ದಿನದ ಸುದ್ದಿ
ಪ್ರಖ್ಯಾತ ನೇತ್ರತಜ್ಞ ಡಾ.ಎಂ.ಸಿ.ಮೋದಿ ಬಗ್ಗೆ ನಿಮಗೆಷ್ಟು ಗೊತ್ತು..!?
- ಸಂಗಮೇಶ ಎನ್ ಜವಾದಿ, ಕೊಡಂಬಲ
ಭಾರತದ ಪ್ರಖ್ಯಾತ ನೇತ್ರತಜ್ಞರಲ್ಲೊಬ್ಬರು,ಅವರ ಅರವತ್ತು ವರ್ಷಕ್ಕಿಂತ ಮೇಲ್ಪಟ್ಟ ವೃತ್ತಿ ಜೀವನದಲ್ಲಿ ಸುಮಾರು 7 ಲಕ್ಷಕ್ಕಿಂತ ಹೆಚ್ಚು ಜನರಿಗೆ ನೇತ್ರ ಶಸ್ತ್ರ ಚಿಕಿತ್ಸೆ ಮಾಡಿ ವೈದ್ಯ ಲೋಕದಲ್ಲಿ ಜಗತ್ತಪ್ರಸಿದ್ದಿ ಪಡೆದಿರುವ ಎಂ.ಸಿ.ಮೋದಿಯವರ ಸೇವೆ ಅಜರಾಮ ಮತ್ತು ಅನನ್ಯ ಎಂದೇ ಹೇಳಬೇಕಾಗುತ್ತದೆ.
ಅಂದು ಮುಂಬೈ ಒಂದರ ಸಭೆಯಲ್ಲಿ ಸೇರಿದ್ದ ಅನೇಕ ದೇಶಭಕ್ತ ಮಹನೀಯರ ಮಾತುಗಳಿಂದ ಪ್ರಭಾವಿತರಾಗಿ,ತಮಗಿದ್ದ ಸಾವಿರಾರು ರೂಪಾಯಿಗಳ ಆದಾಯದ ಮೂಲವಾಗಿದ್ದ ಖಾಸಗಿ ವೈದ್ಯ ವೃತ್ತಿಯನ್ನು ತೊರೆದು, ಬಿಡಿಗಾಸು ಪಡೆಯದೇ ಅಂಧರಿಗೆ ನೇತ್ರಚಿಕಿತ್ಸೆ ಮಾಡಲು ಸಂಕಲ್ಪಿಸಿ ಸಾವಿರಾರು ಜನರಿಗೆ ನೇತ್ರ ಶಸ್ತ್ರಚಿಕಿತ್ಸೆ ಮಾಡುವುದರೊಂದಿಗೆ ಜನಸಾಮಾನ್ಯರ ಪ್ರೀತಿ – ಸ್ನೇಹಕ್ಕೆ ಸಾಕ್ಷಿಯಾಗುವ ಮೂಲಕ ವಿಶ್ವ ಗಿನ್ನಿಸ್ ದಾಖಲೆ ಮಾಡಿದ ಈ ನಾಡಿನ ಧೀಮಂತ ವೈದ್ಯ ಲೋಕದ ವೈದ್ಯರಾದ ಮುರುಗಪ್ಪ ಚನ್ನವೀರಪ್ಪ ಮೋದಿಯವರು ಎಂದು ಹೆಮ್ಮೆಯಿಂದ ಹೇಳುತ್ತೇವೆ.
ಜನನ,ಕಾಯಕ ಜೀವನ
ಮುರಿಗೆಪ್ಪ ಚನ್ನವೀರಪ್ಪ ಮೋದಿಯವರು ಕರ್ನಾಟಕ ರಾಜ್ಯದ ಬಾಗಲಕೋಟೆ ಜಿಲ್ಲೆಯ ಬೀಳಗಿಯ ಗ್ರಾಮದ ಚನ್ನವೀರಪ್ಪ ಮತ್ತು ದುಂಡಮ್ಮ ದಂಪತಿಗಳ ಮಗನಾಗಿ ದಿನಾಂಕ 04-10-1916 ರಲ್ಲಿ ಜನಿಸಿದರು. ಜಮಖಂಡಿಯ ಪಿ ಬಿ ಶಾಲೆಯಲ್ಲಿ ಪ್ರಾಥಮಿಕ ,ಪ್ರೌಢ ಶಿಕ್ಷಣ ಪಡೆದು ನಂತರ ಬಡತನದ ನಡುವೆಯೂ ವಿದ್ಯಾರ್ಜನೆ ಮುಂದುವರೆಸಿ ಬೆಳಗಾವಿ ಆಯುರ್ವೇದ ಕಾಲೇಜಿನಲ್ಲಿ ಅಭ್ಯಾಸ ಮಾಡಿದರು.
ತದನಂತರ ಮತ್ತೆ ಕೆಬಿಎಚ್ಬಿ ಕಣ್ಣಿನ ಆಸ್ಪತ್ರೆ ಹಾಗೂ ರಾಮವಾಡಿ ಕಣ್ಣಿನ ಆಸ್ಪತ್ರೆಯಲ್ಲಿ ವೈದ್ಯ ಶಿಕ್ಷಣ ಪಡೆದರು.ಇದಲ್ಲದೆ ಮೋದಿಯವರು ಕೊಲಂಬಿಯಾ ಮತ್ತು ನ್ಯೂಯಾರ್ಕ್ ವಿಶ್ವವಿದ್ಯಾಲಯಗಳಲ್ಲಿ ಸ್ನಾತಕೋತ್ತರ ಪದವಿಗಳಿಸಿದರು.ನಂತರ ಬೆಳಗಾವಿಯಲ್ಲಿ ಅವರು ಕಾಯಕ ಜೀವನ ಆರಂಭಿಸಿ ದಾವಣಗೆರೆಯಲ್ಲಿ ನೆಲೆಸಿದರು.
1942 ರಲ್ಲಿ ಕ್ವಿಟ್ ಇಂಡಿಯಾ ಚಳುವಳಿಯ ಸಮಯದಲ್ಲಿ ಮಹಾತ್ಮ ಗಾಂಧಿಯವರ ಭಾಷಣದಿಂದ ಪ್ರೇರಿತರಾಗಿ ಕೆಲವೇ ಸ್ವಯಂಸೇವಕರ ಜತೆ ಹಳ್ಳಿಗಳಿಗೆ ಹೋಗಿ ರೋಗಿಗಳಿಂದ ಹಣ ಪಡೆಯದೆ ಕಣ್ಣಿನ ಶಸ್ತ್ರ ಚಿಕಿತ್ಸೆ ಮಾಡುತ್ತಿದ್ದರು,ಮಾಡಿದ ಶ್ರೇಯಸ್ಸು ಇವರಿಗೆ ಸಲ್ಲುತ್ತದೆ.
ಜೊತೆಗೆ ಕರ್ನಾಟಕ, ಆಂಧ್ರ ಪ್ರದೇಶ, ತಮಿಳುನಾಡು, ಮಹಾರಾಷ್ಟ್ರ ಮತ್ತು ಇತರ ಹಲವಾರು ರಾಜ್ಯಗಳಲ್ಲಿ ಕಣ್ಣಿನ ಶಸ್ತ್ರ ಚಿಕಿತ್ಸಾ ಶಿಬಿರಗಳನ್ನು ಏರ್ಪಡಿಸಿ ಉಚಿತ ತಪಾಸಣೆ ಮತ್ತು ಚಿಕಿತ್ಸೆ ಮಾಡಿರುತ್ತಾರೆ. ಕಣ್ಣಿನ ಪೊರೆ (ಕ್ಯಟರಾಕ್ಟ್) ತೆಗೆಯುವ ಶಸ್ತ್ರ ಚಿಕಿತ್ಸೆಯಲ್ಲಿ ಪರಿಣಿತಿ ಹೊಂದಿದ್ದ ಡಾ.ಮೋದಿಯವರು ಪ್ರತಿ ಗ್ರಾಮದಲ್ಲೂ ಶಾಲೆ, ಕಾಲೇಜುಗಳನ್ನು ತೆಗೆದುಕೊಂಡು ಅದನ್ನೇ ಚಿಕಿತ್ಸಾ ಕೇಂದ್ರವಾಗಿ ಪರಿವರ್ತಿಸಿ ಸತತವಾಗಿ ಶಸ್ತ್ರಚಿಕಿತ್ಸೆ ನಡೆಸುತ್ತಿದ್ದರು.
ರಷ್ಯಾ ಮತ್ತು ಅಮೇರಿಕ ಸೇರಿದಂತೆ ಹಲವಾರು ರಾಷ್ಟ್ರಗಳಲ್ಲೂ ಅವರು ಸೇವೆ ಸಲ್ಲಿಸಿ ಗೌರವಗಳಿಗೆ ಪಾತ್ರರಾಗಿದ್ದಾರೆ.ಇದಲ್ಲದೆ ದಾವಣಗೆರೆ, ಬೆಂಗಳೂರು ಮತ್ತು ಬೆಳಗಾವಿಗಳಲ್ಲಿ ಕಣ್ಣು ಚಿಕಿತ್ಸಾಲಯಗಳನ್ನು ಸ್ಥಾಪಿಸಿದ ಶ್ರೀಯುತರು ತಮ್ಮ ಆಸ್ಪತ್ರೆಗಳಲ್ಲಿ ಬಡವರಿಗೆ ಉಚಿತ ಸೇವೆ ಒದಗಿಸುತ್ತಿದ್ದರು.
ಸಾಮೂಹಿಕ ನೇತ್ರ ಚಿಕಿತ್ಸೆ ಹಾಗೂ ಸಂಚಾರಿ ಘಟಕವನ್ನು ತೆರೆದ ಮೊದಲ ವೈದ್ಯ ಎಂಬ ಖ್ಯಾತಿಯನ್ನು ಗಳಿಸಿದ್ದ ಹಿರಿಮೆ ಇವರದು ಜೊತೆಗೆ ಮೋದಿಯವರು ತಮ್ಮ ಸ್ವಂತ ಹಣವನ್ನು ವ್ಯಯಿಸಿ ಬಡಜನರ ಸೇವೆ ಮಾಡುತ್ತಿದ್ದರು ಎಂಬುದು ನಾವ್ಯಾರೂ ಮರೆಯಬಾರದು.
ಇನ್ನು ಕಣ್ಣಿನ ಆರೋಗ್ಯದ ಕುರಿತು ಅವರ ಮನಸ್ಸು ಎಷ್ಟು ತುಡಿಯುತ್ತಿತ್ತೆಂದರೆ, ರೈಲಿನಲ್ಲಿ ಪ್ರಯಾಣ ಮಾಡುವಾಗಲೂ ಅಲ್ಲಿನ ಪ್ರಯಾಣಿಕರ ಕಣ್ಣುಗಳನ್ನು ಉಚಿತವಾಗಿ ಪರೀಕ್ಷಿಸಿ ಸಲಹೆ ನೀಡುತ್ತಿದ್ದರು ಎನ್ನುವುದು ಮರೆಯುವಂತಿಲ್ಲ.
ಡಾ. ಮೋದಿಯವರೇ ಹೇಳುತ್ತಿದ್ದ ಹಾಗೆ ಮೊದ ಮೊದಲು ರೋಗಿಗಳು ಇವರ ಶಿಬಿರಕ್ಕೆ ಬರಲು ಹಿಂಜರಿಯುತ್ತಿದ್ದರು.
ಆಪರೇಷನ್ ಪದ ಕೇಳಿ ಶಿಬಿರಕ್ಕೆ ಬಂದವರಲ್ಲಿ ಕೆಲವರು ಓಡಿ ಹೋಗುತ್ತಿದ್ದರು. ಆದರೆ ಕ್ರಮೇಣ ಶಸ್ತ್ರ ಚಿಕಿತ್ಸೆಗೊಳಗಾಗಿ ದೃಷ್ಟಿಯನ್ನು ಮತ್ತೆ ಪಡೆದವರನ್ನು ಕಂಡು ಶಿಬಿರಕ್ಕೆ ಬರುವವರು ಹೆಚ್ಚಾದರು. ಹೀಗೆ ಅವರ ಸೇವೆ ನಾಡಿನ ತುಂಬೆಲ್ಲ ಪಸರಿಸಿತ್ತು.
ಈ ಕಾರಣದಿಂದ ಅವರ ಸೇವೆಯನ್ನು ಗುರುತಿಸಿದ ಅಂದಿನ ಕರ್ನಾಟಕ ಸರ್ಕಾರ, ಏಕವ್ಯಕ್ತಿಯ ಯುದ್ಧ (one man’s war) ಎಂಬ ಒಂದು ಕಿರು ದೃಶ್ಯ ದಾಖಲೆಯನ್ನು ತಯಾರಿಸಿದ್ದು ವಿಶೇಷ ಹಾಗಾಗಿ ಅವರು ಮಾಡಿರುವ ಸೇವೆ ನಿಸ್ವಾರ್ಥ ಎಂಬುದು ಇದರಿಂದ ಗೊತ್ತಾಗುತ್ತದೆ.ಈ ಎಲ್ಲಾ ಕಾರಣಗಳಿಂದ ಲಕ್ಷಗಟ್ಟಲೆ ಅಂಧರಿಗೆ ದೃಷ್ಟಿ ನೀಡಿದ ಆ ಮಹಾನ್ ಚೇತನರ ಜ್ಞಾಪಕಾರ್ಥವಾಗಿ ದಾವಣಗೆರೆ ಹಾಗೂ ಬೆಂಗಳೂರಿನಲ್ಲಿ ಮೋದಿ ಕಣ್ಣಿನ ಆಸ್ಪತ್ರೆ ಎಂಬ ಹೆಸರಿನ ಆಸ್ಪತ್ರೆಯು ದಿನನಿತ್ಯ ನೂರಾರು ಜನರಿಗೆ ಸೇವೆ ನೀಡುವಲ್ಲಿ ನಿರಂತವಾಗಿದೆ.
ಗಾಂಧೀಜಿ ಪ್ರೇರಣೆ
ಭಾರತದಲ್ಲಿ ವ್ಯಾಪಕವಾಗಿ ಕಾಡುವ ಅಂಧತ್ವದ ನಿವಾರಣೆ ಇವರ ಬದುಕಿನ ಗುರಿಯಾಯಿತು. ಮಹಾತ್ಮ ಗಾಂಧಿಯವರ ಅರ್ಪಣಾಭಾವ, ಜನಸೇವೆ, ಪ್ರಭಾವ ಇವರ ಮೇಲೆ ಹೆಚ್ಚು ಪರಿಣಾಮ ಬೀರಿತು. ಸಮಾಜದ ಒಳಿತಿಗಾಗಿ ದುಡಿಯಲು ತಮ್ಮನ್ನು ತಾವು ಅರ್ಪಿಸಿಕೊಂಡರು. ವೈಯಕ್ತಿಕ ಸುಖ ಸಂತೋಷ ತ್ಯಜಿಸಿ, ತಮ್ಮ ಪ್ರತಿಭೆ ಮತ್ತು ಪರಿಣತಿಯನ್ನು ಜನಸಾಮಾನ್ಯರಿಗೆ ಮುಟ್ಟಿಸಲು ಕಣ್ಣಿಲ್ಲದವರಿಗೆ ಮೋದಿ ಬೆಳಕಾದರು ಬಂಧುಗಳೆ.
ವಿಶ್ವ ದಾಖಲೆ
ಮೋದಿಯವರು ತಿರುಪತಿಯಲ್ಲಿ ಒಂದೆ ದಿನದಲ್ಲಿ 833 ಶಸ್ತ್ರ ಚಿಕಿತ್ಸೆ ಮಾಡಿ ವಿಶ್ವ ದಾಖಲೆ ಸ್ಥಾಪಿಸಿದರು. ಒಟ್ಟಾರೆ 7 ಲಕ್ಷಕ್ಕೂ ಹೆಚ್ಚು ಕಣ್ಣಿನ ಶಸ್ತ್ರ ಚಿಕಿತ್ಸೆ ಮಾಡುವ ಮೂಲಕ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಇದನ್ನು ಗಿನ್ನಿಸ್ ದಾಖಲೆಗಳ ಪುಸ್ತಕದಲ್ಲಿ ಸೇರಿಸಲಾಗಿದೆ. ವೈದ್ಯಕೀಯ ವೃತ್ತಿಯಲ್ಲಿ ಮೋದಿಯವರ ಸಾಧನೆ ಅನುಪಮ ಮತ್ತು ಅದ್ವಿತೀಯ.
ಭಾರತದ ಬಹುತೇಕ ಪ್ರದೇಶದಲ್ಲಿ ಸಂಚರಿಸಿ, ದೃಷ್ಟಿಹೀನರಿಗೆ ದೃಷ್ಟಿ ಕೊಟ್ಟ ಖ್ಯಾತಿ ಇವರದು. ಸಂಚಾರಿ ನೇತ್ರ ಚಿಕಿತ್ಸಾಲಯವನ್ನು ಸ್ಥಾಪಿಸಿದ ಮೊದಲ ವ್ಯಕ್ತಿ. ಈಗ ಇದು ಬೃಹತ್ತಾಗಿ ಬೆಳೆದಿದೆ. ಸಾಮೂಹಿಕ, ಉಚಿತ ನೇತ್ರ ಚಿಕಿತ್ಸೆಯನ್ನು ಪ್ರಾರಂಭಿಸಿದವರಲ್ಲಿ ಇವರೇ ಮೊದಲಿಗರು. ಅಂಧತ್ವ ನಿವಾರಣೆಗೆ ಇವರು ಹಮ್ಮಿಕೊಂಡ ಆಂದೋಲನದಲ್ಲಿ 1993ರವರೆಗೆ 6,10,564 ಜನರ ಕಣ್ಣುಗಳ ಶಸ್ತ್ರ ಚಿಕಿತ್ಸೆಯನ್ನೂ, 1,21,18,630ಕ್ಕೂ ಹೆಚ್ಚಿನ ರೋಗಿಗಳ ಕಣ್ಣು ತಪಾಸಣೆಯನ್ನು ಇವರು ಮಾಡಿದ್ದಾರೆ.
ಒಂದೇ ದಿನದಲ್ಲಿ ತಿರುಪತಿಯಲ್ಲಿ 833 ಮಂದಿಗೆ ಮೋತಿಬಿಂದು ಕಣ್ಣಿನ ಶಸ್ತ್ರ ಚಿಕಿತ್ಸೆ ಮಾಡಿ ಗಿನ್ನೆಸ್ ದಾಖಲೆ ಸ್ಥಾಪಿಸಿದ್ದಾರೆ. ಈ ಹಿಂದೆ ಇಂಥ ದಾಖಲೆ ಕೆನಡದ ಆಂಟೇರಿಯೋದ ವೈದ್ಯ ಡಾ. ರಾಬರ್ಟ್ ಮ್ಯಾಕ್ಲ್ಯೂರ್ ಅವರ ಹೆಸರಿನಲ್ಲಿತ್ತು. ಈ ವೈದ್ಯ (1924-78) 20,424 ಶಸ್ತ್ರ ಚಿಕಿತ್ಸೆ ಮಾಡಿ ದಾಖಲೆ ಸ್ಥಾಪಿಸಿದ್ದ. ಡಾ. ಮೋದಿಯವರು ತಮ್ಮ ಜೀವಿತಾವಧಿಯಲ್ಲಿ ಕಣ್ಣಿನ ರೋಗಿಗಳನ್ನು ತಪಾಸಣೆ ಮಾಡಲು 46,120 ಹಳ್ಳಿಗಳನ್ನು ಸಂದರ್ಶಿಸಿದ್ದರು.
ಅಂಧರ ಬಾಳಿಗೆ ಬೆಳಕಾದರ ಡಾ.ಮೋದಿ: ಆಗಿನ ಕಾಲಕ್ಕೆ ಖ್ಯಾತ ನೇತ್ರ ವೈದ್ಯರೆಂದು ಹೆಸರು ಪಡೆದ ಮೋದಿಯವರ ಪ್ರೊಫೆಸರ್ ಆಗಿದ್ದ ಡಾ. ಡಿ.ಎಸ್. ಸರ್ದೇಸಾಯ್ ಅವರು ಪಾಟ್ನಾ ಮತ್ತು ಗುಜರಾತಿನಲ್ಲಿ ಹಮ್ಮಿಕೊಂಡಿದ್ದ ನೇತ್ರ ಚಿಕಿತ್ಸೆಯ ಶಿಬಿರದಲ್ಲಿ ಭಾಗವಹಿಸಲು ಮೋದಿಯವರನ್ನು ಆಹ್ವಾನಿಸಿದರು. ಗುರುವಿನ ಜೊತೆ ಕೈಜೋಡಿಸಿ ಸ್ವತಂತ್ರವಾಗಿ ಮೋದಿಯವರು 20 ಮಂದಿಯ ಕಣ್ಣಿನ ಶಸ್ತ್ರ ಚಿಕಿತ್ಸೆಯನ್ನು ಯಶಸ್ವಿಯಾಗಿ ಮಾಡಿ ಸೈ ಎನಿಸಿಕೊಂಡರು.
ಗ್ರಾಮೀಣ ಜನತೆಗೆ ಸೇವೆ ಮಾಡಲು ಅವರಿಗೆ ಇದು ಮತ್ತಷ್ಟು ಪ್ರೇರಕ ಶಕ್ತಿಯನ್ನು ಕೊಟ್ಟಿತು. ಇದರ ಹಿಂದೆಯೇ ಧಾರವಾಡ ಜಿಲ್ಲೆಯ ನರಗಲ್ ಹಳ್ಳಿಯಲ್ಲಿ ಕಣ್ಣಿನ ಶಸ್ತ್ರ ಚಿಕಿತ್ಸೆಯ ಶಿಬಿರವನ್ನು ಯಶಸ್ವಿಯಾಗಿ ನಿರ್ವಹಿಸಿದರು. ಸ್ಥಳೀಯರಿಗೆ ಆಗ ಶಸ್ತ್ರ ಚಿಕಿತ್ಸೆಗೆ ತಮ್ಮನ್ನು ಒಡ್ಡಿಕೊಳ್ಳಲು ಇನ್ನೂ ಅಳುಕಿತ್ತು. ಇದನ್ನು ಮನಗಂಡ ಮೋದಿಯವರು ಶಸ್ತ್ರ ಚಿಕಿತ್ಸೆ ಮಾಡುವ ಮುನ್ನ ರೋಗಿಗಳನ್ನುದ್ದೇಶಿಸಿ ಅದು ಅಪಾಯಕಾರಿಯಲ್ಲ ಎಂದು ಮನವರಿಕೆ ಮಾಡಿಕೊಡಲು ದೀರ್ಘ ಪ್ರವಚನವನ್ನೇ ನೀಡುತ್ತಿದರು. ಇದರಿಂದ ಪ್ರೇರಿತರಾಗಿ ಕಣ್ಣಿನ ರೋಗಿಗಳು ಶಸ್ತ್ರ ಚಿಕಿತ್ಸೆಗೆ ಮುಂದಾಗುತ್ತಿದರು.
ಕೇವಲ ಎರಡೇ ಗಂಟೆಯಲ್ಲಿ 20 ಜನರಿಗೆ ಯಶಸ್ವಿಯಾಗಿ ಚಿಕಿತ್ಸೆ ಮಾಡಿರುವುದು ಇತಿಹಾಸದ ಪುಟಗಳಲ್ಲಿ ದಾಖಲಾಗಿದೆ.ಹೀಗೆ ಅಂಧರು ನನ್ನ ಬಳಿಗೆ ಬರಲು ಶಕ್ತರಲ್ಲ. ನಾನೇ ಅವರ ಬಳಿಗೆ ಹೋಗಬಾರದೇಕೆ? ಎಂದು ಯೋಚನೆ ಮಾಡುವ ಮೂಲಕ ಲಕ್ಷಾಂತರ ಅಂಧರ ಬಳಿಗೆ ತೆರಳಿ ಅವರ ಕಷ್ಟಕ್ಕೆ ಮಿಡಿದ ಹೃದಯ ಇವರದಾಗಿತ್ತು.ಇದಲ್ಲದೆ ತಮ್ಮ ಸುತ್ತ ತ್ಯಾಗಜೀವಿಗಳ ದೊಡ್ಡ ಗುಂಪನ್ನೇ ಬೆಳೆಸಿ, ಮಾನವೀಯ ಸೇವೆಗೆ ನಿಂತ ಮಹಾನ್ ವ್ಯಕ್ತಿ ಇವರು.
ಇಂಥವರು ಕೂಡ ತಮ್ಮ ಬದುಕಿನಲ್ಲಿ ಕೆಲವೊಂದು ಕಹಿ ಪ್ರಸಂಗಗಳನ್ನು ಎದುರಿಸಬೇಕಾಯಿತು. ಆಧುನಿಕ ಶಸ್ತ್ರ ಚಿಕಿತ್ಸಾ ವೈದ್ಯರು, ಡಾ. ಮೋದಿಯವರು ಕಳಪೆ ಪರಿಸರದಲ್ಲಿ ಶಸ್ತ್ರ ಕ್ರಿಯೆಯನ್ನು ನಡೆಸುತ್ತಾರೆಂದು ದೂರಿದ್ದರು. ಜೊತೆಗೆ ಮೋದಿಯವರ ವೈದ್ಯಕೀಯ ಹಿನ್ನೆಲೆ ಕೇವಲ ಎಲ್.ಐ.ಎಮ್. ಎಂದೂ ಇತರ ವೈದ್ಯರಿಗಿರುವಂತೆ ಎಲ್.ಸಿ.ಪಿ.ಎಸ್.(ಲೈಸೆನ್ಸಿಯೇಟ್ ಆಫ್ ದಿ ಕಾಲೇಜ್ ಆಫ್ ಫಿಸಿಷಿಯನ್ಸ್ ಅಂಡ್ ಸರ್ಜನ್ಸ್) ಅಲ್ಲವೆಂದೂ ಅವರು ಕಣ್ಣಿನ ಶಸ್ತ್ರ ಚಿಕಿತ್ಸೆ ನಡೆಸಲು ಅರ್ಹರಲ್ಲವೆಂದೂ ಆರೋಪಿಸಿದ್ದರು.
ಕರ್ನಾಟಕ ಸರ್ಕಾರ ಇಂಥ ಆರೋಪಗಳನ್ನು ಸ್ವೀಕರಿಸಲು ಸಿದ್ಧವಿರಲಿಲ್ಲ. ಕಣ್ಣಿನ ಶಸ್ತ್ರ ಚಿಕಿತ್ಸೆಯ ಯಾವುದೇ ಪರಿಣತರಿಗಿಂತ ಇವರು ತ್ವರಿತವಾಗಿ ಚಿಕಿತ್ಸೆ ನಡೆಸುತ್ತಾರೆಂಬುದನ್ನೂ ಒಪ್ಪಿಕೊಂಡಿತು. ಮೋದಿಯವರ ವೃತ್ತಿಪರ ವೈಶಿಷ್ಟ್ಯವೆಂದರೆ ಮೋತಿಬಿಂದು ಶಸ್ತ್ರ ಚಿಕಿತ್ಸೆಗೆ ಇವರು ತೆಗೆದುಕೊಳ್ಳುತ್ತಿದ್ದ ಸಮಯ ಕೇವಲ 14 ಸೆಕೆಂಡುಗಳು ಅಷ್ಟೇ ಆಗಿತ್ತು ಬಂಧುಗಳೆ.
ಗೌರವ ಪ್ರಶಸ್ತಿಗಳು
ಡಾ.ಮೋದಿಯವರ ಸೇವೆ ಮತ್ತು ಸಾಧನೆಗಳನ್ನು ಶ್ಲಾಘಿಸಿ ಕೇಂದ್ರ ಸರಕಾರದಿಂದ 1956 ರಲ್ಲಿ ಪದ್ಮಶ್ರೀ ಪ್ರಶಸ್ತಿ ಹಾಗೂ 1968 ರಲ್ಲಿ ಪದ್ಮಭೂಷಣ ಪ್ರಶಸ್ತಿ ಗೌರವಿಸಲಾಗಿದೆ.ಇನ್ನು ಮೈಸೂರು, ಕರ್ನಾಟಕ ಮತ್ತು ಪುಣೆ ವಿಶ್ವವಿದ್ಯಾಲಯಗಳು ಶ್ರೀಯುತರಿಗೆ ಗೌರವ ಡಾಕ್ಟರೇಟ್ ನೀಡಿವೆ.ಅಲ್ಲದೆ ನೈಟ್ ಆಫ್ ಬ್ಲೈಂಡ್, ಅಂಬಾಸೆಡರ್ ಆಫ್ ಗುಡ್ ವಿಲ್ ಪ್ರಶಸ್ತಿ ಹಾಗೂ ಕರ್ನಾಟಕ ಸರ್ಕಾರದಿಂದ ರಾಜ್ಯೋತ್ಸವ ಪ್ರಶಸ್ತಿ ನೀಡಿ ಸನ್ಮಾನಿಸಿದೆ.ಇನ್ನ ಅಮೆರಿಕದ Spartanburg ನ ಮೇಯರ್ ಇವರಿಗೆ ಗೌರವ ಪೌರತ್ವ ನೀಡಿ ಗೌರವಿಸಿದ್ದಾರೆ.
ಜೊತೆಗೆ ಕರ್ನಾಟಕ ರಾಜ್ಯದ ವಿಧಾನ ಪರಿಷತ್ತಿನ ಸದಸ್ಯರಾಗಿ 1990 ರಲ್ಲಿ ನೇಮಕಗೊಂಡು ಸೇವೆ ಸಹ ಸಲ್ಲಿಸಿದ್ದಾರೆ ಎಂಬುದು ಮತ್ತೊಂದು ವಿಶೇಷ ಹಾಗೆ ಮೋದಿಯವರು ಎಲ್ಲಾ ಪ್ರಶಸ್ತಿ ಪುರಸ್ಕಾರಗಳಿಂದ ಬಂದ ಹಣವನ್ನು ಬಡವರಿಗಾಗಿ ವ್ಯಯಿಸಿದ್ದಾರೆ.ಹೀಗೆ ಹತ್ತು ಹಲವು ಸಂಘ,ಸಂಸ್ಥೆಗಳಿಂದ ಹಲವಾರು ಪ್ರಶಸ್ತಿಗಳು ಇವರನ್ನು ಹುಡುಕಿಕೊಂಡು ಬಂದಿವೆ.
ಕೊನೆಯ ಮಾತು
ಸಾವಿರಾರು ಬಡವರಿಗೆ ಕಣ್ಣಿನ ದೃಷ್ಟಿ ನೀಡಿ ನೇತ್ರದಾನಿ ಎಂದೇ ಹೆಸರುವಾಸಿಯಾಗಿದ್ದ ಡಾ.ಎಂ.ಸಿ.ಮೋದಿಯವರು ಕರ್ನಾಟಕ, ಆಂಧ್ರಪ್ರದೇಶ, ತಮಿಳುನಾಡು, ಮಹಾರಾಷ್ಟ್ರ ಸೇರಿ ಹಲವಾರು ರಾಜ್ಯಗಳಲ್ಲಿ ದೃಷ್ಟಿದೋಷದ ಸಾವಿರಾರು ರೋಗಿಗಳಿಗೆ ದೃಷ್ಟಿ ನೀಡುವ ಮೂಲಕ ನೇತ್ರದಾನಿ ಎಂಬ ಬಿರುದು ಪಡೆದುಕೊಂಡಿದ್ದರು. ಜನ ಸೇವೆ ಮೂಲಕ ರಾಜ್ಯ ಹೊರರಾಜ್ಯಗಳಲ್ಲದೆ ದೇಶ ವಿದೇಶಗಳಲ್ಲೂ ಡಾ.ಎಂ.ಸಿ.ಮೋದಿ ಅವರು ಮನೆಮಾತಾಗಿದ್ದರು.
ಸಾಮೂಹಿಕ ನೇತ್ರ ಚಿಕಿತ್ಸಾ ಹಾಗೂ ಸಂಚಾರಿ ಘಟಕವನ್ನು ತೆರೆದ ಮೊದಲ ವೈದ್ಯ ಎಂಬ ಖ್ಯಾತಿಯನ್ನೂ ಕೂಡ ಗಳಿಸಿದ್ದ ಅವರು, ರೈಲಿನಲ್ಲಿ ಪ್ರಯಾಣಿಸುವಾಗಲೂ ಅಲ್ಲಿನ ಪ್ರಯಾಣಿಕರ ಕಣ್ಣುಗಳನ್ನು ಪರೀಕ್ಷಿಸುತ್ತಿದ್ದರು. ಡಾ. ಮೋದಿ ಸಾವಿನಲ್ಲೂ ಸಾರ್ಥಕತೆ ಪಡೆದವರು. ಅವರ ನಿಧನಾನಂತರ (11.11.2005) ಅವರ ಎರಡೂ ಕಣ್ಣಗಳನ್ನು ಅವರ ಕುಟುಂಬದವರು ಅಂಧರಿಗೆ ದಾನ ಮಾಡಿದರು.ಕಣ್ಣುಕೊಟ್ಟ ಅಣ್ಣ ಎಂಬ ಬಿರುದು ಈ ದೃಷ್ಟಿಯಿಂದಲೂ ಅವರ ಜೀವನ ಸಾರ್ಥಕವಾಯಿತು.
ಸುದ್ದಿದಿನ.ಕಾಂ | ವಾಟ್ಸಾಪ್ | 9980346243
ದಿನದ ಸುದ್ದಿ
ಇಂದಿನಿಂದ ಏ.3 ರವರೆಗೆ ಸೂಳೆಕೆರೆಗೆ ನೀರು ಬಿಡುಗಡೆ
ಸುದ್ದಿದಿನ,ದಾವಣಗೆರೆ: ಭದ್ರಾ ಜಲಾಶಯ ಯೋಜನೆ ವ್ಯಾಪ್ತಿಗೆ ಬರುವ ದೇವರಬೆಳಕೆರೆ ಪಿಕ್ಅಪ್ ಅಣೆಕಟ್ಟಿನ ಸ್ಕವರಿಂಗ್ ಸ್ಪೂಯೀಸ್ ಗೇಟ್ ಮುಖಾಂತರ ಜಲಾಶಯದ ಡೆಡ್ ಸ್ಟೋರೇಜ್ ನೀರನ್ನು ಸೂಳೆಕೆರೆ ಹಳ್ಳಕ್ಕೆ ಮಾರ್ಚ್ 28 ರಿಂದ ಏಪ್ರಿಲ್ 3 ರವರೆಗೆ ಪ್ರತಿದಿನ 20 ಕ್ಯೂಸೆಕ್ಸ್ಗಳಲ್ಲಿ ಜನ-ಜಾನುವಾರು ಪಕ್ಷಿಗಳಿಗೆ ಕುಡಿಯುವ ನೀರು ಒದಗಿಸಲು ಹಾಗೂ ಅಕ್ಕಪಕ್ಕದ ಗ್ರಾಮಗಳ ಕುಡಿಯುವ ನೀರಿನ ಉದ್ದೇಶಕ್ಕೆ ಬಿಡಲಾಗುತ್ತಿದೆ.
ಈ ವೇಳೆ ಹಳ್ಳಕ್ಕೆ ದನ ಕರಗಳನ್ನು ಇಳಿಸುವುದಾಗಲಿ, ಪಂಪ್ಸೆಟ್ಗಳಿಂದ ನೀರೆತ್ತುವುದುನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಕನೀನಿನಿ ಕಾರ್ಯಪಾಲಕ ಇಂಜಿನಿಯರ್ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಲೋಕಸಭಾ ಚುನಾವಣೆಯ ಮೊದಲ ಹಂತಕ್ಕೆ ನಾಮಪತ್ರ ಸಲ್ಲಿಕೆಗೆ ಇಂದು ಕೊನೆಯ ದಿನ
ಸುದ್ದಿದಿನ ಡೆಸ್ಕ್ : ಲೋಕಸಭಾ ಚುನಾವಣೆಯ ಮೊದಲ ಹಂತಕ್ಕೆ ನಾಮಪತ್ರ ಸಲ್ಲಿಸಲು ಇಂದು ಕೊನೆಯ ದಿನವಾಗಿದೆ.
ನಾಳೆ ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಇದೇ 30 ನಾಮಪತ್ರ ಹಿಂಪಡೆಯಲು ಕಡೆಯ ದಿನವಾಗಿದೆ. ಇದೇ ವೇಳೆ ಬಿಹಾರದಲ್ಲಿ ನಾಮಪತ್ರ ಸಲ್ಲಿಕೆಗೆ ನಾಳೆ ಕಡೆ ದಿನವಾಗಿದ್ದು, ಈ ತಿಂಗಳ 30 ರಂದು ನಾಮಪತ್ರಗಳ ಪರಿಶೀಲನೆ ಹಾಗೂ ಏಪ್ರಿಲ್ 2ರಂದು ನಾಮತ್ರ ಹಿಂಪಡೆಯುವಿಕೆಗೆ ಕೊನೆಯ ದಿನವಾಗಿರುತ್ತದೆ.
ಏಪ್ರಿಲ್ 19 ರಂದು 17 ರಾಜ್ಯಗಳು ಮತ್ತು ನಾಲ್ಕು ಕೇಂದ್ರಾಡಳಿತ ಪ್ರದೇಶಗಳಲ್ಲಿನ 102ಲೋಕಸಭಾ ಕ್ಷೇತ್ರಗಳಿಗೆ ಮೊದಲ ಹಂತದಲ್ಲಿ ಚುನಾವಣೆ ನಡೆಯಲಿದೆ. ಅದರಂತೆ ತಮಿಳುನಾಡಿನಲ್ಲಿ 39, ರಾಜಸ್ಥಾನದಲ್ಲಿ 12, ಉತ್ತರ ಪ್ರದೇಶದಲ್ಲಿ 8, ಮಧ್ಯಪ್ರದೇಶದಲ್ಲಿ 6, ಉತ್ತರಾಖಂಡ, ಅಸ್ಸಾಂ ಮತ್ತು ಮಹಾರಾಷ್ಟ್ರದಲ್ಲಿ ತಲಾ 5 , ಬಿಹಾರದಲ್ಲಿ 4, ಪಶ್ಚಿಮ ಬಂಗಾಳದಲ್ಲಿ 3, ಅರುಣಾಚಲ ಪ್ರದೇಶ, ಮಣಿಪುರ, ಮೆಘಾಲಯದಲ್ಲಿ ತಲಾ 2 ಮತ್ತು ಛತ್ತೀಸ್ಗಢ, ಮಿಜೋರಾಂ, ನಾಗಾಲ್ಯಾಂಡ್, ಸಿಕ್ಕಿಂ, ತ್ರಿಪುರ, ಅಂಡಮಾನ್-ನಿಕೋಬಾರ್ ದ್ವೀಪಗಳು, ಜಮ್ಮು-ಕಾಶ್ಮೀರ, ಲಕ್ಷದ್ವೀಪ ಮತ್ತು ಪುದುಚೇರಿಯಲ್ಲಿ ತಲಾ ಒಂದು ಕ್ಷೇತ್ರದಲ್ಲಿ ಮೊದಲ ಹಂತದಲ್ಲಿ ಚುನಾವಣೆ ನಡೆಯಲಿದೆ.
ಎರಡನೇ ಹಂತದಲ್ಲಿ 89 ಲೋಕಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದ್ದು, ಚುನಾವಣಾ ಆಯೋಗ ನಾಳೆ ಅಧಿಸೂಚನೆ ಹೊರಡಿಸಲಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಚುನಾವಣಾ ಅಕ್ರಮ ; ಸಾರ್ವಜನಿಕರು ದೂರು ಸಲ್ಲಿಸಲು ಆಯೋಗದಿಂದ ಸಿ-ವಿಜಿಲ್ ಆಪ್ ಅಭಿವೃದ್ಧಿ
ಸುದ್ದಿದಿನ ಡೆಸ್ಕ್ : 18ನೇ ಲೋಕಸಭೆಗೆ ಸದಸ್ಯರನ್ನು ಆಯ್ಕೆ ಮಾಡಲು ನಡೆಯಲಿರುವ ಸಾರ್ವತ್ರಿಕ ಚುನಾವಣೆಗೆ ಭಾರತ ಚುನಾವಣಾ ಆಯೋಗ, ಸಕಲ ಸಿದ್ಧತೆಯೊಂದಿಗೆ ಸಜ್ಜಾಗಿದೆ.
ದೇಶದಲ್ಲಿ ಚುನಾವಣೆಗಳನ್ನು ಪಾರದರ್ಶಕವಾಗಿ ಹಾಗೂ ಅತ್ಯಂತ ವಿಶ್ವಾಸಾರ್ಹ ರೀತಿಯಲ್ಲಿ ನಡೆಸುವ ಸಂಕಲ್ಪದೊಂದಿಗೆ ಚುನಾವಣಾ ಆಯೋಗ, ಸಮಸ್ತ ಚುನಾವಣಾ ಪ್ರಕ್ರಿಯೆಗಳನ್ನು ಸುಗಮಗೊಳಿಸಲು ತಂತ್ರಜ್ಞಾನದ ನೆರವನ್ನು ಬಳಸಿಕೊಳ್ಳುತ್ತಿದೆ. ಈ ನಿಟ್ಟಿನಲ್ಲಿ ಮತದಾರರು, ಚುನಾವಣಾ ಸಿಬ್ಬಂದಿ ಹಾಗೂ ಆಯೋಗಕ್ಕೆ ನೆರವಾಗುವ ಹಲವು ಆಪ್ಗಳನ್ನು ಚುನಾವಣಾ ಆಯೋಗ ಅಭಿವೃದ್ಧಿಪಡಿಸಿದೆ.
ಈ ಪೈಕಿ ಇಂದು ಸಿ-ವಿಜಿಲ್ ಆಪ್ ಬಗ್ಗೆ ಮಾಹಿತಿ.
ದೇಶದಲ್ಲಿ ಚುನಾವಣೆಗಳ ವೇಳೆ ನಡೆಯುವ ಅಕ್ರಮಗಳು, ಮಾದರಿ ನೀತಿ ಸಂಹಿತೆಯ ಉಲ್ಲಂಘನೆ ಪ್ರಕರಣಗಳ ಮೇಲೆ ಕಣ್ಣಿಡುವುದು ಕೇವಲ ಚುನಾವಣಾ ಸಿಬ್ಬಂದಿಯ ಕೆಲಸವಲ್ಲ. ಇದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವೂ ಹೌದು. ಹಾಗಾಗಿ ಚುನಾವಣಾ ಅಕ್ರಮಗಳ ಬಗ್ಗೆ ಸಾರ್ವಜನಿಕರು ಆಯೋಗಕ್ಕೆ ದೂರು ತಲುಪಿಸಲು ಭಾರತ ಚುನಾವಣಾ ಆಯೋಗ ಸಿ-ವಿಜಿಲ್ ಆಪ್ ಅನ್ನು ಅಭಿವೃದ್ಧಿ ಪಡಿಸಿದೆ.
ದೂರುಗಳನ್ನು ಆನ್ಲೈನ್ ಮೂಲಕ ಆಯೋಗಕ್ಕೆ ರವಾನಿಸಲು ಈ ಆಪ್ ನೆರವಾಗುವುದು. ಯಾವುದೇ ಚುನಾವಣಾ ಅಕ್ರಮಗಳ ಬಗ್ಗೆ ಧ್ವನಿಮುದ್ರಣ, ವಿಡಿಯೋ ಚಿತ್ರದ ತುಣುಕುಗಳು ಮತ್ತು ಫೋಟೊ ಮೊದಲಾದ ದಾಖಲೆಗಳನ್ನು ಸಾರ್ವಜನಿಕರು ಇದರ ಮೂಲಕ ಕಳುಹಿಸಬಹುದು.
ಚುನಾವಣೆಗಳಲ್ಲಿ ರಾಜಕೀಯ ಪಕ್ಷಗಳು, ಅಭ್ಯರ್ಥಿಗಳು ಮಾಡುವ ಖರ್ಚು-ವೆಚ್ಚ, ಮತದಾರರ ಮನವೊಲಿಕೆಗೆ ಆಮಿಷಗಳ ಬಳಕೆ ಮೊದಲಾದ ಅಕ್ರಮಗಳ ಬಗ್ಗೆ ದೂರು ನೀಡಲು ಇದನ್ನು ಬಳಸಬಹುದು. ಒಂದುನೂರು ನಿಮಿಷಗಳಲ್ಲಿ ಚುನಾವಣಾಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳುತ್ತಾರೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಹೇಳಿದ್ದಾರೆ.
ದೇಶದ ಯಾವ ಮೂಲೆಯಲ್ಲೇ ಆಗಲಿ ನಡೆಯುವ ಚುನಾವಣಾ ಅಕ್ರಮ ಅಥವಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಗಳ ಬಗ್ಗೆ ತಾವು ನೀಡಿದ ದೂರುಗಳನ್ನು ಆಯೋಗ ಪರಿಗಣಿಸಿದೆಯೇ ಎನ್ನುವ ವಿವರಗಳನ್ನು ಸಹ ಸಾರ್ವಜನಿಕರು ಸಿ-ವಿಜಿಲ್-ಆಪ್ ಮೂಲಕ ವೀಕ್ಷಿಸಬಹುದು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
-
ದಿನದ ಸುದ್ದಿ7 days ago
ಅನಧಿಕೃತ ರಾಜಕೀಯ ಪೋಸ್ಟರ್ಸ್ ತೆರವಿಗೆ ಚುನಾವಣಾ ಆಯೋಗ ಸೂಚನೆ
-
ದಿನದ ಸುದ್ದಿ7 days ago
ದಾವಣಗೆರೆ | ದ್ವಿತೀಯ ಪಿ.ಯು.ಸಿ ಪರೀಕ್ಷೆ ; ಹಾಜರಾದ ವಿದ್ಯಾರ್ಥಿಗಳಿಷ್ಟು
-
ದಿನದ ಸುದ್ದಿ7 days ago
ದಾವಣಗೆರೆ | ವಿನೋಬನಗರದ ಶ್ರೀ ಚೌಡೇಶ್ವರಿ ಜಾತ್ರೆ ಸಂಭ್ರಮ
-
ದಿನದ ಸುದ್ದಿ6 days ago
ಭಾನುವಾರದಂದು ಕಾರ್ಯನಿರ್ವಹಿಸುವಂತೆ ಬ್ಯಾಂಕ್ಗಳಿಗೆ ಆರ್ ಬಿ ಐ ಸೂಚನೆ
-
ದಿನದ ಸುದ್ದಿ6 days ago
ನಾಯಕನ ಹಟ್ಟಿ | ಶ್ರೀಗುರು ತಿಪ್ಪೇರುದ್ರಸ್ವಾಮಿ ರಥೋತ್ಸವಕ್ಕೆ ವಿಶೇಷ ಬಸ್ ಸೌಲಭ್ಯ
-
ದಿನದ ಸುದ್ದಿ6 days ago
ಕಾಂಗ್ರೆಸ್ ಪಕ್ಷದ ಬ್ಯಾಂಕ್ ಖಾತೆಗಳು ಸ್ಥಗಿತ ; ಬಿಜೆಪಿ ಅಧಿಕಾರ ದುರುಪಯೋಗ : ಖರ್ಗೆ ಕಿಡಿ
-
ದಿನದ ಸುದ್ದಿ5 days ago
ಲೋಕಸಭಾ ಚುನಾವಣೆ : ಚುನಾವಣಾ ಚಟುವಟಿಕೆಗಳ ಕುರಿತ ಜಿಲ್ಲಾವಾರು ಮಾಹಿತಿ
-
ದಿನದ ಸುದ್ದಿ5 days ago
ವಿಜಯಪುರ ಜಿಲ್ಲಾ ಸಾಹಿತ್ಯ ಸಮ್ಮೇಳನದ ಕವಿಗೋಷ್ಠಿಗೆ ಮೈಬೂಬಸಾಹೇಬ.ವೈ.ಜೆ ಆಯ್ಕೆ