ದಿನದ ಸುದ್ದಿ
ಜ್ಯೂನಿಯರ್ ರಾಜ್ ಕುಮಾರ್ ಎಂದೇ ಪ್ರಸಿದ್ಧರಾದ ಕೊಡಗಿನ ಜಯಕುಮಾರ್ ನಿಧನ
ಸುದ್ದಿದಿನ, ದಾವಣಗೆರೆ : ರಂಗಭೂಮಿ, ಸಿನಿಮಾ, ಕಿರುತೆರೆಯ ಹಿರಿಯ ಕಲಾವಿದ ಕೊಡಗನೂರು ಜಯಕುಮಾರ್ (72 ವರ್ಷ) ಇಂದು ಬೆಳಗ್ಗೆ 11 ಗಂಟೆಗೆ ದಾವಣಗೆರೆಯಲ್ಲಿ ಹೃದಯಾಘಾತದಿಂದ ಅಗಲಿದ್ದಾರೆ. ದಾವಣಗೆರೆ ಸಮೀಪ ಕೊಡಗನೂರು ಅವರ ಜನ್ಮಸ್ಥಳ. ವೃತ್ತಿರಂಗಭೂಮಿ ಜೊತೆ ಅವರದು ಸುಮಾರು ನಾಲ್ಕೂವರೆ ದಶಕಗಳ ಒಡನಾಟ. ಕನ್ನಡ ವೃತ್ತಿರಂಗಭೂಮಿಯಲ್ಲಿ ಅವರು ಜ್ಯೂನಿಯರ್ ರಾಜಕುಮಾರ್ ಎಂದೇ ಹೆಸರಾದವರು.
ಗುಬ್ಬಿ ಕಂಪನಿ, ಕೆಬಿಆರ್ ಕಂಪನಿ, ಕುಮಾರೇಶ್ವರ ನಾಟಕ ಸಂಘ, ಶ್ರೀ ಶೈಲ ಮಲ್ಲಿಕಾರ್ಜುನ ನಾಟ್ಯ ಸಂಘ, ಕರ್ನಾಟಕ ಕಲಾ ವೈಭವ ಸಂಘ, ಸಂಗಮೇಶ್ವರ ನಾಟಕ ಸಂಘಗಳ ಹಲವಾರು ನಾಟಕಗಳಲ್ಲಿ ಜಯಕುಮಾರ್ ಅಭಿನಯಿಸಿದ್ದಾರೆ.
ಪೊಲೀಸನ ಮಗಳು, ನಾಯಕನಹಟ್ಟಿ ತಿಪ್ಪೇರುದ್ರಸ್ವಾಮಿ ಮಹಾತ್ಮೆ, ಮದಕರಿನಾಯಕ, ಮುದುಕನ ಮದುವೆ, ಟಿಪ್ಪು ಸುಲ್ತಾನ, ಗೋಮುಖ ವ್ಯಾಘ್ರ, ರಾಷ್ಟ್ರವೀರ ಎಚ್ಚಮ್ಮನಾಯಕ ಅವರಿಗೆ ಜನಪ್ರಿಯತೆ ತಂದುಕೊಟ್ಟ ನಾಟಕಗಳು. ರಂಗಭೂಮಿಯ ಹೆಸರಾಂತ ನಿರ್ದೇಶಕರಾದ ಪಿ.ಬಿ.ದುತ್ತರಗಿ, ಆರ್.ಡಿ.ಕಾಮತ್ ಅವರ ನಾಟಕಗಳಲ್ಲಿ ನಟಿಸಿದ್ದಾರೆ.
ಮುಸುರಿ ಕೃಷ್ಣಮೂರ್ತಿ, ಸುಂದರ ಕೃಷ್ಣ ಅರಸ್, ಜಿ.ವಿ.ಚನ್ನಬಸಪ್ಪ, ಎಚ್.ಟಿ.ಅರಸ್, ಉಮಾಶ್ರೀ, ದಿನೇಶ್, ಉದಯಕುಮಾರ್, ಸುಧೀರ್, ಓಬಳೇಶ್ವರ್ ಸೇರಿದಂತೆ ವೃತ್ತಿರಂಗಭೂಮಿಯ ಹೆಸರಾಂತ ಕಲಾವಿದರೊಂದಿಗೆ ಅಭಿನಯಿಸಿದ್ದಾರೆ.
ತಾಯಿಗೊಬ್ಬ ಕರ್ಣ, ಸತ್ಯನಾರಾಯಣ ಪೂಜಾಫಲ, ಸಾಂಗ್ಲಿಯಾನ-3, ಜನುಮದ ಜೋಡಿ, ಕಿಟ್ಟಿ, ಜಾಕಿ, ರಾಜ, ತಾಯಿ, ಶಬರಿ, ಮರಣದಂಡನೆ ಸೇರಿದಂತೆ 50ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಅಭಿನಯಿಸಿದ್ದಾರೆ. ಸಂಕ್ರಾಂತಿ, ಮಹಾಮಾಯೆ, ಅಪ್ಪ, ಕೆಳದಿ ಚನ್ನಮ್ಮ, ಭಾಗೀರಥಿ, ಶ್ರೀ ರಾಘವೇಂದ್ರ ವೈಭವ, ಪಾ.ಪ.ಪಾಂಡು, ಶ್ರೀ ಕಲಾಭೈರವ ಮಹಾತ್ಮೆ ಸೇರಿದಂತೆ 20ಕ್ಕೂ ಹೆಚ್ಚು ಧಾರಾವಾಹಿಗಳಲ್ಲಿ ವೈವಿಧ್ಯಮಯ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಸುವರ್ಣ ಅಕಾಡೆಮಿ ಪ್ರಶಸ್ತಿ, ವರದಪ್ಪ ಪ್ರಶಸ್ತಿ, ಆರ್ಯಭಟ ಪ್ರಶಸ್ತಿ, ರಾಜ್ಯೋತ್ಸವ ಪ್ರಶಸ್ತಿಗೆ ಅವರು ಭಾಜನರಾಗಿದ್ದಾರೆ.
(ಮಾಧ್ಯಮದವರು ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ- 9606684489, 9743683835)
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಶಿವಮೊಗ್ಗಕ್ಕೆ ಇಂದು ಪ್ರಧಾನಿ ನರೇಂದ್ರ ಮೋದಿ
ಸುದ್ದಿದಿನ, ಶಿವಮೊಗ್ಗ : ಪ್ರಧಾನಮಂತ್ರಿ ನರೇಂದ್ರ ಮೋದಿ ಇಂದು ಮಧ್ಯಾಹ್ನ 2 ಗಂಟೆಗೆ ಶಿವಮೊಗ್ಗದಲ್ಲಿ ಬೃಹತ್ ಸಾರ್ವಜನಿಕ ಸಭೆಯನ್ನುದ್ದೇಶಿ ಮಾತನಾಡಲಿದ್ದಾರೆ.
ಯುವಜನರು, ಮಹಿಳೆಯರು, ರೈತರು ಸೇರಿ ಸುಮಾರು ಎರಡೂವರೆ ಲಕ್ಷಕ್ಕೂ ಹೆಚ್ಚು ಜನರು ಕಾರ್ಯಕ್ರಮದಲ್ಲಿ ಭಾಗವಹಿಸುವ ನಿರೀಕ್ಷೆ ಇದೆ ಎಂದು ವಿಧಾನಪರಿಷತ್ ಮುಖ್ಯ ಸಚೇತಕ ಎನ್.ರವಿಕುಮಾರ್ ಶಿವಮೊಗ್ಗದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಚುನಾವಣಾ ಬಾಂಡ್ ಕುರಿತ ದತ್ತಾಂಶ ಬಿಡುಗಡೆ
ಸುದ್ದಿದಿನ,ನವದೆಹಲಿ : ಚುನಾವಣಾ ಬಾಂಡ್ ಕುರಿತಂತೆ ಸುಪ್ರೀಂಕೋರ್ಟ್ನ ರಿಜಿಸ್ಟ್ರಿ ಇಂದ ಲಭ್ಯವಾದ ಅಂಕಿಕೃತ ದತ್ತಾಂಶ ಮಾದರಿಯನ್ನು ಚುನಾವಣಾ ಆಯೋಗ ಭಾನುವಾರ ತನ್ನ ವೆಬ್ಸೈಟ್ನಲ್ಲಿ ಅಪ್ಲೋಡ್ ಮಾಡಿದೆ. www.eci.gov.in/candidate-politicalparty ವೆಬ್ಸೈಟ್ನಲ್ಲಿ ಈ ದತ್ತಾಂಶ ಲಭ್ಯವಿರುತ್ತದೆ.
ಸುಪ್ರೀಂಕೋರ್ಟ್ ನಿರ್ದೇಶಿಸಿದಂತೆ ರಾಜಕೀಯ ಪಕ್ಷಗಳು ಚುನಾವಣಾ ಬಾಂಡ್ ಕುರಿತ ದತ್ತಾಂಶಗಳನ್ನು ಮೊಹರು ಹಾಕಿದ ಲಕೋಟೆಯಲ್ಲಿ ಸಲ್ಲಿಸಿದ್ದವು ಎಂದು ಚುನಾವಣಾ ಆಯೋಗದ ಹೇಳಿಕೆ ತಿಳಿಸಿದೆ. ರಾಜಕೀಯ ಪಕ್ಷಗಳಿಂದ ಸ್ವೀಕರಿಸಿದ ಮೊಹರು ಹಾಕಿದ ಲಕೋಟೆಗಳನ್ನು ತೆರೆಯದೇ ಸುಪ್ರೀಂಕೋರ್ಟ್ಗೆ ಸಲ್ಲಿಸಲಾಗಿತ್ತು.
ಇದೇ 15ರಂದು ಸುಪ್ರೀಂಕೋರ್ಟ್ ನೀಡಿದ ಆದೇಶದ ಮೇರೆಗೆ ಸುಪ್ರೀಂಕೋರ್ಟ್ನ ರಿಜಿಸ್ಟ್ರಿ, ಭೌತಿಕ ಪ್ರತಿ ಹಾಗೂ ಅದರ ಡಿಜಿಟಲ್ ದಾಖಲೆಯಿರುವ ಪೆನ್ಡ್ರೈವ್ ಒಳಗೊಂಡ ಮೊಹರು ಹಾಕಿದ ಲಕೋಟೆಯನ್ನು ಹಿಂತಿರುಗಿಸಿತ್ತು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ರಶ್ಮಿ ಚಂದ್ರಗಿರಿ ಅವರಿಗೆ ಪಿಎಚ್.ಡಿ ಪದವಿ
ಸುದ್ದಿದಿನ,ಹಾವೇರಿ : ನಗರದ ರಶ್ಮಿ ಚಂದ್ರಗಿರಿ ಅವರು ಕರ್ನಾಟಕ ವಿಶ್ವವಿದ್ಯಾಲಯಕ್ಕೆ ಮಂಡಿಸಿದ “ದಲಿತ ಬಂಡಾಯ ಕಾದಂಬರಿಗಳಲ್ಲಿ ಸಾಂಸ್ಕೃತಿಕ ನೆಲೆಗಳು” ಎಂಬ ಮಹಾಪ್ರಬಂಧಕ್ಕೆ ಕರ್ನಾಟಕ ವಿಶ್ವವಿದ್ಯಾಲಯ ಪಿಎಚ್.ಡಿ ಪದವಿ ಪ್ರಧಾನ ಮಾಡಿದೆ.
ಇವರಿಗೆ ಡಾ.ಬಿಎಸ್.ಭಜಂತ್ರಿ , ಸಹಾಯಕ ಪ್ರಧ್ಯಾಪಕರು ಕರ್ನಾಟಕ ಕಲಾ ಮಹಾವಿದ್ಯಾಲಯ ಧಾರವಾಡ ಇವರು ಮಾರ್ಗದರ್ಶನ ಮಾಡಿದ್ದರು.
ಬರವಣಿಗೆಯಲ್ಲಿ ತೊಡಗಿಸಿಕೊಂಡಿರುವ ರಶ್ಮಿ ಚಂದ್ರಗಿರಿಯವರ ಹಲವು ಲೇಖನಗಳು ನಿಯತಕಾಲಿಕೆಗಳಲ್ಲಿ ಪ್ರಕಟಗೊಂಡಿವೆ. ಪ್ರಸ್ತುತ ಇವರು ಉಪನ್ಯಾಸಕಿಯಾಗಿ ಕಾರ್ಯನಿರ್ವಹಿಸಿತ್ತಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243