ದಿನದ ಸುದ್ದಿ
ನಿರ್ಭಯಾ ನೆನಪಾಗಿಯೇ ಉಳಿಯುವುದೇಕೆ..?
- ನಾ ದಿವಾಕರ
ಉತ್ತರ ಪ್ರದೇಶದ ಹಥ್ರಾಸ್ ಎಂಬ ಕುಗ್ರಾಮದಲ್ಲಿ ನಡೆದ ಅತ್ಯಾಚಾರ ಮತ್ತು ಕೊಲೆ ಮತ್ತೊಮ್ಮೆ ಹೆಣ್ತನದ ಘನತೆ, ರಕ್ಷಣೆ ಮತ್ತು ಗೌರವದ ಪ್ರಶ್ನೆಯನ್ನು ಮುನ್ನೆಲೆಗೆ ತಂದಿದೆ. ಹಥ್ರಾಸ್ ಘಟನೆ ನಡೆದು ಒಂದು ತಿಂಗಳು ಕಳೆದಿದೆ. ದೇಶಾದ್ಯಂತ ಪ್ರತಿರೋಧದ ದನಿಗಳು ಇನ್ನೂ ಕೇಳಿಬರುತ್ತಿವೆ. ಆರೋಪಿಗಳಿಗೆ ಶಿಕ್ಷೆಯಾಗುವುದೋ ಇಲ್ಲವೋ ಎನ್ನುವ ಪ್ರಶ್ನೆಯೂ ಕಾಡತೊಡಗಿದೆ.
ಏಕೆಂದರೆ ಸಿಬಿಐ ಎಂಬ ಸೂತ್ರದ ಗೊಂಬೆ ತನಿಖೆಯನ್ನು ಕೈಗೆತ್ತಿಕೊಂಡಿದೆ. ಭಾರತದ ಸಾರ್ವಭೌಮ ಪ್ರಜೆಗಳು ಸಾಂವಿಧಾನಿಕ ಸಂಸ್ಥೆಗಳಲ್ಲಿ ಮತ್ತು ಪ್ರಭುತ್ವದ ನ್ಯಾಯ ನಿರ್ವಹಣೆಯಲ್ಲಿ ವಿಶ್ವಾಸ ಕಳೆದುಕೊಳ್ಳಲು ಇನ್ನೇನೂ ಉಳಿದಿಲ್ಲ ಎನ್ನುವುದನ್ನು ಬಾಬ್ರಿ ಮಸೀದಿಯ ಧ್ವಂಸವನ್ನು ಕುರಿತ ತೀರ್ಪು ನಿರೂಪಿಸಿದೆ.
70 ವರ್ಷಗಳ ಭಾರತ ಆರು ವರ್ಷಗಳಲ್ಲಿ ಬದಲಾಗಿದೆ ಎಂದು ಹೇಳುವುದೇ ಆದರೆ, ಸಾಂವಿಧಾನಿಕ ಮೌಲ್ಯಗಳ ಮತ್ತು ಸಾಂಸ್ಥಿಕ ಅಧಃಪತನದ ವಿಚಾರದಲ್ಲಿ ನಿರ್ವಿವಾದವಾಗಿ ಒಪ್ಪಿಬಿಡಬಹುದು. ಅತ್ಯಾಚಾರ ನಮ್ಮ ಸಂಸ್ಕೃತಿಯ ಒಂದು ಭಾಗ ಎನ್ನುವ ಸಂಸದರು ನಮ್ಮ ನಡುವೆ ಇದ್ದಾರೆ, ಅತ್ಯಾಚಾರ ನಡೆದರೆ ಸುಖ ಪಡಬೇಕು ಎನ್ನುವ ಪಕ್ಷದ ಮಹಿಳಾ ವಕ್ತಾರರೂ ಇದ್ದಾರೆ.
ಸಾವು ಮತ್ತು ದೌರ್ಜನ್ಯಗಳನ್ನು ರಾಜಕೀಯ ಮೇಲು-ಕೀಳು ಪುಂಡಾಟಕ್ಕೆ ಬಳಸಿಕೊಳ್ಳುವ ರಾಜಕೀಯ ನಾಯಕರೂ ನಮ್ಮ ನಡುವೆ ಇದ್ದಾರೆ. ಸಾವಿಗೆ ಬೆಲೆ ಇಲ್ಲದ, ಜೀವಕ್ಕೆ ಮೌಲ್ಯವಿಲ್ಲದ ಒಂದು ದೇಶದಲ್ಲಿ ನಾವು ಬದುಕುತ್ತಿದ್ದೇವೆ, ನಿಜ, ಆದರೆ ಸಾವು ಎನ್ನುವುದು ಸಹಜೀವಿಗಳನ್ನು ಕಳೆದುಕೊಂಡವರನ್ನು ಜೀವಮಾನವಿಡೀ ಬಾಧಿಸುವ ಒಂದು ವಿದ್ಯಮಾನ ಎನ್ನುವ ಕನಿಷ್ಟ ಮಾನವೀಯ ಪ್ರಜ್ಞೆ ಮತ್ತು ಸಂವೇದನೆ ಆಡಳಿತ ವ್ಯವಸ್ಥೆಗೆ, ನಾಗರಿಕ ಸಮಾಜಕ್ಕೆ ಇರಬೇಕಲ್ಲವೇ ?
ಈ ಸಂವೇದನೆಯನ್ನು ಕಳೆದುಕೊಂಡಿರುವ ಸಮಾಜೋ-ರಾಜಕೀಯ ವ್ಯವಸ್ಥೆಯಲ್ಲಿ ಭಾರತ ಬದುಕುತ್ತಿದೆ. ಹಾಗೆಂದ ಮಾತ್ರಕ್ಕೆ ಈ ಮೊದಲು ಭಾರತದ ಆಳುವ ವರ್ಗಗಳಲ್ಲಿ ಸಂವೇದನೆ ಮತ್ತು ಮಾನವೀಯ ಪ್ರಜ್ಞೆ ಸದಾ ಜಾಗೃತವಾಗಿತ್ತು ಎಂದರ್ಥವಲ್ಲ. ಇದು ಕೇವಲ ಐದಾರು ವರ್ಷಗಳ ಬೆಳವಣಿಗೆಯೂ ಅಲ್ಲ. ಇಂದು ಅಧಿಕಾರಸ್ಥರ ದಿವ್ಯ ಮೌನದ ಹಿಂದೆ ನಮಗೆ ಕಾಣುತ್ತಿರುವ ಕ್ರೌರ್ಯ ಹಿಂದೆಯೂ ಕಂಡಿದೆ. ಇನ್ನು ಮುಂದೆಯೂ ಕಾಣುತ್ತದೆ.
ಏಕೆಂದರೆ ಈ ಮೌನದ ಹಿಂದೆ ಮೇಲರಿಮೆಯ ಅಹಮಿಕೆ ಇರುವಷ್ಟೇ ಪ್ರಮಾಣದಲ್ಲಿ ಕೀಳರಿಮೆಯ ತಾರತಮ್ಯವೂ ಅಡಗಿದೆ. ಸಾವು ಎಲ್ಲರಿಗೂ ಪೂರ್ವನಿರ್ಧರಿತವೇ ಆಗಿದ್ದರೂ ಭಾರತದಲ್ಲಿ ಇದಕ್ಕೆ ಸಾಮುದಾಯಿಕ ಸ್ಪರ್ಶ ಇದೆ. ಅಸಹಜ ಸಾವುಗಳು ಈ ಸಾಮುದಾಯಿಕ ಅಸ್ಮಿತೆಗಳನ್ನಾಧರಿಸಿ ಮಾನ್ಯತೆ, ಸ್ವೀಕೃತಿ, ಸಾಂತ್ವನ ಮತ್ತು ಶ್ರದ್ಧಾಂಜಲಿಗಳಿಗೆ ಅರ್ಹತೆ ಪಡೆಯುತ್ತವೆ. ಈ ಪರಂಪರೆಗೆ ಬಹಿರಂಗ ಮೌಖಿಕ ಅಭಿವ್ಯಕ್ತಿಯನ್ನು ಕಳೆದ ಆರು ವರ್ಷಗಳಿಂದ ಕಾಣುತ್ತಿದ್ದೇವೆ. ಹಾಗಾಗಿಯೇ ಹಥ್ರಾಸ್ ಘಟನೆಗೆ ಪ್ರಧಾನಮಂತ್ರಿ ಏಕೆ ಪ್ರತಿಕ್ರಯಿಸಬೇಕು ಎಂದು ಕೇಳುವ ಸಂವೇದನೆಯಿಲ್ಲದ ಸಂಸದರೂ ನಮ್ಮ ನಡುವೆ ಇದ್ದಾರೆ.
ಶಿಕ್ಷಕರು ಸಾಯ್ತಾರೆ ಅಂತ ಶಾಲೆ ಮುಚ್ಚೋಕಾಗುತ್ಯೇ ಎಂದು ಕೇಳುವ ರಾಜ್ಯ ಸಚಿವರೂ ನಮ್ಮ ನಡುವೆ ಇದ್ದಾರೆ. ಸತ್ರೆ ಸಾಯ್ತಾರೆ ನಾವೇನ್ಮಾಡೋಕಾಗುತ್ತೆ ಎಂದ ಸಂಸದರೊಬ್ಬರು ಈಗಾಗಲೇ ಇಹಲೋಕ ತ್ಯಜಿಸಿದ್ದಾರೆ. ಈ ಅಸೂಕ್ಷ್ಮತೆಗಳ ನಡುವೆಯೇ ಒಂದು ಆಡಳಿತ ವ್ಯವಸ್ಥೆ ತನ್ನ ಅಸ್ತಿತ್ವವನ್ನು ಭದ್ರಪಡಿಸಿಕೊಳ್ಳುತ್ತಿದೆ. ಹಥ್ರಾಸ್ ಘಟನೆಯನ್ನು ಕುರಿತು ಬಿಜೆಪಿ ನಾಯಕರು ನೀಡಿರುವ ಹೇಳಿಕೆಗಳನ್ನು ಗಮನಿಸಿದರೆ ಈ ಅಸೂಕ್ಷ್ಮತೆ ಎಷ್ಟು ಆಳವಾಗಿ ಬೇರೂರಿದೆ ಎನ್ನುವುದನ್ನು ಗ್ರಹಿಸಬಹುದು.
ಈ ಜನ ನಾಯಕರಿಗೆ ಮನುಜ ಜೀವಗಳು ಲಿಂಗ ಭೇದಗಳ ನೆಲೆಯಲ್ಲಿ, ಜಾತಿ ಭೇದಗಳ ನೆಲೆಯಲ್ಲಿ ಮತ್ತು ಮತ ಭೇದಗಳ ನೆಲೆಯಲ್ಲಿ ಕಾಣುತ್ತವೆ. ರಾಜಧಾನಿ ದೆಹಲಿಯಿಂದ ಕೇವಲ 200 ಕಿಲೋಮೀಟರ್ ದೂರದಲ್ಲಿ ನಡೆದ ಈ ಹೃದಯವಿದ್ರಾವಕ ಘಟನೆ ಈ ದೇಶದ ಪ್ರಧಾನಮಂತ್ರಿಯ ಹೃದಯವನ್ನು ತಟ್ಟುವುದೇ ಇಲ್ಲ. ಗೃಹ ಸಚಿವರು ಕಾಣೆಯಾಗಿರುವುದರಿಂದ ಏನೂ ಹೇಳಲಾಗುವುದಿಲ್ಲ.
ಇರಲಿ, ಇದು ರಾಜಕೀಯ ವಿಕೃತಿಯ ಪರ್ವಕಾಲ. ಸಾವಿರಾರು ಅಮಾಯಕರ ಮಾರಣ ಹೋಮ ನಡೆದಾಗಲೂ ನಮ್ಮ ದೇಶ ಹೀಗೆಯೇ ಇದ್ದಿತಲ್ಲವೇ ? ವಿಕೃತ ರಾಜಕೀಯ ಪ್ರಜ್ಞೆ ಭಾರತದ ಪ್ರಜ್ಞಾವಂತ ಮನಸುಗಳನ್ನು ಎಷ್ಟು ಕೆಡಿಸಿದೆ ಎನ್ನುವುದು ನಮ್ಮ ಮುಂದಿನ ಗಹನವಾದ ವಿಚಾರ. ಹೆಣ್ಣು ಮಕ್ಕಳ ಮೇಲಿನ ಅತ್ಯಾಚಾರ ಮತ್ತು ದೌರ್ಜನ್ಯಗಳು ನಿತ್ಯ ಬದುಕಿನ ವಿದ್ಯಮಾನಗಳೇನೋ ಎನ್ನುವಂತೆ ವರ್ತಿಸುವ ಒಂದು ಬೃಹತ್ ಸಮುದಾಯದ ನಡುವೆ ನಾವು ಬದುಕುತ್ತಿದ್ದೇವೆ.
ಈ ಸಮುದಾಯ ಸುಶಿಕ್ಷಿತವಾಗಿದೆ, ಹಿತವಲಯದಲ್ಲಿದೆ ಮತ್ತು ಸುರಕ್ಷಿತವಾಗಿದೆ ಎಂದು ಹೇಳಬೇಕಿಲ್ಲ. ಒಂದು ಅತ್ಯಾಚಾರದ ಘಟನೆಗೆ ಇಡೀ ದೇಶವೇ ಭುಗಿಲೇಳುವುದಿಲ್ಲ ಆದರೆ ಸಾಮಾಜಿಕ ವಲಯದಲ್ಲಿ ಇಂತಹ ಘಟನೆಗಳು ಕೊಂಚವಾದರೂ ಪ್ರಕ್ಷುಬ್ಧತೆಯನ್ನು ಉಂಟುಮಾಡಬೇಕಲ್ಲವೇ ?
ಈ ನಿರ್ಲಜ್ಜತೆಯ ನಡುವೆಯೇ ಭಾರತದ ಮಹಿಳೆಯರು ತಮ್ಮ ಹೆಣ್ತನದ ರಕ್ಷಣೆಗಾಗಿ, ಸ್ವಾಭಿಮಾನದ ಸಂರಕ್ಷಣೆಗಾಗಿ, ಸಮಾನತೆ, ಘನತೆ ಮತ್ತು ಗೌರವಕ್ಕಾಗಿ ದಿನನಿತ್ಯ ಹೋರಾಡಬೇಕಿದೆ. ಅತ್ಯಾಚಾರ ನಡೆದ ಕೂಡಲೇ ಅತ್ಯಾಚಾರಿಗಳನ್ನು ಗಲ್ಲಿಗೇರಿಸಿ ಎನ್ನುವ ದನಿಗಳು ಮುಗಿಲು ಮುಟ್ಟುತ್ತವೆ. ಆದರೆ ಗಲ್ಲಿಗೇರಿಸಲು ಕಾನೂನು ಪ್ರಕ್ರಿಯೆ ಶೀಘ್ರವಾಗಿ ನಡೆಯಬೇಕು. ನ್ಯಾಯವ್ಯವಸ್ಥೆಯಲ್ಲಿನ ಲೋಪಗಳು ಸರಿಹೋಗಬೇಕು.
ಪೊಲೀಸ್ ಇಲಾಖೆಯಲ್ಲಿ ಸುಧಾರಣೆಗಳು ಜಾರಿಯಾಗಬೇಕು. ಸಿಬಿಐನಂತಹ ಸಾಂವಿಧಾನಿಕ ಸಂಸ್ಥೆಗಳು ಸ್ವಾಯತ್ತತೆ ಪಡೆಯಬೇಕು. ಸರ್ಕಾರಗಳೇ ನೇಮಿಸುವ ವಿಶೇಷ ತನಿಖಾ ದಳ (ಎಸ್ ಐ ಟಿ) ನಿಷ್ಪಕ್ಷಪಾತವಾಗಬೇಕು. ರಾಜಕೀಯ ಹಸ್ತಕ್ಷೇಪಕ್ಕೆ ಅಂತ್ಯ ಹಾಡಬೇಕು. ಈ ಎಲ್ಲ ಆಡಳಿತ ಸುಧಾರಣೆಗಳನ್ನು ತರಲು ನಮ್ಮ ಜನಪ್ರತಿನಿಧಿಗಳಿಗೆ ಮೂಲತಃ ಮಾನವೀಯ ಪ್ರಜ್ಞೆ ಮತ್ತು ಸಂವೇದನೆ ಇರಬೇಕು. ಇಲ್ಲವಲ್ಲಾ !
ದುರಂತ ಎಂದರೆ ಜನಪ್ರತಿನಿಧಿಗಳು ಹೊಲಸು ಮಾತುಗಳ ಸರದಾರರಾಗಿದ್ದಾರೆ. ಹಥ್ರಾಸ್ ಘಟನೆಯ ಸಂದರ್ಭದಲ್ಲಿ ಉತ್ತರ ಪ್ರದೇಶ ಸರ್ಕಾರದ ವರ್ತನೆಯನ್ನು ಹೈಕೋರ್ಟ್ ಪ್ರಶ್ನಿಸಿರುವುದೇ ಅಲ್ಲದೆ ಕಟುವಾಗಿ ಟೀಕಿಸಿದೆ. ಆದರೆ ಭಾರತದ ನಾಗರಿಕ ಸಮಾಜದ ಪ್ರಜ್ಞೆ ಇದರಿಂದ ಕೊಂಚವೂ ವಿಚಲಿತವಾಗಿಲ್ಲ. ಪಕ್ಷ ರಾಜಕಾರಣ ಮತ್ತು ಇದರಿಂದ ಪ್ರಭಾವಿತವಾಗುವ ಅಸ್ಮಿತೆಯ ರಾಜಕಾರಣ ಭಾರತದ ಪ್ರಜ್ಞಾವಂತ ಸಮುದಾಯವನ್ನು ನಿಷ್ಕ್ರಿಯಗೊಳಿಸಿರುವುದನ್ನು ಕಳೆದ ಎರಡು ದಶಕಗಳಲ್ಲಿ ಕಂಡಿದ್ದೇವೆ.
1984ರ ಸಿಖ್ ಹತ್ಯಾಕಾಂಡ ಮತ್ತು 1980-90ರ ದಶಕದ ರಥಯಾತ್ರೆ ಮತ್ತು ಕೋಮು ಗಲಭೆಗಳಲ್ಲಿ ಮಡಿದ ಸಾವಿರಾರು ಜೀವಗಳಿಗೆ ನ್ಯಾಯ ಒದಗಿಸಲು ನಮ್ಮ ನ್ಯಾಯ ವ್ಯವಸ್ಥೆಗೆ ಸಾಧ್ಯವಾಗಿಲ್ಲ. 2002ರ ಗುಜರಾತ್ ಹತ್ಯಾಕಾಂಡದಲ್ಲಿ ಬಲಿಯಾದ ಜೀವಗಳನ್ನು ನಾವು ಮರೆತೇ ಹೋಗಿದ್ದೇವೆ. ಇದನ್ನು ಪ್ರಸ್ತಾಪಿಸಿದ ಕೂಡಲೇ ಕಾಶ್ಮೀರ ಮತ್ತು ಪಂಡಿತರ ಪ್ರಶ್ನೆ ಧುತ್ತೆಂದು ಎದುರಾಗುತ್ತದೆ. ಪಂಡಿತರಿಗೆ ಮಿಡಿಯುವ ಮನಸುಗಳು, ಕಾಶ್ಮೀರದಲ್ಲಿ ಒಂದೆಡೆ ಉಗ್ರಗಾಮಿಗಳ ಗುಂಡಿಗೆ ಮತ್ತೊಂದೆಡೆ ಸೇನೆಯ ಗುಂಡಿಗೆ ಬಲಿಯಾದ ಲಕ್ಷಾಂತರ ಅಮಾಯಕ ಕಾಶ್ಮೀರಿಗಳಿಗೆ ಮಿಡಿಯುವುದಿಲ್ಲ. ಅಲ್ಲಿ ಮತ್ತೆ ಅಸ್ಮಿತೆ ಮತ್ತು ರಾಜಕಾರಣ ಅಡ್ಡಿಯಾಗುತ್ತದೆ.
ಅಸಹಜ ಸಾವುಗಳಿಂದ ವಿಚಲಿತರಾಗದ ಮನಸ್ಥಿತಿಯನ್ನು ಭಾರತ ರೂಢಿಸಿಕೊಂಡು ವರುಷಗಳೇ ಕಳೆದಿವೆ. ಸತ್ತವರು ನಮ್ಮವರೋ ಅನ್ಯರೋ ಎಂದು ಶವಗಳನ್ನು ವಿಂಗಡಿಸುವ ಪರಂಪರೆಯನ್ನು ಈ ದೇಶದ ಸಾಂಸ್ಕೃತಿಕ ರಾಜಕಾರಣ ವ್ಯವಸ್ಥಿತವಾಗಿ ಬೆಳೆಸಿಕೊಂಡುಬಂದಿದೆ. ರಾಶಿರಾಶಿ ಶವಗಳಲ್ಲೂ ಹೆಕ್ಕಿ ತೆಗೆಯುವ ವಿಕೃತ ಪರಂಪರೆಯೂ ಇಲ್ಲಿ ನೆಲೆಯೂರಿದೆ.
ಈ ಪರಂಪರೆಗೆ ಜನಸಾಮಾನ್ಯರು ಬಲಿಯಾಗಿರುವುದೇ ಅಲ್ಲದೆ ಸಾಂವಿಧಾನಿಕ ಸಂಸ್ಥೆಗಳೂ ಬಲಿಯಾಗಿರುವುದನ್ನು ಇತ್ತೀಚಿನ ಬಾಬ್ರಿ ಮಸೀದಿ ಧ್ವಂಸದ ತೀರ್ಪಿನಲ್ಲಿ ಕಾಣಬಹುದು. ಇಡೀ ದೇಶವೇ ಗಮನಿಸಿದಂತೆ ಲಕ್ಷಾಂತರ ಯುವಕರನ್ನು ಪ್ರಚೋದಿಸಿ ಉರುಳಿಸಲಾದ 400 ವರ್ಷಗಳ ಒಂದು ಸ್ಥಾವರ ತಂತಾನೇ ಕುಸಿದಿದೆ, ಅದೊಂದು ಅಪಘಾತ ಎಂದು ಬಣ್ಣಿಸುವ ನ್ಯಾಯಾಂಗ, ಈ ಕುಸಿದ ಸ್ಥಾವರದ ಅವಶೇಷಗಳಡಿ ಸಿಲುಕಿರುವ ನೂರಾರು ಮೃತ ಜೀವಗಳಿಗೆ ನ್ಯಾಯ ಒದಗಿಸಲು ಸಾಧ್ಯವೇ ?
ಇಂತಹ ಒಂದು ವ್ಯವಸ್ಥೆಯಲ್ಲಿ ಶೋಷಿತ ಸಮುದಾಯದ ಹೆಣ್ಣು ಮಗಳಿಗೆ ನ್ಯಾಯ ದೊರೆಯುತ್ತದೆ ಎಂದು ನಿರೀಕ್ಷಿಸುವುದಾದರೂ ಹೇಗೆ ? ಅಪರಾಧಿಗಳ ರಕ್ಷಣೆಗಾಗಿ ಪ್ರತ್ಯಕ್ಷ ಸಾಕ್ಷಿಗಳನ್ನು ಎನ್ಕೌಂಟರ್ ಮೂಲಕ ಇಲ್ಲವಾಗಿಸುವ ವ್ಯವಸ್ಥೆಯಲ್ಲಿ ನಾವಿದ್ದೇವೆ. ಸಾಕ್ಷ್ಯಾಧಾರಗಳನ್ನು ನಾಶಪಡಿಸುವ ಒಂದು ಷಡ್ಯಂತ್ರಕ್ಕೆ ಈಗ ವ್ಯವಸ್ಥಿತ ಚೌಕಟ್ಟನ್ನು ನಿರ್ಮಿಸಲಾಗಿರುವುದನ್ನೂ ಕಾಣುತ್ತಿದ್ದೇವೆ.
ಹಥ್ರಾಸ್ನಲ್ಲಿ ಅತ್ಯಾಚಾರಕ್ಕೊಳಗಾದ ಯುವತಿಯ ಮೃತ ದೇಹವನ್ನು ಪೊಲೀಸರೇ ಸುಟ್ಟುಹಾಕಿರುವುದು ಈ ವಿದ್ಯಮಾನದ ಒಂದು ಆಯಾಮವಷ್ಟೇ. ಇದೆರ ವಿರಾಟ್ ಸ್ವರೂಪವನ್ನು 2002ರ ಗುಜರಾತ್ ಹತ್ಯಾಕಾಂಡದ ನಂತರ ಕಂಡಿದ್ದೇವೆ. ಬೆಲ್ಚಿಯಿಂದ ಕಂಬಾಲಪಲ್ಲಿ, ಊನ ಘಟನೆಗಳವರೆಗೆ ಕಂಡಿದ್ದೇವೆ. ಸ್ವತಂತ್ರ ಭಾರತದಲ್ಲಿ ಸಂಭವಿಸಿದ ಸಾಮೂಹಿಕ ಹತ್ಯಾಕಾಂಡಗಳಲ್ಲಿ ಯಾರಿಗೂ ಶಿಕ್ಷೆಯಾಗಿಲ್ಲ ಎನ್ನುವುದನ್ನು ನೆಲ್ಲಿ ಹತ್ಯಾಕಾಂಡದಿಂದ ಗುಜರಾತ್ ಹತ್ಯಾಕಾಂಡದವರೆಗೂ ಕಂಡಿದ್ದೇವೆ. ಇಲ್ಲಿಯೂ ನಮ್ಮ ಪ್ರಜ್ಞೆ ಪಕ್ಷ ರಾಜಕಾರಣ ಮತ್ತು ಅಸ್ಮಿತೆಗಳ ಸರಳುಗಳಲ್ಲಿ ಬಂಧಿತವಾಗಿಬಿಡುತ್ತದೆ.
ಸಂಭವಿಸಿದ ಅಪರಾಧಗಳನ್ನು ಮುಖಾಮುಖಿಯಾಗಿಸುವ ಮೂಲಕ ಅಪರಾಧಿಗಳನ್ನು ಸಮರ್ಥಿಸಿಕೊಳ್ಳುವ ವಿಕೃತ ಪರಂಪರೆಯನ್ನು ಪೋಷಿಸುತ್ತಲೇ ಬಂದಿರುವ ಭಾರತದ ನಾಗರಿಕ ಸಮಾಜ, ಇಂದಿಗೂ ಅಪರಾಧಿಗಳನ್ನು ಶಾಸನ ಸಭೆಗಳಲ್ಲಿ ಸಹಿಸಿಕೊಳ್ಳುತ್ತಲೇ ಬಂದಿದೆ.
ಭ್ರಷ್ಟಾಚಾರ ರಹಿತ ಭಾರತದಲ್ಲಿ ಅನೇಕಾನೇಕ ಭ್ರಷ್ಟರು ಅಧಿಕಾರ ಪೀಠದಲ್ಲಿ ವಿರಾಜಮಾನರಾಗಿದ್ದಾರೆ. ಮತ್ತದೇ ಪಕ್ಷ ರಾಜಕಾರಣ ಮತ್ತು ಅಸ್ಮಿತೆಯ ಗುಂಗು. ಐದು ವರ್ಷಕ್ಕೊಮ್ಮೆ ಮತ ಚಲಾಯಿಸುವಾಗ ಬೆರಳ ತುದಿಗೆ ಹಚ್ಚುವ ಶಾಯಿಯ ಗುರುತು ಸ್ವಲ್ಪ ದಿನಗಳ ನಂತರ ಅಳಿಸಿಹೋಗುತ್ತದೆ. ಆದರೆ ಇಂದು ನಮ್ಮ ಪ್ರಜಾತಂತ್ರ ದೇಶದಲ್ಲಿ ಅಧಿಕಾರ ಪೀಠಗಳಲ್ಲಿ ಕುಳಿತು ಆದರ್ಶ, ನೈತಿಕತೆ, ಪ್ರಾಮಾಣಿಕತೆ ಮತ್ತು ಪಾರದರ್ಶಕತೆಯ ಮಾತುಗಳನ್ನಾಡುತ್ತಿರುವವರ ಕೈಗಳಿಗೆ ಮೆತ್ತಿರುವ ಅಮಾಯಕ ಜನರ ನೆತ್ತರ ಕಲೆ ಅಳಿಸಲು ಸಾಧ್ಯವೇ ಇಲ್ಲ.
ಆದರೆ ನಮಗೆ ಅದು ಗೆಲುವಿನ ಸಂಕೇತದಂತೆ ಕಾಣುತ್ತದೆ, ವಿಜಯೋತ್ಸವದ ಚಿಹ್ನೆಯಂತೆ ಕಾಣುತ್ತದೆ. ಇದು ನಮ್ಮ ದೇಶದ ದುರಂತ. ನಾವು ಪ್ರಜಾತಂತ್ರವನ್ನು ಬಯಸುತ್ತೇವೆ ಆದರೆ ಪ್ರಜಾಸತ್ತಾತ್ಮಕ ಮನಸ್ಥಿತಿಯನ್ನು ಅಸ್ಮಿತೆಗಳ ಭ್ರಮೆಗೆ ಸಿಲುಕಿ ಹೊಸಕಿ ಹಾಕುತ್ತಿದ್ದೇವೆ. ಮಾನವ ಹಕ್ಕುಗಳು ನಮಗೆ ಅಪಥ್ಯವಾಗುತ್ತದೆ, ಕೆಲವೊಮ್ಮೆ ಸಹಮಾನವರೇ ಅಪಥ್ಯವಾಗಿಬಿಡುತ್ತಾರೆ.
ಹಥ್ರಾಸ್ ಘಟನೆಯಲ್ಲಿ ಮೃತಪಟ್ಟ ಮನೀಷಾ ಈ ಅಪಥ್ಯರಾದವರ ಗುಂಪಿಗೆ ಸೇರುತ್ತಾಳೆ. ಆಕೆಯ ಮೇಲೆ ಅತ್ಯಾಚಾರ ಎಸಗಿದ ಠಾಕೂರರು ಕೆಲವು ವರ್ಷಗಳ ನಂತರ ಕೇಂದ್ರ ಸಚಿವರಾದರೂ ನಾವು ವಿಚಲಿತರಾಗುವುದಿಲ್ಲ. ಈ ಮನಸ್ಥಿತಿ ನಾಗರಿಕ ಸಮಾಜವನ್ನು ಆವರಿಸಿರುವುದರಿಂದಲೇ ನಿರ್ಭಯ ನಮಗೆ ನೆನಪಾಗಿಯೇ ಉಳಿಯಲಿದ್ದಾಳೆ. ಜಾತಿ, ಮತಧರ್ಮ ಮತ್ತು ಲಿಂಗಭೇದಗಳ ಚೌಕಟ್ಟಿನಲ್ಲಿ ಸಾವು ಸ್ವೀಕೃತವಾಗುತ್ತಿರುವಂತೆಯೇ ಮನುಷ್ಯನ ಪ್ರಜ್ಞೆಯೂ ಸಹ ವಿಕೃತಿಯ ಪರಾಕಾಷ್ಠೆ ತಲುಪುತ್ತಿದೆ. ಇದಕ್ಕೆ ಪರಿಹಾರವೇನು ? ಪ್ರತಿರೋಧಗಳ ನಡುವೆಯೇ ನಾವು ಶೋಧಿಸಬೇಕಿರುವುದು ಇದನ್ನೇ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಇಂದಿನಿಂದ ಏ.3 ರವರೆಗೆ ಸೂಳೆಕೆರೆಗೆ ನೀರು ಬಿಡುಗಡೆ
ಸುದ್ದಿದಿನ,ದಾವಣಗೆರೆ: ಭದ್ರಾ ಜಲಾಶಯ ಯೋಜನೆ ವ್ಯಾಪ್ತಿಗೆ ಬರುವ ದೇವರಬೆಳಕೆರೆ ಪಿಕ್ಅಪ್ ಅಣೆಕಟ್ಟಿನ ಸ್ಕವರಿಂಗ್ ಸ್ಪೂಯೀಸ್ ಗೇಟ್ ಮುಖಾಂತರ ಜಲಾಶಯದ ಡೆಡ್ ಸ್ಟೋರೇಜ್ ನೀರನ್ನು ಸೂಳೆಕೆರೆ ಹಳ್ಳಕ್ಕೆ ಮಾರ್ಚ್ 28 ರಿಂದ ಏಪ್ರಿಲ್ 3 ರವರೆಗೆ ಪ್ರತಿದಿನ 20 ಕ್ಯೂಸೆಕ್ಸ್ಗಳಲ್ಲಿ ಜನ-ಜಾನುವಾರು ಪಕ್ಷಿಗಳಿಗೆ ಕುಡಿಯುವ ನೀರು ಒದಗಿಸಲು ಹಾಗೂ ಅಕ್ಕಪಕ್ಕದ ಗ್ರಾಮಗಳ ಕುಡಿಯುವ ನೀರಿನ ಉದ್ದೇಶಕ್ಕೆ ಬಿಡಲಾಗುತ್ತಿದೆ.
ಈ ವೇಳೆ ಹಳ್ಳಕ್ಕೆ ದನ ಕರಗಳನ್ನು ಇಳಿಸುವುದಾಗಲಿ, ಪಂಪ್ಸೆಟ್ಗಳಿಂದ ನೀರೆತ್ತುವುದುನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಕನೀನಿನಿ ಕಾರ್ಯಪಾಲಕ ಇಂಜಿನಿಯರ್ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಲೋಕಸಭಾ ಚುನಾವಣೆಯ ಮೊದಲ ಹಂತಕ್ಕೆ ನಾಮಪತ್ರ ಸಲ್ಲಿಕೆಗೆ ಇಂದು ಕೊನೆಯ ದಿನ
ಸುದ್ದಿದಿನ ಡೆಸ್ಕ್ : ಲೋಕಸಭಾ ಚುನಾವಣೆಯ ಮೊದಲ ಹಂತಕ್ಕೆ ನಾಮಪತ್ರ ಸಲ್ಲಿಸಲು ಇಂದು ಕೊನೆಯ ದಿನವಾಗಿದೆ.
ನಾಳೆ ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಇದೇ 30 ನಾಮಪತ್ರ ಹಿಂಪಡೆಯಲು ಕಡೆಯ ದಿನವಾಗಿದೆ. ಇದೇ ವೇಳೆ ಬಿಹಾರದಲ್ಲಿ ನಾಮಪತ್ರ ಸಲ್ಲಿಕೆಗೆ ನಾಳೆ ಕಡೆ ದಿನವಾಗಿದ್ದು, ಈ ತಿಂಗಳ 30 ರಂದು ನಾಮಪತ್ರಗಳ ಪರಿಶೀಲನೆ ಹಾಗೂ ಏಪ್ರಿಲ್ 2ರಂದು ನಾಮತ್ರ ಹಿಂಪಡೆಯುವಿಕೆಗೆ ಕೊನೆಯ ದಿನವಾಗಿರುತ್ತದೆ.
ಏಪ್ರಿಲ್ 19 ರಂದು 17 ರಾಜ್ಯಗಳು ಮತ್ತು ನಾಲ್ಕು ಕೇಂದ್ರಾಡಳಿತ ಪ್ರದೇಶಗಳಲ್ಲಿನ 102ಲೋಕಸಭಾ ಕ್ಷೇತ್ರಗಳಿಗೆ ಮೊದಲ ಹಂತದಲ್ಲಿ ಚುನಾವಣೆ ನಡೆಯಲಿದೆ. ಅದರಂತೆ ತಮಿಳುನಾಡಿನಲ್ಲಿ 39, ರಾಜಸ್ಥಾನದಲ್ಲಿ 12, ಉತ್ತರ ಪ್ರದೇಶದಲ್ಲಿ 8, ಮಧ್ಯಪ್ರದೇಶದಲ್ಲಿ 6, ಉತ್ತರಾಖಂಡ, ಅಸ್ಸಾಂ ಮತ್ತು ಮಹಾರಾಷ್ಟ್ರದಲ್ಲಿ ತಲಾ 5 , ಬಿಹಾರದಲ್ಲಿ 4, ಪಶ್ಚಿಮ ಬಂಗಾಳದಲ್ಲಿ 3, ಅರುಣಾಚಲ ಪ್ರದೇಶ, ಮಣಿಪುರ, ಮೆಘಾಲಯದಲ್ಲಿ ತಲಾ 2 ಮತ್ತು ಛತ್ತೀಸ್ಗಢ, ಮಿಜೋರಾಂ, ನಾಗಾಲ್ಯಾಂಡ್, ಸಿಕ್ಕಿಂ, ತ್ರಿಪುರ, ಅಂಡಮಾನ್-ನಿಕೋಬಾರ್ ದ್ವೀಪಗಳು, ಜಮ್ಮು-ಕಾಶ್ಮೀರ, ಲಕ್ಷದ್ವೀಪ ಮತ್ತು ಪುದುಚೇರಿಯಲ್ಲಿ ತಲಾ ಒಂದು ಕ್ಷೇತ್ರದಲ್ಲಿ ಮೊದಲ ಹಂತದಲ್ಲಿ ಚುನಾವಣೆ ನಡೆಯಲಿದೆ.
ಎರಡನೇ ಹಂತದಲ್ಲಿ 89 ಲೋಕಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದ್ದು, ಚುನಾವಣಾ ಆಯೋಗ ನಾಳೆ ಅಧಿಸೂಚನೆ ಹೊರಡಿಸಲಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಚುನಾವಣಾ ಅಕ್ರಮ ; ಸಾರ್ವಜನಿಕರು ದೂರು ಸಲ್ಲಿಸಲು ಆಯೋಗದಿಂದ ಸಿ-ವಿಜಿಲ್ ಆಪ್ ಅಭಿವೃದ್ಧಿ
ಸುದ್ದಿದಿನ ಡೆಸ್ಕ್ : 18ನೇ ಲೋಕಸಭೆಗೆ ಸದಸ್ಯರನ್ನು ಆಯ್ಕೆ ಮಾಡಲು ನಡೆಯಲಿರುವ ಸಾರ್ವತ್ರಿಕ ಚುನಾವಣೆಗೆ ಭಾರತ ಚುನಾವಣಾ ಆಯೋಗ, ಸಕಲ ಸಿದ್ಧತೆಯೊಂದಿಗೆ ಸಜ್ಜಾಗಿದೆ.
ದೇಶದಲ್ಲಿ ಚುನಾವಣೆಗಳನ್ನು ಪಾರದರ್ಶಕವಾಗಿ ಹಾಗೂ ಅತ್ಯಂತ ವಿಶ್ವಾಸಾರ್ಹ ರೀತಿಯಲ್ಲಿ ನಡೆಸುವ ಸಂಕಲ್ಪದೊಂದಿಗೆ ಚುನಾವಣಾ ಆಯೋಗ, ಸಮಸ್ತ ಚುನಾವಣಾ ಪ್ರಕ್ರಿಯೆಗಳನ್ನು ಸುಗಮಗೊಳಿಸಲು ತಂತ್ರಜ್ಞಾನದ ನೆರವನ್ನು ಬಳಸಿಕೊಳ್ಳುತ್ತಿದೆ. ಈ ನಿಟ್ಟಿನಲ್ಲಿ ಮತದಾರರು, ಚುನಾವಣಾ ಸಿಬ್ಬಂದಿ ಹಾಗೂ ಆಯೋಗಕ್ಕೆ ನೆರವಾಗುವ ಹಲವು ಆಪ್ಗಳನ್ನು ಚುನಾವಣಾ ಆಯೋಗ ಅಭಿವೃದ್ಧಿಪಡಿಸಿದೆ.
ಈ ಪೈಕಿ ಇಂದು ಸಿ-ವಿಜಿಲ್ ಆಪ್ ಬಗ್ಗೆ ಮಾಹಿತಿ.
ದೇಶದಲ್ಲಿ ಚುನಾವಣೆಗಳ ವೇಳೆ ನಡೆಯುವ ಅಕ್ರಮಗಳು, ಮಾದರಿ ನೀತಿ ಸಂಹಿತೆಯ ಉಲ್ಲಂಘನೆ ಪ್ರಕರಣಗಳ ಮೇಲೆ ಕಣ್ಣಿಡುವುದು ಕೇವಲ ಚುನಾವಣಾ ಸಿಬ್ಬಂದಿಯ ಕೆಲಸವಲ್ಲ. ಇದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವೂ ಹೌದು. ಹಾಗಾಗಿ ಚುನಾವಣಾ ಅಕ್ರಮಗಳ ಬಗ್ಗೆ ಸಾರ್ವಜನಿಕರು ಆಯೋಗಕ್ಕೆ ದೂರು ತಲುಪಿಸಲು ಭಾರತ ಚುನಾವಣಾ ಆಯೋಗ ಸಿ-ವಿಜಿಲ್ ಆಪ್ ಅನ್ನು ಅಭಿವೃದ್ಧಿ ಪಡಿಸಿದೆ.
ದೂರುಗಳನ್ನು ಆನ್ಲೈನ್ ಮೂಲಕ ಆಯೋಗಕ್ಕೆ ರವಾನಿಸಲು ಈ ಆಪ್ ನೆರವಾಗುವುದು. ಯಾವುದೇ ಚುನಾವಣಾ ಅಕ್ರಮಗಳ ಬಗ್ಗೆ ಧ್ವನಿಮುದ್ರಣ, ವಿಡಿಯೋ ಚಿತ್ರದ ತುಣುಕುಗಳು ಮತ್ತು ಫೋಟೊ ಮೊದಲಾದ ದಾಖಲೆಗಳನ್ನು ಸಾರ್ವಜನಿಕರು ಇದರ ಮೂಲಕ ಕಳುಹಿಸಬಹುದು.
ಚುನಾವಣೆಗಳಲ್ಲಿ ರಾಜಕೀಯ ಪಕ್ಷಗಳು, ಅಭ್ಯರ್ಥಿಗಳು ಮಾಡುವ ಖರ್ಚು-ವೆಚ್ಚ, ಮತದಾರರ ಮನವೊಲಿಕೆಗೆ ಆಮಿಷಗಳ ಬಳಕೆ ಮೊದಲಾದ ಅಕ್ರಮಗಳ ಬಗ್ಗೆ ದೂರು ನೀಡಲು ಇದನ್ನು ಬಳಸಬಹುದು. ಒಂದುನೂರು ನಿಮಿಷಗಳಲ್ಲಿ ಚುನಾವಣಾಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳುತ್ತಾರೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಹೇಳಿದ್ದಾರೆ.
ದೇಶದ ಯಾವ ಮೂಲೆಯಲ್ಲೇ ಆಗಲಿ ನಡೆಯುವ ಚುನಾವಣಾ ಅಕ್ರಮ ಅಥವಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಗಳ ಬಗ್ಗೆ ತಾವು ನೀಡಿದ ದೂರುಗಳನ್ನು ಆಯೋಗ ಪರಿಗಣಿಸಿದೆಯೇ ಎನ್ನುವ ವಿವರಗಳನ್ನು ಸಹ ಸಾರ್ವಜನಿಕರು ಸಿ-ವಿಜಿಲ್-ಆಪ್ ಮೂಲಕ ವೀಕ್ಷಿಸಬಹುದು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
-
ದಿನದ ಸುದ್ದಿ7 days ago
ಭಾನುವಾರದಂದು ಕಾರ್ಯನಿರ್ವಹಿಸುವಂತೆ ಬ್ಯಾಂಕ್ಗಳಿಗೆ ಆರ್ ಬಿ ಐ ಸೂಚನೆ
-
ದಿನದ ಸುದ್ದಿ6 days ago
ನಾಯಕನ ಹಟ್ಟಿ | ಶ್ರೀಗುರು ತಿಪ್ಪೇರುದ್ರಸ್ವಾಮಿ ರಥೋತ್ಸವಕ್ಕೆ ವಿಶೇಷ ಬಸ್ ಸೌಲಭ್ಯ
-
ದಿನದ ಸುದ್ದಿ7 days ago
ಕಾಂಗ್ರೆಸ್ ಪಕ್ಷದ ಬ್ಯಾಂಕ್ ಖಾತೆಗಳು ಸ್ಥಗಿತ ; ಬಿಜೆಪಿ ಅಧಿಕಾರ ದುರುಪಯೋಗ : ಖರ್ಗೆ ಕಿಡಿ
-
ದಿನದ ಸುದ್ದಿ5 days ago
ಲೋಕಸಭಾ ಚುನಾವಣೆ : ಚುನಾವಣಾ ಚಟುವಟಿಕೆಗಳ ಕುರಿತ ಜಿಲ್ಲಾವಾರು ಮಾಹಿತಿ
-
ದಿನದ ಸುದ್ದಿ5 days ago
ಬೆಂಗಳೂರಿನಲ್ಲಿ ಬಿಜೆಪಿ ನೂತನ ಮಾಧ್ಯಮಕೇಂದ್ರ ಆರಂಭ
-
ದಿನದ ಸುದ್ದಿ5 days ago
ಲೋಕಸಭಾ ಚುನಾವಣೆ | ಹೊಸ ಮತದಾರರೆಷ್ಟು ಗೊತ್ತಾ..?
-
ದಿನದ ಸುದ್ದಿ5 days ago
ವಿಜಯಪುರ ಜಿಲ್ಲಾ ಸಾಹಿತ್ಯ ಸಮ್ಮೇಳನದ ಕವಿಗೋಷ್ಠಿಗೆ ಮೈಬೂಬಸಾಹೇಬ.ವೈ.ಜೆ ಆಯ್ಕೆ
-
ದಿನದ ಸುದ್ದಿ5 days ago
ಕವಿತೆ | ನೆನಪು