಪ್ರಶಸ್ತಿ ಹಾಗೂ 1968 ರಲ್ಲಿ ಪದ್ಮಭೂಷಣ ಪ್ರಶಸ್ತಿ ಗೌರವಿಸಲಾಗಿದೆ.ಇನ್ನು ಮೈಸೂರು, ಕರ್ನಾಟಕ ಮತ್ತು ಪುಣೆ ವಿಶ್ವವಿದ್ಯಾಲಯಗಳು ಶ್ರೀಯುತರಿಗೆ ಗೌರವ ಡಾಕ್ಟರೇಟ್ ನೀಡಿವೆ.ಅಲ್ಲದೆ ನೈಟ್ ಆಫ್ ಬ್ಲೈಂಡ್, ಅಂಬಾಸೆಡರ್ ಆಫ್ ಗುಡ್ ವಿಲ್ ಪ್ರಶಸ್ತಿ ಹಾಗೂ ಕರ್ನಾಟಕ ಸರ್ಕಾರದಿಂದ ರಾಜ್ಯೋತ್ಸವ ಪ್ರಶಸ್ತಿ ನೀಡಿ ಸನ್ಮಾನಿಸಿದೆ.ಇನ್ನ ಅಮೆರಿಕದ Spartanburg ನ ಮೇಯರ್ ಇವರಿಗೆ ಗೌರವ ಪೌರತ್ವ ನೀಡಿ ಗೌರವಿಸಿದ್ದಾರೆ.
ಜೊತೆಗೆ ಕರ್ನಾಟಕ ರಾಜ್ಯದ ವಿಧಾನ ಪರಿಷತ್ತಿನ ಸದಸ್ಯರಾಗಿ 1990 ರಲ್ಲಿ ನೇಮಕಗೊಂಡು ಸೇವೆ ಸಹ ಸಲ್ಲಿಸಿದ್ದಾರೆ ಎಂಬುದು ಮತ್ತೊಂದು ವಿಶೇಷ ಹಾಗೆ ಮೋದಿಯವರು ಎಲ್ಲಾ ಪ್ರಶಸ್ತಿ ಪುರಸ್ಕಾರಗಳಿಂದ ಬಂದ ಹಣವನ್ನು ಬಡವರಿಗಾಗಿ ವ್ಯಯಿಸಿದ್ದಾರೆ.ಹೀಗೆ ಹತ್ತು ಹಲವು ಸಂಘ,ಸಂಸ್ಥೆಗಳಿಂದ ಹಲವಾರು ಪ್ರಶಸ್ತಿಗಳು ಇವರನ್ನು ಹುಡುಕಿಕೊಂಡು ಬಂದಿವೆ.
ಕೊನೆಯ ಮಾತು
ಸಾವಿರಾರು ಬಡವರಿಗೆ ಕಣ್ಣಿನ ದೃಷ್ಟಿ ನೀಡಿ ನೇತ್ರದಾನಿ ಎಂದೇ ಹೆಸರುವಾಸಿಯಾಗಿದ್ದ ಡಾ.ಎಂ.ಸಿ.ಮೋದಿಯವರು ಕರ್ನಾಟಕ, ಆಂಧ್ರಪ್ರದೇಶ, ತಮಿಳುನಾಡು, ಮಹಾರಾಷ್ಟ್ರ ಸೇರಿ ಹಲವಾರು ರಾಜ್ಯಗಳಲ್ಲಿ ದೃಷ್ಟಿದೋಷದ ಸಾವಿರಾರು ರೋಗಿಗಳಿಗೆ ದೃಷ್ಟಿ ನೀಡುವ ಮೂಲಕ ನೇತ್ರದಾನಿ ಎಂಬ ಬಿರುದು ಪಡೆದುಕೊಂಡಿದ್ದರು. ಜನ ಸೇವೆ ಮೂಲಕ ರಾಜ್ಯ ಹೊರರಾಜ್ಯಗಳಲ್ಲದೆ ದೇಶ ವಿದೇಶಗಳಲ್ಲೂ ಡಾ.ಎಂ.ಸಿ.ಮೋದಿ ಅವರು ಮನೆಮಾತಾಗಿದ್ದರು.
ಸಾಮೂಹಿಕ ನೇತ್ರ ಚಿಕಿತ್ಸಾ ಹಾಗೂ ಸಂಚಾರಿ ಘಟಕವನ್ನು ತೆರೆದ ಮೊದಲ ವೈದ್ಯ ಎಂಬ ಖ್ಯಾತಿಯನ್ನೂ ಕೂಡ ಗಳಿಸಿದ್ದ ಅವರು, ರೈಲಿನಲ್ಲಿ ಪ್ರಯಾಣಿಸುವಾಗಲೂ ಅಲ್ಲಿನ ಪ್ರಯಾಣಿಕರ ಕಣ್ಣುಗಳನ್ನು ಪರೀಕ್ಷಿಸುತ್ತಿದ್ದರು. ಡಾ. ಮೋದಿ ಸಾವಿನಲ್ಲೂ ಸಾರ್ಥಕತೆ ಪಡೆದವರು. ಅವರ ನಿಧನಾನಂತರ (11.11.2005) ಅವರ ಎರಡೂ ಕಣ್ಣಗಳನ್ನು ಅವರ ಕುಟುಂಬದವರು ಅಂಧರಿಗೆ ದಾನ ಮಾಡಿದರು.ಕಣ್ಣುಕೊಟ್ಟ ಅಣ್ಣ ಎಂಬ ಬಿರುದು ಈ ದೃಷ್ಟಿಯಿಂದಲೂ ಅವರ ಜೀವನ ಸಾರ್ಥಕವಾಯಿತು.
ಸುದ್ದಿದಿನ.ಕಾಂ | ವಾಟ್ಸಾಪ್ | 9980346243
ದಿನದ ಸುದ್ದಿ
ಶಿವಮೊಗ್ಗಕ್ಕೆ ಇಂದು ಪ್ರಧಾನಿ ನರೇಂದ್ರ ಮೋದಿ
ಸುದ್ದಿದಿನ, ಶಿವಮೊಗ್ಗ : ಪ್ರಧಾನಮಂತ್ರಿ ನರೇಂದ್ರ ಮೋದಿ ಇಂದು ಮಧ್ಯಾಹ್ನ 2 ಗಂಟೆಗೆ ಶಿವಮೊಗ್ಗದಲ್ಲಿ ಬೃಹತ್ ಸಾರ್ವಜನಿಕ ಸಭೆಯನ್ನುದ್ದೇಶಿ ಮಾತನಾಡಲಿದ್ದಾರೆ.
ಯುವಜನರು, ಮಹಿಳೆಯರು, ರೈತರು ಸೇರಿ ಸುಮಾರು ಎರಡೂವರೆ ಲಕ್ಷಕ್ಕೂ ಹೆಚ್ಚು ಜನರು ಕಾರ್ಯಕ್ರಮದಲ್ಲಿ ಭಾಗವಹಿಸುವ ನಿರೀಕ್ಷೆ ಇದೆ ಎಂದು ವಿಧಾನಪರಿಷತ್ ಮುಖ್ಯ ಸಚೇತಕ ಎನ್.ರವಿಕುಮಾರ್ ಶಿವಮೊಗ್ಗದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಚುನಾವಣಾ ಬಾಂಡ್ ಕುರಿತ ದತ್ತಾಂಶ ಬಿಡುಗಡೆ
ಸುದ್ದಿದಿನ,ನವದೆಹಲಿ : ಚುನಾವಣಾ ಬಾಂಡ್ ಕುರಿತಂತೆ ಸುಪ್ರೀಂಕೋರ್ಟ್ನ ರಿಜಿಸ್ಟ್ರಿ ಇಂದ ಲಭ್ಯವಾದ ಅಂಕಿಕೃತ ದತ್ತಾಂಶ ಮಾದರಿಯನ್ನು ಚುನಾವಣಾ ಆಯೋಗ ಭಾನುವಾರ ತನ್ನ ವೆಬ್ಸೈಟ್ನಲ್ಲಿ ಅಪ್ಲೋಡ್ ಮಾಡಿದೆ. www.eci.gov.in/candidate-politicalparty ವೆಬ್ಸೈಟ್ನಲ್ಲಿ ಈ ದತ್ತಾಂಶ ಲಭ್ಯವಿರುತ್ತದೆ.
ಸುಪ್ರೀಂಕೋರ್ಟ್ ನಿರ್ದೇಶಿಸಿದಂತೆ ರಾಜಕೀಯ ಪಕ್ಷಗಳು ಚುನಾವಣಾ ಬಾಂಡ್ ಕುರಿತ ದತ್ತಾಂಶಗಳನ್ನು ಮೊಹರು ಹಾಕಿದ ಲಕೋಟೆಯಲ್ಲಿ ಸಲ್ಲಿಸಿದ್ದವು ಎಂದು ಚುನಾವಣಾ ಆಯೋಗದ ಹೇಳಿಕೆ ತಿಳಿಸಿದೆ. ರಾಜಕೀಯ ಪಕ್ಷಗಳಿಂದ ಸ್ವೀಕರಿಸಿದ ಮೊಹರು ಹಾಕಿದ ಲಕೋಟೆಗಳನ್ನು ತೆರೆಯದೇ ಸುಪ್ರೀಂಕೋರ್ಟ್ಗೆ ಸಲ್ಲಿಸಲಾಗಿತ್ತು.
ಇದೇ 15ರಂದು ಸುಪ್ರೀಂಕೋರ್ಟ್ ನೀಡಿದ ಆದೇಶದ ಮೇರೆಗೆ ಸುಪ್ರೀಂಕೋರ್ಟ್ನ ರಿಜಿಸ್ಟ್ರಿ, ಭೌತಿಕ ಪ್ರತಿ ಹಾಗೂ ಅದರ ಡಿಜಿಟಲ್ ದಾಖಲೆಯಿರುವ ಪೆನ್ಡ್ರೈವ್ ಒಳಗೊಂಡ ಮೊಹರು ಹಾಕಿದ ಲಕೋಟೆಯನ್ನು ಹಿಂತಿರುಗಿಸಿತ್ತು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ರಶ್ಮಿ ಚಂದ್ರಗಿರಿ ಅವರಿಗೆ ಪಿಎಚ್.ಡಿ ಪದವಿ
ಸುದ್ದಿದಿನ,ಹಾವೇರಿ : ನಗರದ ರಶ್ಮಿ ಚಂದ್ರಗಿರಿ ಅವರು ಕರ್ನಾಟಕ ವಿಶ್ವವಿದ್ಯಾಲಯಕ್ಕೆ ಮಂಡಿಸಿದ “ದಲಿತ ಬಂಡಾಯ ಕಾದಂಬರಿಗಳಲ್ಲಿ ಸಾಂಸ್ಕೃತಿಕ ನೆಲೆಗಳು” ಎಂಬ ಮಹಾಪ್ರಬಂಧಕ್ಕೆ ಕರ್ನಾಟಕ ವಿಶ್ವವಿದ್ಯಾಲಯ ಪಿಎಚ್.ಡಿ ಪದವಿ ಪ್ರಧಾನ ಮಾಡಿದೆ.
ಇವರಿಗೆ ಡಾ.ಬಿಎಸ್.ಭಜಂತ್ರಿ , ಸಹಾಯಕ ಪ್ರಧ್ಯಾಪಕರು ಕರ್ನಾಟಕ ಕಲಾ ಮಹಾವಿದ್ಯಾಲಯ ಧಾರವಾಡ ಇವರು ಮಾರ್ಗದರ್ಶನ ಮಾಡಿದ್ದರು.
ಬರವಣಿಗೆಯಲ್ಲಿ ತೊಡಗಿಸಿಕೊಂಡಿರುವ ರಶ್ಮಿ ಚಂದ್ರಗಿರಿಯವರ ಹಲವು ಲೇಖನಗಳು ನಿಯತಕಾಲಿಕೆಗಳಲ್ಲಿ ಪ್ರಕಟಗೊಂಡಿವೆ. ಪ್ರಸ್ತುತ ಇವರು ಉಪನ್ಯಾಸಕಿಯಾಗಿ ಕಾರ್ಯನಿರ್ವಹಿಸಿತ್ತಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243