ದಿನದ ಸುದ್ದಿ
ಪ್ರವಾಹ ಸಂತ್ರಸ್ತರ ನೆರವಿಗೆ ಸರ್ಕಾರ ಬದ್ಧ : ಮನೆ ನಿರ್ಮಾಣ, ಪರಿಹಾರ ಬಿಡುಗಡೆಗೆ ಕಟ್ಟುನಿಟ್ಟಿನ ಸೂಚನೆ : ಸಚಿವ ಆರ್. ಅಶೋಕ್
ಸುದ್ದಿದಿನ,ಬೆಳಗಾವಿ : ಕಳೆದ ವರ್ಷ ಆಗಸ್ಟ್ ನಲ್ಲಿ ಪ್ರವಾಹದಿಂದ ಮನೆ ಕಳೆದುಕೊಂಡವರ ಸಮೀಕ್ಷೆ ಪೂರ್ಣಗೊಂಡು ವಸತಿ ನಿಗಮದ ತಂತ್ರಾಂಶದಲ್ಲಿ ದಾಖಲಿಸಲಾಗಿರುವ ಕುಟುಂಬಗಳಿಗೆ ತಕ್ಷಣವೇ ಪರಿಹಾರ ಒದಗಿಸಬೇಕು. ಈಗಾಗಲೇ ಪರಿಹಾರ ಪಡೆದವರು ಮನೆ ನಿರ್ಮಿಸಲು ಕ್ರಮಕೈಗೊಳ್ಳಬೇಕು ಎಂದು ಕಂದಾಯ ಇಲಾಖೆಯ ಸಚಿವ ಆರ್. ಅಶೋಕ ಅವರು ಜಿಲ್ಲಾಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಅತಿವೃಷ್ಟಿ ಹಾಗೂ ಪ್ರವಾಹ ನಿರ್ವಹಣೆಗೆ ಸಂಬಂಧಿಸಿದಂತೆ ಕೈಗೊಂಡ ಕ್ರಮಗಳ ಕುರಿತು ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಸೋಮವಾರ(ಅ.19) ನಡೆದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಒಂದು ವೇಳೆ ತಂತ್ರಾಂಶದಲ್ಲಿ ಬೋಗಸ್ ಎಂಟ್ರಿ ಆಗಿರುವುದು ಕಂಡುಬಂದರೆ ರದ್ದುಪಡಿಸಿ, ಉಳಿದ ಎಲ್ಲ ಕೆಟಗರಿ ಮನೆಗಳ ಸಮೀಕ್ಷೆಯನ್ನು ಎರಡು ತಿಂಗಳಲ್ಲಿ ಪೂರ್ಣಗೊಳಿಸಿ ಕೂಡಲೇ ಪರಿಹಾರ ಬಿಡುಗಡೆಗೊಳಿಸಿ, ಮನೆ ನಿರ್ಮಾಣ ಕಾರ್ಯ ಪೂರ್ಣಗೊಳಿಸುವಂತೆ ತಿಳಿಸಿದರು.
ನಿರ್ಮಾಣ ವಿಳಂಬ ಸಚಿವರ ಬೇಸರ
ಅತಿವೃಷ್ಟಿ ಹಾಗೂ ಪ್ರವಾಹದಿಂದ ನೊಂದವರಿಗೆ ಎಲ್ಲ ಸೌಲಭ್ಯ ಕಲ್ಪಿಸಲು ಕ್ರಮ ಕೈಗೊಳ್ಳಲಾಗಿದೆ. ಆದರೆ ಕಳೆದ ಬಾರಿ ಪ್ರವಾಹದಲ್ಲಿ ಉಂಟಾಗಿರುವ ಹಾನಿಯನ್ನು ಇದುವರೆಗೆ ಭರಿಸಿಲ್ಲ ಹಾಗೂ ಮನೆ ನಿರ್ಮಾಣಕ್ಕೆ ಪರಿಹಾರ ನೀಡಿಲಗಲ ಎಂಬ ದೂರುಗಳು ವ್ಯಾಪಕವಾಗಿ ಕೇಳಿಬರುತ್ತಿವೆ.
ಈಗಾಗಲೇ ಸರ್ಕಾರ ಹಣ ಬಿಡುಗಡೆ ಮಾಡಿದ್ದಾಗ್ಯೂ ಇದುವರೆಗೆ ಎಲ್ಲ ಕುಟುಂಬಗಳಿಗೆ ಪರಿಹಾರ ಯಾಕೆ ತಲುಪಿಲ್ಲ ಎಂದು ಜಿಲ್ಲಾಧಿಕಾರಿಗಳನ್ನು ಸಚಿವರು ಪ್ರಶ್ನಿಸಿದರು.
ಜಿಲ್ಲೆಯಲ್ಲಿ ಹಾನಿಯಾಗಿರುವ ಸುಮಾರು 6000 ಮನೆಗಳ ನಿರ್ಮಾಣಕ್ಕೆ ಪರಿಹಾರ ಬಿಡುಗಡೆ ಮಾಡಿದಾಗ್ಯೂ ಇದುವರೆಗೆ ಕೇವಲ 500 ಮನೆಗಳ ನಿರ್ಮಾಣ ಆಗಿರುವ ಬಗ್ಗೆ ಪ್ರಸ್ತಾಪಿಸಿದ ಸಚಿವರು, ಪರಿಹಾರ ನೀಡಲಾದ ಮನೆಗಳ ನಿರ್ಮಾಣಕ್ಕೆ ಮೊದಲು ಕ್ರಮಕೈಗೊಳ್ಳಬೇಕು ಎಂದು ನಿರ್ದೇಶನ ನೀಡಿದರು.
ಮನೆ ನಿರ್ಮಿಸಿಕೊಳ್ಳದಿದ್ದರೆ ಅಂತಹವರ ಪರಿಹಾರ ರದ್ದುಗೊಳಿಸಬೇಕು ಹಾಗೂ ಮನೆ ನಿರ್ಮಾಣದಲ್ಲಿ ಪ್ರಗತಿ ಸಾಧಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಕಂದಾಯ ಸಚಿವ ಅಶೋಕ ತಿಳಿಸಿದರು.
ಪ್ರತಿವರ್ಷ ಪ್ರವಾಹದಿಂದ ಬಾಧಿತಗೊಳ್ಳುವ ಹಳ್ಳಿಗಳನ್ನು ಸ್ಥಳಾಂತರಿಸಲು ಅವಕಾಶಗಳಿವೆ. ಆದರೆ ಈಗಾಗಲೆ ನಿರ್ಮಿಸಿ ಕೊಟ್ಟಿರುವ ಮನೆಗಳಿಗೆ ಜನ ಹೊಗದೇ, ಮೊದಲು ಇದ್ದ ಮನೆಗಳಲ್ಲೇ ವಾಸಿಸುತ್ತಿದ್ದಾರೆ.
ಬೆಳೆ ಪರಿಹಾರದ ಸಮಿಕ್ಷೇಯನ್ನು ಆದಷ್ಟು ಬೇಗ ಮೂಗಿಸಿ ಪರಿಹಾರ ನೀಡಬೇಕು.
ಜಿಲ್ಲಾಡಳಿತ ಪ್ರವಾಹ ನಿರ್ವಹಣೆಗೆ ಮುಂಜಾಗೃತ ಕ್ರಮ ಕೈಗೊಳಬೇಕು. ಆ ಸಂದರ್ಭದಲ್ಲಿ ಅಧಿಕಾರಿಗಳು ರಜೆ ಹಾಕದೇ ಕರ್ತವ್ಯಕ್ಕೆ ಹಾಜರಾಗಬೇಕು; ಪ್ರವಾಹ ನಿರ್ವಹಣೆ ಅನುದಾನ ದುರುಪಯೋಗ ಆಗಬಾರದು ಎಂದು ಕಂದಾಯ ಸಚಿವ ಆರ್. ಅಶೋಕ ತಿಳಿಸಿದರು.
ಕಬ್ಬು ಬೆಳೆ ಹಾನಿ- ಸಚಿವ ಜಾರಕಿಹೊಳಿ
ಜಿಲ್ಲಾ ಉಸ್ತುವಾರಿ ಸಚಿವರಾದ ರಮೇಶ್ ಜಾರಕಿಹೊಳಿ, ಜಿಲ್ಲೆಯಲ್ಲಿ ಮಳೆಯಿಂದ ಕಬ್ಬು ಬೆಳೆ ಹಾನಿ ಆಗಿದೆ ಹಾಗಾಗಿ ಸಕ್ಕರೆ ಕಾರ್ಖಾನೆಯವರ ಜತೆ ಸಭೆ ಮಾಡಿ ಕಬ್ಬು ಕಟಾವು ಪ್ರಾರಂಭಿಸಬೇಕು ಎಂದು ಜಿಲ್ಲಾಧಿಕಾರಿಗಳಿಗೆ ಸೂಚಿಸಿದರು.
ಮಹಾರಾಷ್ಟ್ರದ ಜಲಾಶಯದಿಂದ ನೀರು ಬಿಡುಗಡೆ ಮಾಡಿರುವ ಬಗ್ಗೆ ಹಾಗೂ ಪ್ರಸ್ತುತ ಕೃಷ್ಣಾ, ಘಟಪ್ರಭಾ ಹಾಗೂ ಮಲಪ್ರಭಾ ನದಿಗಳ ನೀರಿನ ಸ್ಥಿಗತಿ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.
ವಿಧಾನಸಭೆ ಉಪ ಸಭಾಪತಿ ಆನಂದ ಮಾಮನಿ, ಅಗಸ್ಟ್ ಮಾಹೆಯಲ್ಲಿ ಮನೆ ಕಳೆದುಕೊಂಡವರ ವಿವರ ಮಾತ್ರ ಲಾಗಿನ್ ಸೆಪ್ಟೆಂಬರ್ ಹಾಗೂ ಅಕ್ಟೋಬರ್ ಮಾಹೆಯಲ್ಲಿ ಮನೆ ಕಳೆದುಕೊಂಡವರ ವಿವರ ದಾಖಲಾಗಿಲ್ಲ ಎಂದು ತಿಳಿಸಿದರು.
ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ಸಮರ್ಪಕ ಸಮೀಕ್ಷೆ ಕೈಗೊಂಡು ಎಲ್ಲ ಅರ್ಹರಿಗೂ ಪರಿಹಾರ ತಲುಪಿಸಬೇಕು ಎಂದು ಹೇಳಿದರು.
ತಾಂಡ ಅಭಿವೃದ್ಧಿ ನಿಗಮದ ಅಧ್ಯಕ್ಷರೂ ಆಗಿರುವ ಕುಡಚಿ ಶಾಸಕ ಪಿ.ರಾಜೀವ್ ಮಾತನಾಡಿ, ಮನೆ ಬಿದ್ದಿರುವ ಜಾಗೆಯಲ್ಲಿಯೇ ಮನೆ ಕಟ್ಟಿಸಬೇಕು ಎಂಬ ಕಾರಣಕ್ಕೆ ತಡವಾಗಿದೆ. ಇದೀಗ ಬೇರೆ ಕಡೆ ಕೂಡ ಕಟ್ಟಿಸಲು ಅವಕಾಶ ಕಲ್ಪಿಸಿರುವುದರಿಂದ ಮನೆ ನಿರ್ಮಾಣ ನಿಧಾನವಾಗಿ ಆರಂಭಗೊಳ್ಳುತ್ತಿದೆ ಎಂದು ತಿಳಿಸಿದರು.
ಗಾಯರಾಣದಲ್ಲಿರುವ ಮನೆಗಳ ಹಾನಿ ವಿವರ ತಂತ್ರಾಂಶದಲ್ಲಿ ಅಳವಡಿಸಲು ಸಾಧ್ಯವಾಗುತ್ತಿಲ್ಲ. ಈ ಬಗ್ಗೆ ಸರ್ಕಾರದ ಮಟ್ಟದಲ್ಲಿ ಕ್ರಮ ಕೈಗೊಳ್ಳಲು ಮನವಿ ಮಾಡಿಕೊಂಡರು.
ಶಾಸಕರಾದ ದುರ್ಯೋಧನ ಐಹೊಳೆ, ಪರಿಹಾರ ಬಿಡುಗಡೆ ಮತ್ತು ಮನೆ ನಿರ್ಮಾಣಕ್ಕೆ ವಿಳಂಬವಾಗುತ್ತಿರುವ ಬಗ್ಗೆ ಗಮನಸೆಳೆದರು.
ಶಾಸಕರಾದ ಅನಿಲ್ ಬೆನಕೆ, ಸಂಪೂರ್ಣ ನಗರ ಪ್ರದೇಶವನ್ನು ಹೊಂದಿರುವ ಬೆಳಗಾವಿ ಉತ್ತರ ಕ್ಷೇತ್ರದಲ್ಲಿ ಕೂಡ ಇದುವರೆಗೆ ಮನೆ ಕಳೆದುಕೊಂಡವರ ಸಮರ್ಪಕ ಸಮೀಕ್ಷೆ ಆಗಿಲ್ಲ ಹಾಗೂ ಪರಿಹಾರ ವಿಳಂಬವಾಗಿದೆ ಎಂದು ಸಚಿವರ ಗಮನಕ್ಕೆ ತಂದರು.
ಶಾಸಕರಾದ ಅಭಯ್ ಪಾಟೀಲ, ಕಳೆದ ಬಾರಿ ಪ್ರವಾಹದಲ್ಲಿ ಮನೆ ಕಳೆದುಕೊಂಡಿರುವ ಎಲ್ಲ ಕುಟುಂಬಗಳ ವಿವರ ಸಮರ್ಪಕವಾಗಿ ದಾಖಲಾಗಿಲ್ಲ. ಕಳೆದ ವರ್ಷ ಆಗಸ್ಟ್ನಲ್ಲಿ ಸಮೀಕ್ಷೆ ಪೂರ್ಣಗೊಂಡಿರುವ ಕುಟುಂಬಗಳಿಗೂ ಪರಿಹಾರ ದೊರೆತಿಲ್ಲ ಎಂದು ಸಭೆಯಲ್ಲಿ ತಿಳಿಸಿದರು.
ಶೀಘ್ರ ಬೆಳೆ ಪರಿಹಾರ ಜಮಾ-ಜಿಲ್ಲಾಧಿಕಾರಿ
ಕಳೆದ ವರ್ಷದಿಂದ ಎದುರಾಗಿರುವ ಅತಿವೃಷ್ಟಿ ಮತ್ತು ಪರಿಹಾರದ ಕುರಿತು ಮಾಹಿತಿ ನೀಡಿದ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ, ಆಗಸ್ಟ್ನಲ್ಲಿ ಶೇ.139 ರಷ್ಟು ಅಧಿಕ ಮಳೆಯಿಂದ ಪ್ರವಾಹ ಸ್ಥಿತಿ ಎದುರಾಗಿತ್ತು. ಸದ್ಯಕ್ಕೆ ಪ್ರವಾಹ ಸ್ಥಿತಿಯಿಲ್ಲ ಎಂದು ತಿಳಿಸಿದರು.
ಹುಕ್ಕೇರಿಯಲ್ಲಿ ಮಾತ್ರ ಅತಿವೃಷ್ಟಿಯಿಂದ ಒಬ್ಬ ವ್ಯಕ್ತಿ ಪ್ರಾಣ ಕಳೆದುಕೊಂಡಿದ್ಧಾರೆ.
ಜಿಲ್ಲೆಯಲ್ಲಿ ಒಟ್ಟಾರೆ 4619 ಮನೆಗಳಿಗೆ ಹಾನಿ ಯಾಗಿದ್ದು, ಸದ್ಯಕ್ಕೆ ಕಾಳಜಿ ಕೇಂದ್ರಗಳು ಕಾರ್ಯನಿರ್ವಹಿಸುತ್ತಿಲ್ಲ.
14 ಸಾವಿರ ರೈತರಿಗೆ 6.40 ಕೋಟಿ ಬೆಳೆ ಪರಿಹಾರ ಪಾವತಿಸಲಾಗಿದ್ದು, ಉಳಿದವರಿಗೆ ಶೀಘ್ರ ಪಾವತಿಸಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದರು.
1.66 ಲಕ್ಷ ಹೆಕ್ಟೇರ್ ಬೆಳೆಹಾನಿಯಾಗಿದ್ದು, ಜಂಟಿ ಸಮೀಕ್ಷೆ ನಡೆದಿದ್ದು, ಇದಾದ ಬಳಿಕ ಹಾನಿಯ ಸಮಗ್ರ ವರದಿಯನ್ನು ಸಲ್ಲಿಸಲಾಗುವುದು. ಹತ್ತು ದಿನಗಳಲ್ಲಿ ಪರಿಹಾರ ವಿತರಣಾ ಕಾರ್ಯ ಪೂರ್ಣಗೊಳಿಸಲಾಗುವುದು ಎಂದು ಜಿಲ್ಲಾಧಿಕಾರಿ ಹಿರೇಮಠ ತಿಳಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಸಂವಿಧಾನಕ್ಕೆ ಅಪಾಯವಾದರೆ, ಬಡವರ, ಶ್ರಮಿಕರ ಭವಿಷ್ಯಕ್ಕೆ ಅಪಾಯವಾದಂತೆ : ಸಿಎಂ ಸಿದ್ದರಾಮಯ್ಯ
ಸುದ್ದಿದಿನ,ಮಡಿಕೇರಿ : ದೇಶದ ಸಂವಿಧಾನಕ್ಕೆ ಅಪಾಯವಾದರೆ ಈ ದೇಶದ ಮಹಿಳೆಯರ, ಬಡವರ, ಮಧ್ಯಮ ವರ್ಗದವರ, ಶ್ರಮಿಕರ, ಬದುಕು-ಭವಿಷ್ಯಕ್ಕೆ ಅಪಾಯ ಎಂದರ್ಥ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಮಡಿಕೇರಿಯಲ್ಲಿ ನಡೆದ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಈ ಲೋಕಸಭಾ ಚುನಾವಣೆ ನಮಗೊಂದು ಅವಕಾಶ. ಈ ಬಾರಿ ಬಿಜೆಪಿಯನ್ನು ಸೋಲಿಸಿ ಕಾಂಗ್ರೆಸ್ ಗೆಲ್ಲಿಸುವ ಮೂಲಕ ಪ್ರಜಾತಂತ್ರ ಉಳಿಸಬೇಕು ಎಂದು ಕರೆ ನೀಡಿದರು.
ಬಳಿಕ ತುಮಕೂರಿನಲ್ಲಿ ಮಾತನಾಡಿದ ಅವರು, ರಾಜ್ಯದ ಹಿತಾಸಕ್ತಿ ಕಾಪಾಡುವಲ್ಲಿ ಕಳೆದ ಲೋಕಸಭಾ ಚುನಾವಣೆಯಲ್ಲಿ ಆಯ್ಕೆಯಾಗಿದ್ದ ಬಿಜೆಪಿ ಸಂಸದರು ವಿಫಲರಾಗಿದ್ದಾರೆ ಎಂದು ಮುಖ್ಯಮಂತ್ರಿ ಆರೋಪಿಸಿದರು.
ಮಹಿಳೆಯರ ಅಭ್ಯುದಯಕ್ಕಾಗಿ ಪಂಚ ಗ್ಯಾರಂಟಿ ಯೋಜನೆಗಳನ್ನು ನುಡಿದಂತೆ ಜಾರಿಗೆ ತಂದಿದ್ದೇವೆ. ಇದರಿಂದಾಗಿ ಮಹಿಳೆಯರ ಜೀವನದಲ್ಲಿ ಸುಧಾರಣೆ ಕಂಡಿದೆ, ಈ ಯೋಜನೆಯ ಫಲಾನುಭವಿಗಳ ಬಗ್ಗೆ ಟೀಕಿಸುವುದು ಸರಿಯಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಮಡಿಕೇರಿಯಲ್ಲಿ ನಡೆದ ಜನಧ್ವನಿ-2 ಬೃಹತ್ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದೆ.
ಸಂವಿಧಾನಕ್ಕೆ ಅಪಾಯ ಎಂದರೆ ದೇಶದ ಮಹಿಳೆಯರು, ಬಡವರು, ಮಧ್ಯಮ ವರ್ಗದವರು, ಶೂದ್ರರು, ಶ್ರಮಿಕರ ಬದುಕು-ಭವಿಷ್ಯಕ್ಕೆ ಅಪಾಯ ಎಂದರ್ಥ.
ಭಾರತದಲ್ಲಿ ಪ್ರಜಾತಂತ್ರ ಅಪಾಯದಲ್ಲಿದೆ. ಇದನ್ನು ಉಳಿಸುವ ಅನಿವಾರ್ಯತೆ ನಮ್ಮೆಲ್ಲರ ಮುಂದಿದೆ. ಈ ಲೋಕಸಭಾ ಚುನಾವಣೆ ನಮಗೊಂದು… pic.twitter.com/UapeRxBcZP
— Siddaramaiah (@siddaramaiah) April 14, 2024
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ದಾವಣಗೆರೆ | ದ್ವಿತೀಯ ಪಿ.ಯು.ಸಿ ಪರೀಕ್ಷೆ; ಜಿಲ್ಲೆಗೆ ಶೇ 80.96 ರಷ್ಟು ಫಲಿತಾಂಶ
ಸುದ್ದಿದಿನ,ದಾವಣಗೆರೆ : 2024 ರ ಮಾರ್ಚ್ನಲ್ಲಿ ನಡೆದ ದ್ವಿತೀಯ ಪಿ.ಯು.ಸಿ. ಫಲಿತಾಂಶ ಪ್ರಕಟವಾಗಿದ್ದು ಜಿಲ್ಲೆಗೆ ಶೇ 80.96 ರಷ್ಟು ಫಲಿತಾಂಶ ಬಂದಿದ್ದು ಶೇ 74.27 ಗಂಡು, ಶೇ 82.01 ರಷ್ಟು ಹೆಣ್ಣು ಮಕ್ಕಳು ಉತ್ತೀರ್ಣರಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ; ವೆಂಕಟೇಶ್ ಎಂ.ವಿ ತಿಳಿಸಿದರು.
ಅವರು ಬುಧವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಚುನಾವಣಾ ಸಂಬಂಧ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಏಪ್ರಿಲ್ 10 ರಂದು ಫಲಿತಾಂಶ ಪ್ರಕಟವಾಗಿದ್ದು ಹೆಚ್ಚಿನ ವಿವರಗಳು ಬರಬೇಕಾಗಿದೆ. ಈ ವರ್ಷ ಜಿಲ್ಲೆಯಲ್ಲಿ ದ್ವಿತೀಯ ಪಿ.ಯು.ಸಿ ಪರೀಕ್ಷೆಯನ್ನು 19644 ರೆಗ್ಯುಲರ್, 422 ಖಾಸಗಿ ಸೇರಿ 20066 ವಿದ್ಯಾರ್ಥಿಗಳು ತೆಗೆದುಕೊಂಡಿದ್ದರು. ಇದರಲ್ಲಿ 15904 ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ಶೇ 80.96 ರಷ್ಟು ಫಲಿತಾಂಶ ಪಡೆದಿದ್ದಾರೆ.
ಕಳೆದ ವರ್ಷ ಶೇ 75.72 ರಷ್ಟು ಫಲಿತಾಂಶ ಬಂದಿತ್ತು, ಈ ವರ್ಷ ಶೇ 5.24 ರಷ್ಟು ಫಲಿತಾಂಶ ಹೆಚ್ಚಳವಾಗಿದೆ. ಜಿಲ್ಲೆಗೆ ಟಾಪ್ ಬಂದವರಲ್ಲಿ ಕಲಾ ವಿಭಾಗದಲ್ಲಿ ಹರಿಹರದ ಶ್ರೀಮತಿ ಗಿರಿಯಮ್ಮ ಕಾಂತಪ್ಪ ಮಹಿಳಾ ಪದವಿ ಪೂರ್ವ ಕಾಲೇಜಿನ ಹೀನಬಾನು ಪಿ.ಕೆ. 591 ಅಂಕ ಪಡೆದು ಶೇ 98.5, ವಾಣಿಜ್ಯ; ದಾವಣಗೆರೆ ತಾ; ಗೋಪನಾಳು ಸರ್ಕಾರಿ ಪದವಿ ಪೂರ್ವ ಕಾಲೇಜಿನ ರೇಷ್ಮಾ ಬಾನು 589 ಅಂಕ ಪಡೆದು ಶೇ 98.16 ರಷ್ಟು ಫಲಿತಾಂಶ ಪಡೆದು ಜಿಲ್ಲೆಗೆ ಮೊದಲಿಗರಾಗಿದ್ದಾರೆ.
ವಿಜ್ಞಾನ ವಿಭಾಗದಲ್ಲಿ ಲೋಕಿಕೆರೆ ರಸ್ತೆಯಲ್ಲಿನ ಸರ್ಎಂವಿ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಮೊಹಮ್ಮದ್ ಸುಹೇಲ್, ಅಮೃತ ದೊಡ್ಡ ಬಸಪ್ಪನವರ್, ಅನನ್ಯ ಹೆಚ್.ಎಸ್, ಆಕಾಶ್ ಸಿ.ಪಾಟೀಲ್ ಇವರು 593 ಅಂಕ ಶೇ 98.83 ರಷ್ಟು ಸಮನಾದ ಫಲಿತಾಂಶ ಹಂಚಿಕೊಂಡಿದ್ದಾರೆ ಎಂದರು.
ವಿಭಾಗವಾರು ಫಲಿತಾಂಶ; ಕಲಾ ವಿಭಾಗದಲ್ಲಿ ಶೇ 57.83 ರಷ್ಟು ಫಲಿತಾಂಶ ಬಂದಿದ್ದು ಇದರಲ್ಲಿ ಗಂಡು ಶೇ 45, ಹೆಣ್ಣು ಶೇ 66.46 ರಷ್ಟು ಉತ್ತೀರ್ಣರಾಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಶೇ 76.22 ರಷ್ಟು ಫಲಿತಾಂಶ ಬಂದಿದ್ದು ಗಂಡು ಶೇ 65.5, ಹೆಣ್ಣು ಶೇ 80.8, ವಿಜ್ಞಾನ ವಿಭಾಗದಲ್ಲಿ ಶೇ 91.13 ರಷ್ಟು ಫಲಿತಾಂಶ ಬಂದಿದ್ದು ಗಂಡು ಶೇ 91.39 ಹಾಗೂ ಹೆಣ್ಣು ಶೇ 88.69 ರಷ್ಟು ಫಲಿತಾಂಶ ಬಂದಿದೆ.
ನಗರಕ್ಕಿಂತ ಗ್ರಾಮೀಣರ ಮೇಲುಗೈ; ಫಲಿತಾಂಶದಲ್ಲಿ ನಗರ ಪ್ರದೇಶಕ್ಕಿಂತ ಗ್ರಾಮೀಣ ವಿದ್ಯಾರ್ಥಿಗಳು ಶೇ 1.1 ರಷ್ಟು ಮೇಲುಗೈ ಸಾಧಿಸಿದ್ದಾರೆ. ಗ್ರಾಮೀಣ ಪ್ರದೇಶದಲ್ಲಿ ಶೇ 73.65 ಗಂಡು, ಶೇ 84.6 ಹೆಣ್ಣು ಉತ್ತೀರ್ಣರಾದರೆ ನಗರ ಪ್ರದೇಶದ ಒಟ್ಟು ಫಲಿತಾಂಶ ಶೇ 80.75 ರಲ್ಲಿ ಗಂಡು ಶೇ 74.41, ಹೆಣ್ಣು ಶೇ 81.37 ರಷ್ಟು ಫಲಿತಾಂಶ ಪಡೆದಿದ್ದಾರೆ.
ಶೇ 100 ರಷ್ಟು ಫಲಿತಾಂಶ ಪಡೆದ ಶಾಲೆಗಳು; ದಾವಣಗೆರೆ ಅಂಜುಂ ಪದವಿ ಪೂರ್ವ ಕಾಲೇಜು, ಲೇಬರ್ ಕಾಲೋನಿ, ಜೈನ್ ಟ್ರಿನಿಟಿ ಪದವಿ ಪೂರ್ವ ಕಾಲೇಜು, ಅನ್ಮೋಲ್ ಪದವಿ ಪೂರ್ವ ಕಾಲೇಜು, ಶ್ರೀ ಗೀತಂ ಪದವಿ ಪೂರ್ವ ಕಾಲೇಜು, ದಾವಣಗೆರೆ ಇವು ಶೇ 100 ರಷ್ಟು ಫಲಿತಾಂಶ ಪಡೆದ ಕಾಲೇಜುಗಳಾಗಿವೆ.
ಈ ವೇಳೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್ ಬಿ.ಇಟ್ನಾಳ್, ಜಿಲ್ಲಾ ರಕ್ಷಣಾಧಿಕಾರಿ ಉಮಾ ಪ್ರಶಾಂರ್, ಶಾಲಾ ಶಿಕ್ಷಣ, ಪದವಿ ಪೂರ್ವ ಇಲಾಖೆ ಉಪನಿರ್ದೇಶಕ ಕರಿಸಿದ್ದಪ್ಪ ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಗ್ರಾಹಕರಿಂದ ಹೆಚ್ಚುವರಿಯಾಗಿ ಪೇಪರ್ ಬ್ಯಾಗ್ಗೆ ರೂ.10 ಪಡೆದ ಶಾಪಿಂಗ್ ಮಾಲ್ಗೆ ದಂಡ
ಸುದ್ದಿದಿನ ,ದಾವಣಗೆರೆ : ವಕೀಲ ವೃತ್ತಿಯಲ್ಲಿ ತೊಡಗಿಕೊಂಡಿರುವ ಆರ್. ಬಸವರಾಜ್ ಎಂಬುವವರು ದಾವಣಗೆರೆ ನಗರದ ಮ್ಯಾಕ್ಸ್ ರೀಟೈಲ್ ಅಂಗಡಿಯಲ್ಲಿ 2023 ರ ಅಕ್ಟೋಬರ್ 29 ರಂದು ರೂ.1,499 ಪಾವತಿಸಿ, ಡೆನಿವಾ ಪ್ಯಾಂಟ್ ಖರೀದಿಸಿದರು. ಈ ವೇಳೆಯಲ್ಲಿ ಇಲ್ಲಿಯೇ ಲೈಫ್ ಸ್ಟೈಲ್ ಇಂಟರ್ನ್ಯಾಷನಲ್ ವಾಣಿಜ್ಯ ಸಂಸ್ಥೆ ಪ್ಯಾಂಟ್ ಮಾರಾಟದ ವೇಳೆ ಹೆಚ್ಚುವರಿಯಾಗಿ ರೂ.10/- ಪೇಪರ್ ಬ್ಯಾಗ್ಗೆ ಪಡೆಯಲಾಯಿತು.
ಗ್ರಾಹಕರಾದ ಆರ್. ಬಸವರಾಜ್ ಇವರ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದಲ್ಲಿ ದೂರನ್ನು ದಾಖಲಿಸಿ ವಾಣಿಜ್ಯ ಸಂಸ್ಥೆ ವಿರುದ್ದ ರೂ.50,000 ಮಾನಸಿಕ ಕಿರುಕುಳ ಹಾಗೂ ದೂರು ದಾಖಲಿಸಲು ಖರ್ಚು ಮಾಡಿದ ಮೊ ರೂ.10,000 ಗಳನ್ನು ಪಾವತಿಸುವಂತೆ ದೂರನ್ನು ದಾಖಲಿಸಿದರು.
ವಾಣಿಜ್ಯ ಸಂಸ್ಥೆಗೆ ನೋಟಿಸ್ ಜಾರಿ ಮಾಡಿದ್ದು ಈ ಸಂಸ್ಥೆ ವಕೀಲರ ಮುಖಾಂತರ ಹಾಜರಾಗಿ ಬ್ಯಾಗ್ಗೆ ಹೆಚ್ಚುವರಿಯಾಗಿ ಪಡೆದ ಹಣಕ್ಕೆ ಸಮರ್ಥಿಸಿಕೊಂಡಿತ್ತು. ಆದರೆ ಗ್ರಾಹಕರ ಆಯೋಗ ಈ ಮೊದಲು ರಾಷ್ಟ್ರೀಯ ಗ್ರಾಹಕರ ಆಯೋಗ ಬಿಗ್ ಬಜಾರ್ ವಿರುದ್ಧ ಸಾಯಲ್ ದಾವ ಪ್ರಕರಣದ ನ್ಯಾಯ ನಿರ್ಣಯದ ತೀರ್ಪಿನ ಅನುಗುಣವಾಗಿ ವಾಣಿಜ್ಯ ಸಂಸ್ಥೆಗಳು ಕ್ಯಾರಿ ಬ್ಯಾಗ್ಗಳಿಗೆ ಹೆಚ್ಚಿನ ಹಣವನ್ನು ಪಡೆಯುವಂತಿಲ್ಲ ಎಂಬ ತೀರ್ಪನ್ನು ಉಲ್ಲೇಖಿಸಿ ಹೆಚ್ಚುವರಿಯಾಗಿ ರೂ.10 ಪಡೆದ ಸಂಸ್ಥೆಯ ಕ್ರಮವು ಗ್ರಾಹಕರ ಸಂರಕ್ಷಣಾ ಕಾಯ್ದೆಯ ಅಡಿಯಲ್ಲಿ ಅನುಚಿತ ವ್ಯಾಪಾರ ಪದ್ದತಿಯೆಂದು ಪರಿಗಣಿಸಿ ದಾವಣಗೆರೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷರಾದ ಮಹಂತೇಶ ಈರಪ್ಪ ಶಿಗ್ಲಿ, ಸದಸ್ಯರಾದ ತ್ಯಾಗರಾಜನ್ ಮತ್ತು ಮಹಿಳಾ ಸದಸ್ಯರಾದ ಶ್ರೀಮತಿ ಬಿ.ಯು. ಗೀತಾ ಇವರು ವಾಣಿಜ್ಯ ಸಂಸ್ಥೆಗೆ ರೂ.7000 ದಂಡವಿದಿಸಿ ಆದೇಶಿಸಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243